ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಬುಧವಾರ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂದು ಹೇಳಿದ್ದರು. ಇದೀಗ ಮತ್ತೊಬ್ಬ ಸ್ವಾಮೀಜಿ ಡಿಕೆ ಶಿವಕುಮಾರ್ ಬೆನ್ನಿಗೆ ನಿಂತು ಸಿದ್ದರಾಮಯ್ಯ ಆಡಿದ ಮಾತಿನಂತೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಬೇಕು ಎಂದು ಸ್ವಾಮೀಜಿ ಒತ್ತಾಯಿಸಿದ್ದಾರೆ.
ದೇಗುಲಹಳ್ಳಿ ಮಡಿವಾಳೇಶ್ವರ ಮಠದ ವೀರೇಶ್ವರ ಸ್ವಾಮೀಜಿ ಅವರು ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ಗೆ ಸಿದ್ದರಾಮಯ್ಯ ಅವರು ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಒತ್ತಾಯಿಸಿದ್ದಾರೆ.
ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಮೊದಲ ಎರಡೂವರೆ ವರ್ಷಗಳ ಅವಧಿಗೆ ಸಹಕಾರ ನೀಡಿದ್ದಾರೆ ಎಂಬುದನ್ನು ಸ್ವಾಮೀಜಿ ಸ್ಮರಿಸಿದ್ದಾರೆ. ಸ್ವಇಚ್ಛೆಯಿಂದ ಸ್ಥಾನ ತ್ಯಾಗ ಮಾಡಿದರೆ ಸಾರ್ವಜನಿಕರಲ್ಲಿ ಉತ್ತಮ ಮನೋಭಾವ ಮೂಡುತ್ತದೆ.
ಇಲ್ಲದಿದ್ದರೆ ಅವರನ್ನು ‘ಭ್ರಷ್ಟ ಸಿದ್ದರಾಮಯ್ಯ’ ಎಂದು ಟೀಕಿಸುವ ಸಾಧ್ಯತೆ ಇದೆ ಎಂದು ಸ್ವಾಮೀಜಿ ಎಚ್ಚರಿಸಿದ್ದಾರೆ. ಮುಂದುವರೆದು ಮಾತನಾಡಿರುವ ಸ್ವಾಮೀಜಿ, ಸಿದ್ದರಾಮಯ್ಯ ‘ಮೊಂಡು ಮನುಷ್ಯ’. ಅವರು ಹಟ ಬಿಡಬೇಕೆಂದು ಸ್ವಾಮೀಜಿ ಸಲಹೆ ನೀಡಿದ್ದಾರೆ. ಅಧಿಕಾರ ಹಸ್ತಾಂತರಕ್ಕೆ ಒಪ್ಪದಿದ್ದರೆ, ಸರ್ಕಾರ ಪತನಗೊಳ್ಳುವ ಸಾಧ್ಯತೆ ಇದೆ ಎಂದು ಸ್ವಾಮೀಜಿ ಎಚ್ಚರಿಸಿದ್ದಲ್ಲದೆ ಕಳವಳ ವ್ಯಕ್ತಪಡಿಸಿದ್ದಾರೆ.

