ಆಲಮಟ್ಟಿ ಅಣೆಕಟ್ಟೆ 524 ಮೀಟರ್ ಗೆ ಎತ್ತರಿಸುವುದರಿಂದ ಪ್ರವಾಹ ಉಂಟಾಗಲ್ಲ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 519 ಮೀಟರ್‌ ನಿಂದ 524 ಮೀಟರ್‌ ಗೆ ಹೆಚ್ಚಿಸುವುದರಿಂದ ಸಾಂಗ್ಲಿ ಮತ್ತು ಕೊಲ್ಹಾಪುರಗಳಲ್ಲಿ ಪ್ರವಾಹವಾಗುತ್ತದೆ ಎಂಬ ಮಹಾರಾಷ್ಟ್ರದ ಆಕ್ಷೇಪಣೆಗೆ ಯಾವುದೇ ತಾತ್ವಿಕ ಆಧಾರವಿಲ್ಲ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಶುಕ್ರವಾರ ಮಾತನಾಡಿದ ಅವರು, ಆಲಮಟ್ಟಿ ಅಣೆಕಟ್ಟೆ ನಿರ್ಮಾಣಕ್ಕೂ ಮುನ್ನವೇ ಸಾಂಗ್ಲಿ ಭಾಗದಲ್ಲಿ ಪ್ರವಾಹ ಸಂಭವಿಸುತ್ತಿತ್ತು ಎಂಬುದು ದಾಖಲೆಗಳಿಂದ ಸಾಬೀತಾಗಿದೆ.

- Advertisement - 

ಅಣೆಕಟ್ಟೆ ಎತ್ತರ ಹೆಚ್ಚಿಸುವ ಬಗ್ಗೆ ಮಹಾರಾಷ್ಟ್ರ ಸರ್ಕಾರವು ಕೃಷ್ಣಾ ನ್ಯಾಯಾಧೀಕರಣ ಮತ್ತು ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡಿಸಿದ್ದರೂ, ಅವು ತಿರಸ್ಕೃತವಾಗಿವೆ.

ನದಿ ನೀರಿನ ನಮ್ಮ ಹಕ್ಕುಗಳಿಗಾಗಿ ಕರ್ನಾಟಕ ಸದಾ ಹೋರಾಡುತ್ತದೆ ಮತ್ತು ಸೂಕ್ತ ಹಂತಗಳಲ್ಲಿ ತನ್ನ ನಿಲುವು ಸ್ಪಷ್ಟವಾಗಿ ಸ್ಥಾಪಿಸುತ್ತದೆ ಎಂದು ಎಂ.ಬಿ ಪಾಟೀಲ್ ತಿಳಿಸಿದರು.

- Advertisement - 

ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು ಈಗಿರುವ 519.60 ಮೀಟರ್‌ನಿಂದ 524.256 ಮೀ.ಗೆ ಎತ್ತರಿಸುವುದರಿಂದ ಸಾಂಗ್ಲಿ ಮತ್ತು ಕೊಲ್ಲಾಪುರ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗುತ್ತದೆ ಎನ್ನುವ ಮಹಾರಾಷ್ಟ್ರದ ತಕರಾರಿಗೆ ಅರ್ಥವಿಲ್ಲ. ಇಂಥ ವಾದ ಈಗಾಗಲೇ ನ್ಯಾಯಾಧೀಕರಣ, ಸುಪ್ರೀಂ ಕೋರ್ಟ್‌ ಮತ್ತು ಲೋಕಸಭೆಗಳಲ್ಲಿ ತಿರಸ್ಕೃತವಾಗಿದೆ ಎಂದು ಎಂ.ಬಿ.ಪಾಟೀಲ್ ಹೇಳಿದರು. 

ಆಲಮಟ್ಟಿ ಅಣೆಕಟ್ಟೆಯನ್ನು ನಾವು ಕಟ್ಟುವುದಕ್ಕೂ ಮೊದಲೇ ಸಾಂಗ್ಲಿಯಲ್ಲಿ 1964, 1976, 1994 ಮತ್ತು 1997ರಲ್ಲಿ ಭೀಕರ ಪ್ರವಾಹ ಸೃಷ್ಟಿಯಾಗಿತ್ತು. ಸುಪ್ರೀಂ ಕೋರ್ಟ್‌ ಕೂಡ ಅಣೆಕಟ್ಟೆಯ ಎತ್ತರವನ್ನು 524.256 ಮೀ.ಗೆ ನಾವು ಏರಿಸಬಹುದು ಎಂದು 2000ನೇ ಇಸವಿಯಲ್ಲೇ ಹೇಳಿದೆ.

ಇದಾದ ಮೇಲೂ ಮಹಾರಾಷ್ಟ್ರವು ನಮಗೆ ವಿರುದ್ಧವಾಗಿ 2005ರಲ್ಲಿ ನ್ಯಾಯಾಧೀಕರಣದ ಮೋರೆ ಹೋಯಿತು. ಆದರೆ ಅದರ ಮಧ್ಯಾಂತರ ಮನವಿಯು ಅಲ್ಲೂ ತಿರಸ್ಕೃತಗೊಂಡಿದೆ ಎಂದರು.

ಆಲಮಟ್ಟಿ ಅಣೆಕಟ್ಟೆಯ ಕಾರಣದಿಂದಾಗಿಯೇ ಮಹಾರಾಷ್ಟ್ರದ ಸಾಂಗ್ಲಿ ಮತ್ತು ಕೊಲ್ಲಾಪುರ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗುತ್ತದೆ ಎಂಬ ವಾದವನ್ನು ನ್ಯಾಯಮಂಡಳಿಯು ಪುರಸ್ಕರಿಸಿಲ್ಲ. ಈ ಸಂಬಂಧವಾಗಿ ನ್ಯಾಯಾಧೀಕರಣವು 2010 ಮತ್ತು 2013ರಲ್ಲಿ ಕೂಡ ವಿಸ್ತೃತ ವರದಿ ನೀಡಿದೆ. ಈ ವಿಚಾರದಲ್ಲಿ ಅದು ಹಿಪ್ಪರಗಿ ಜಲಾಶಯವನ್ನೂ ಪರಿಗಣಿಸಿದೆ.

ಜತೆಗೆ, ಕೃಷ್ಣಾ ನೀರು ಹಂಚಿಕೆ ಸಂಬಂಧ ರಚಿಸಲಾದ ಎರಡನೆಯ ನ್ಯಾಯಾಧೀಕರಣವು ನೀಡಿರುವ ತೀರ್ಪನ್ನು ಇದುವರೆಗೂ ಯಾವ ರಾಜ್ಯಗಳೂ ಪ್ರಶ್ನಿಸಿಲ್ಲ. ಹೀಗಿರುವಾಗ, ಈಗ ಇದ್ದಕ್ಕಿದ್ದಂತೆ ತಕರಾರು ತೆಗೆಯುವುದರ ಹಿಂದಿನ ಉದ್ದೇಶ ಯಾರಿಗಾದರೂ ಅರ್ಥವಾಗುತ್ತದೆ” ಎಂದು ಟೀಕಿಸಿದರು.

ಆಲಮಟ್ಟಿ ಅಣೆಕಟ್ಟೆಯ ಎತ್ತರ ಹೆಚ್ಚಿಸಿದರೆ ತನಗೆ ನೀರು ಬರುವುದಿಲ್ಲ ಎಂದು ಆಂಧ್ರಪ್ರದೇಶ ಕೂಡ (ವಿಭಜನೆಗೂ ಮುನ್ನ) ಆಕ್ಷೇಪಣೆ ತೆಗೆದಿತ್ತು. ಆದರೆ, ಅದರ ವಾದ ಕೂಡ ಬಿದ್ದು ಹೋಗಿದೆ. ಮಹಾರಾಷ್ಟ್ರವು ಈಗ ನಾವು ಅಣೆಕಟ್ಟೆಯ ಎತ್ತರಕ್ಕೆ ಮುಂದಾಗಿರುವುದನ್ನು ಮರುಪರಿಶೀಲಿಸಲು ಆಗ್ರಹಿಸಿರುವುದು ರಾಜಕೀಯ ದುರುದ್ದೇಶದಿಂದ ಕೂಡಿದೆ. ಐದು ವರ್ಷಗಳ ಕಾಲ ನೀರಾವರಿ ಸಚಿವನಾಗಿದ್ದ ನನಗೆ ಇದರ ಬಗ್ಗೆ ಸ್ಪಷ್ಟ ತಿಳಿವಳಿಕೆ ಇದೆ ಎಂದು ಹೇಳಿದ್ದಾರೆ.

ಸಾಂಗ್ಲಿ ಜಿಲ್ಲೆಯಲ್ಲಿ ಜಲಾನಯನ ಪ್ರದೇಶಗಳು ವಿಪರೀತ ಒತ್ತುವರಿಯಾಗಿವೆ. ಇದಕ್ಕೆ ಸಂಬಂಧಿಸಿದ ವರದಿ ನನ್ನ ಬಳಿ ಇದೆ. ಅಲ್ಲಿನ ಸರ್ಕಾರ ಈ ಸಮಸ್ಯೆಯನ್ನು ಬಗೆಹರಿಸುವ ಕಡೆಗೆ ಗಮನ ಕೊಡಬೇಕು. ಅದನ್ನು ಬಿಟ್ಟು ನಮಗೆ ಅಡ್ಡಗಾಲು ಹಾಕಬಾರದು.

ನನ್ನಲ್ಲಿರುವ ದಾಖಲೆಗಳನ್ನು ನಾನು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಅವರಿಗೂ ಕೊಡುತ್ತೇನೆ. ನಾವು ಇದಕ್ಕೆ ವಿವರವಾಗಿ ತಕ್ಕ ಉತ್ತರ ಕೊಡುತ್ತೇವೆ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

 

 

 

Share This Article
error: Content is protected !!
";