ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ಮಿಂಚಿನ ಕಾರ್ಯಾಚರಣೆ ಮಾಡಿ ವ್ಹೀಲಿಂಗ್ ಮಾಡಿದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಧ್ಯರಾತ್ರಿ ನಡುರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ವ್ಹೀಲಿಂಗ್ ಮಾಡಿದ ಪ್ರಕರಣದ 11 ಆರೋಪಿಗಳನ್ನ ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಾದ ನಯೀಂ ಪಾಶಾ, ಅರಾಫತ್, ಸಾಹಿಲ್ ಹುಸೈನ್, ನಜ್ಮತ್, ಅದ್ನಾನ್ ಪಾಶಾ, ನಿಯಾಮತುಲ್ಲಾ ಸೇರಿದಂತೆ ಒಟ್ಟು 11 ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳ ಜೊತೆಗೆ 7 ದ್ವಿಚಕ್ರ ವಾಹನಗಳನ್ನ ಜಪ್ತಿ ಮಾಡಲಾಗಿದೆ ಎಂದು ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ಡಿ.ದೇವರಾಜ್ ತಿಳಿಸಿದ್ದಾರೆ.
ರೀಲ್ಸ್ ಕ್ರೇಜ್ಗಾಗಿ ಫೆಬ್ರವರಿ 13ರಂದು ಮಾರಕಾಸ್ತ್ರ ಹಿಡಿದು, ತ್ರಿಬಲ್ ರೈಡ್, ವ್ಹೀಲಿಂಗ್ ಮಾಡುತ್ತಾ ಕೆ.ಜಿ ಹಳ್ಳಿಯಿಂದ, ಡಿ.ಜೆ ಹಳ್ಳಿ, ರಾಮಮೂರ್ತಿ ನಗರ ಮಾರ್ಗವಾಗಿ ಹೊಸಕೋಟೆ ಟೋಲ್ವರೆಗೂ ಆರೋಪಿಗಳು ಹೋಗಿ ಕೆ.ಜಿ ಹಳ್ಳಿಗೆ ವಾಪಸಾಗಿದ್ದರು.
ಪೂರ್ವ ವಿಭಾಗದಲ್ಲಿ ಪೊಲೀಸರ ಬಿಗಿ ಬಂದೋಬಸ್ತ್ ಕಲ್ಪಿಸಿದ್ದರ ಮಧ್ಯೆಯೂ ಕಿಡಿಗೇಡಿಗಳ ಕೃತ್ಯವನ್ನ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಗಂಭೀರವಾಗಿ ಪರಿಗಣಿಸಿದ್ದರು.
ಆರೋಪಿಗಳ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಡಿ.ಜೆ.ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಸದ್ಯ 11 ಆರೋಪಿಗಳನ್ನ ಪತ್ತೆಹಚ್ಚಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಡುರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ವ್ಹೀಲಿಂಗ್ ಮಾಡಿರುವ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ, ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸರಿಗೆ ಸಾರ್ವಜನಿಕರು ಆಗ್ರಹಿಸಿದ್ದರು.