ಚಂದ್ರವಳ್ಳಿ ನ್ಯೂಸ್, ರಾಯಚೂರು:
14ನೇ ಹಣಕಾಸಿನ ಆಯೋಗದಿಂದ 15 ನೇ ಹಣಕಾಸಿನ ಆಯೋಗಕ್ಕೆ ಹೋಲಿಸಿದರೆ, ರಾಜ್ಯಕ್ಕೆ ಅನುದಾನ ನೀಡಿಕೆಯಲ್ಲಿ ಸುಮಾರು 80 ಸಾವಿರ ಕೋಟಿಗಳ ನಷ್ಟವಾಗಿದೆ. ಈ ಬಗ್ಗೆ ಯಾವುದೇ ಬಿಜೆಪಿ ಸಂಸದರೂ ಧ್ವನಿ ಎತ್ತುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ರಾಯಚೂರಿನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರು ಪ್ರದಾನಿ ಮೋದಿಯವರೊಂದಿಗೆ ನಿಕಟಸಂಪರ್ಕ ಹೊಂದಿರುವ ಪ್ರಭಾವಿ ಸಚಿವ ಎಂದು ಹೇಳಲಾಗುತ್ತದೆ. 11495 ಕೋಟಿ ರೂ.ಗಳನ್ನು ಹಣಕಾಸಿನ ಆಯೋಗದಲ್ಲಿ ವಿಶೇಷ ಅನುದಾನ ನೀಡಲು ಸಮ್ಮತಿ ನೀಡಲಾಗಿದ್ದರೂ, ಕೇಂದ್ರ ಸರ್ಕಾರ ಈ ಅನುದಾನವನ್ನು ರಾಜ್ಯಕ್ಕೆ ಬಿಡುಗಡೆ ಮಾಡಲು ಅವರು ಯಾವುದೇ ಸಹಾಯ ಮಾಡಿಲ್ಲ. ಕರ್ನಾಟಕದ ಬಗ್ಗೆ ಮಾತನಾಡಲು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರಿಗೆ ಯಾವುದೇ ನೈತಿಕತೆ ಇಲ್ಲ. ರಾಜ್ಯಕ್ಕೆ 11495 ಕೋಟಿ ರೂ. ಇನ್ನೂ ಬಿಡುಗಡೆಯಾಗಿಲ್ಲ ಎಂದು ಆರೋಪಿಸಿದರು.
ಕಲ್ಯಾಣ ಕರ್ನಾಟಕಕ್ಕೆ ಕೇಂದ್ರದ ವಿಶೇಷ ಅನುದಾನ ಬಿಡುಗಡೆಗೆ ಒತ್ತಾಯ-ದೆಹಲಿ ಪ್ರವಾಸದ ವಿವರಗಳನ್ನು ಪತ್ರಕರ್ತರಿಗೆ ತಿಳಿಸುತ್ತಾ, ರಾಷ್ಟ್ರಪತಿಗಳ ಅಂಗಳಕ್ಕೆ ಹೋಗಿರುವ ಹಲವು ವಿಧೇಯಕಗಳ ಬಗ್ಗೆ ವಿವರಣೆ ನೀಡಲು ರಾಷ್ಟ್ರಪತಿಗಳನ್ನು ಭೇಟಿಯಾಗುವ ಸಮಯ ಕೋರಲಾಗಿದೆ. 16 ನೇ ಹಣಕಾಸಿನ ಆಯೋಗಕ್ಕೆ ಕರ್ನಾಟಕಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಲಾಗಿತ್ತು.
ಈ ಬಗ್ಗೆ ಚರ್ಚಿಸಲು ಪ್ರಧಾನಿಯವರನ್ನು, ಹಣಕಾಸಿನ ಸಚಿವರನ್ನು ಭೇಟಿ ಮಾಡುವ ಸಾಧ್ಯತೆಯಿದೆ. ಕಲ್ಯಾಣ ಕರ್ನಾಟಕ ಭಾಗಕ್ಕೆ ರಾಜ್ಯಸರ್ಕಾರ 5 ಸಾವಿರ ಕೋಟಿಗಳ ವಿಶೇಷ ಅನುದಾನವನ್ನು ಪ್ರತಿವರ್ಷ ನೀಡುತ್ತಿದ್ದು, ಇದೇ ರೀತಿ, ಈ ಭಾಗದ ಅಭಿವೃದ್ಧಿಗೆ ಕೇಂದ್ರ ಸರ್ಕಾರವು ಅನುದಾನ ನೀಡಬೇಕೆಂದು ಒತ್ತಾಯಿಸಲಾಗಿದೆ. ಈ ಭಾಗಕ್ಕೆ ಪ್ರತ್ಯೇಕ ಸಚಿವಾಲಯ ಮಾಡುವ ವಿಚಾರವನ್ನು ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಶಿಕ್ಷಕರ ನೇಮಕಾತಿ-
ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ ಕುಸಿಯಲು ಶಿಕ್ಷಕರ ಕೊರತೆ ಕಾರಣವಾಗಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಹೊಸ ಶಿಕ್ಷಕರ ನೇಮಕಾತಿಗೆ ಈಗಾಗಲೇ ಆದೇಶ ನೀಡಲಾಗಿದೆ. ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಫಲಿತಾಂಶ ಬರಲು ಸರ್ಕಾರ ಎಲ್ಲ ಪ್ರಯತ್ನಗಳನ್ನು ಕೈಗೊಳ್ಳಲಿದೆ ಎಂದರು.
ಸಚಿವ ಎಚ್.ಕೆ.ಪಾಟೀಲ್ ಪತ್ರ:
ರಾಜ್ಯದಲ್ಲಿ ನಡೆದ ಅಕ್ರಮ ಗಣಿಗಾರಿಕೆಯ ಬಗ್ಗೆ ಸಚಿವ ಎಚ್.ಕೆ.ಪಾಟೀಲ್ ಮುಖ್ಯಮಂತ್ರಿಗಳಿಗೆ ಬರೆದ ಪತ್ರದ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಅವರು, ಅಕ್ರಮ ಗಣಿಗಾರಿಕೆ ಪ್ರಕರಣಗಳು ಹಿಂದಿನ ಅವಧಿಯಲ್ಲಿ ನಡೆದಿದ್ದು ಈ ಬಗ್ಗೆ ತ್ವರಿತ ತನಿಖೆ ನಡೆಸಲು ವಿಶೇಷ ಕೋರ್ಟ್ ರಚಿಸಿ, ಗಣಿಗಾರಿಕೆಯಲ್ಲಿರುವ ಬಾಕಿ ವಸೂಲಾತಿಗೆ ಶೀಘ್ರ ಕ್ರಮ ತೆಗೆದುಕೊಳ್ಳಲು ಪತ್ರದಲ್ಲಿ ತಿಳಿಸಿದ್ದಾರೆ.
ಸಚಿವ ಸಂಪುಟದಲ್ಲಿ ಸದರಿ ವಿಷಯವನ್ನು ಚರ್ಚಿಸಿ ವಿಶೇಷ ನ್ಯಾಯಾಲಯ ರಚಿಸಬೇಕೆಂಬ ಉದ್ದೇಶದಿಂದ ಸಚಿವರು ಪತ್ರ ಬರೆದಿದ್ದಾರೆ. ಅಂದಿನ ಲೋಕಾಯುಕ್ತ ಸಂತೋಷ್ ಹೆಗಡೆಯವರು ಅಕ್ರಮ ಗಣಿಗಾರಿಕೆ ಬಗ್ಗೆ ವರದಿಯನ್ನೂ ನೀಡಿದ್ದರು. ಈ ವರದಿಯ ಬಗ್ಗೆ ವಿಧಾನಸಭೆಯಲ್ಲಿ ನಾನು ಕೇಳಿದ ಪ್ರಶ್ನೆಗೆ ಸರ್ಕಾರದಿಂದ ಸಮರ್ಪಕ ಉತ್ತರ ಬಂದಿರಲಿಲ್ಲ. ಆಗ ಅಕ್ರಮ ಗಣಿಗಾರಿಕೆ ವಿರುದ್ಧ ಬಳ್ಳಾರಿಯಲ್ಲಿ ಪಾದಯಾತ್ರೆ ನಡೆಸಲಾಗಿತ್ತು ಎಂದರು.
ಕಾಂಗ್ರೆಸ್ ಶಾಸಕ ರಾಜು ಕಾಗೇ ಯವರು ತಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ಪ್ರಾರಂಭವಾಗದಿರುವ ಬಗ್ಗೆ ಅಸಮಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಅವರೊಂದಿಗೆ ಚರ್ಚಿಸಲಾಗುವುದು. ವಿಶೇಷ ಅನುದಾನವನ್ನು ಅಗತ್ಯವಿರುವ ವಿಧಾನಸಭಾ ಕ್ಷೇತ್ರಗಳಿಗೆ ನೀಡಲಾಗುತ್ತದೆ ಎಂದರು.
ಶಾಸಕ ಬೇಳೂರು ಗೋಪಾಲಕೃಷ್ಣ ಅವರು, ವಸತಿ ಸಚಿವರು ರಾಜಿನಾಮೆ ನೀಡಬೇಕು ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಮಾಹಿತಿ ಪಡೆಯುತ್ತೇನೆ. ವಸತಿ ಇಲಾಖೆಯ ವಿಷಯದ ಕುರಿತು ಚರ್ಚಿಸಲು ಶಾಸಕ ಬಿ.ಆರ್.ಪಾಟೀಲ್ ರವರು ಇದೇ 25 ರಂದು ಭೇಟಿಯಾಗುವುದಾಗಿ ತಿಳಿಸಿದ್ದಾರೆ ಎಂದರು.

