ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಅರ್ಜಿ ವಜಾಗೊಂಡಿದೆ.
ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನ ಮಂಗಳವಾರ ಹೈಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದ್ದು, ಹಲವು ದಿನಗಳಿಂದ ತಲೆಮರೆಸಿಕೊಂಡಿರುವ ಬೈರತಿ ಬಸವರಾಜ್ಗೆ ಬಂಧನದ ಭೀತಿ ಎದುರಾಗಿದೆ. ಇದೀಗ ಜಾಮೀನು ಅರ್ಜಿ ವಜಾಗೊಂಡಿರುವುದರಿಂದ ಯಾವುದೇ ಸಂದರ್ಭದಲ್ಲೂ ಬಂಧನವಾಗಬಹುದಾಗಿದೆ.
ಅವರು ವಿದೇಶಕ್ಕೆ ಪರಾರಿಯಾಗುವ ಶಂಕೆ ಹಿನ್ನೆಲೆಯಲ್ಲಿ ಅವರ ವಿರುದ್ಧ ‘ಲುಕ್ಔಟ್’ ನೋಟಿಸ್ ಜಾರಿಯಲ್ಲಿದೆ. ಸಿಐಡಿ ಪೊಲೀಸರು ಹೊರರಾಜ್ಯಗಳ ಪೊಲೀಸರ ಜತೆಗೂ ಸಂಪರ್ಕ ಸಾಧಿಸಿದ್ದು, ಅವರ ಬಂಧನಕ್ಕಾಗಿ ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದರಿಂದ ಯಾವುದೇ ಕ್ಷಣದಲ್ಲಿ ಶಾಸಕರನ್ನು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಬೆಂಗಳೂರಿನ ಹಲಸೂರಿನಲ್ಲಿ ಕಳೆದ ವರ್ಷ ಜುಲೈ 15ರಂದು ನಡೆದ ರೌಡಿ ಬಿಕ್ಲು ಶಿವನ ಕೊಲೆ ಪ್ರಕರಣದ ಪ್ರಮುಖ ಆರೋಪಿ ರೌಡಿ ಜಗದೀಶ್ ಅಲಿಯಾಸ್ ಜಗ್ಗನೊಂದಿಗೆ ಶಾಸಕ ಬಸವರಾಜ್ಗೆ ನೇರ ಸಂಪರ್ಕವಿದೆ ಎನ್ನಲಾಗಿದೆ.
ಬಿಕ್ಲು ಶಿವನ ಹತ್ಯೆಗೂ ಮುನ್ನ ಹತ್ತಾರು ಬಾರಿ ಭೇಟಿ ಮಾಡಿದ್ದಾರೆ. ಶಾಸಕರ ವಿರುದ್ಧ ಕೆಲವು ಪ್ರಮುಖ ಸಾಕ್ಷ್ಯಾಧಾರಗಳು ಲಭ್ಯವಾಗಿದ್ದು, ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕಿದೆ ಎಂದು ಸಿಐಡಿ ಮೂಲಗಳು ಹೇಳಿವೆ.

