ಚಂದ್ರವಳ್ಳಿ ನ್ಯೂಸ್, ತುಮಕೂರು :
ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ನಡೆದಿದ್ದ ಕಲ್ಲು ತೂರಾಟ ಗಲಾಟೆ ಮಾಡಿದವರ ವಿರುದ್ಧ ಪೊಲೀಸರು ಅಗತ್ಯ ಕ್ರಮ ಕೈಗೊಂಡಿದ್ದಾರೆ. ಆದರೆ, ಇಡೀ ಪ್ರಕರಣವನ್ನ ಬಿಜೆಪಿ ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಆರೋಪಿಸಿದರು.
ತುಮಕೂರು ಜಿಲ್ಲಾ ಕೆಡಿಪಿ ಪ್ರಗತಿ ಪರಿಶೀಲನೆ ಸಭೆ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ಉದಯಗಿರಿ ಗಲಾಟೆ ಮಾಡಿದ ಎಲ್ಲರನ್ನೂ ಪೊಲೀಸರು ಬಂಧಿಸಿದ್ದಾರೆ. ಸಮಗ್ರ ತನಿಖೆ ನಡೆಯುತ್ತಿದೆ. ಆದರೆ ಬಿಜೆಪಿಯವರು ಈ ಘಟನೆಯನ್ನು ರಾಜಕೀಯ ಅಸ್ತ್ರವಾಗಿ ಬಳಕೆ ಮಾಡಿಕೊಂಡು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ ಎಂದು ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದರು.
ಉದಯಗಿರಿ ಗಲಾಟೆ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುವ ಬದಲು, ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ನಮಗೆ ಅವಕಾಶಮಾಡಿದರೆ ಒಳ್ಳೆಯದು. ಅದನ್ನು ಬಿಟ್ಟು ರಾಜಕೀಯ ಮಾಡಿದರೆ ಸರಿ ಹೋಗುವುದಿಲ್ಲ ಎಂದು ಗೃಹ ಸಚಿವರು ಎಚ್ಚರಿಸಿದರು.
ರಾಜ್ಯದ ಯಾವುದೇ ಭಾಗದಲ್ಲಿ ಅಕ್ರಮ ಚಟುವಟಿಕೆಗಳು ಕಂಡುಬಂದಾಗ ಕಾನೂನು ಕ್ರಮ ತೆಗೆದುಕೊಳ್ಳಲಾಗಿದೆ. ಇದಕ್ಕೆ ಅನುಮಾನ ಬೇಡ ಎಂದು ಪರಮೇಶ್ವರ್ ತಿಳಿಸಿದರು.
ಕರ್ನಾಟಕ-ಮಹಾರಾಷ್ಟ್ರ ಗಡಿಭಾಗದಲ್ಲಿ ಭಾಷೆ ಆಧಾರದ ಮೇಲೆ ಗಲಾಟೆ ಆಗುತ್ತಿದ್ದು ಮಹಾರಾಷ್ಟ್ರದವರು ಎಚ್ಚರಿಕೆಯಿಂದ ನಡೆದುಕೊಳ್ಳಬೇಕು. ಅದನ್ನು ಹೆಚ್ಚು ಬೆಳೆಯಲು ಬಿಡಬಾರದು. ನಮ್ಮಲ್ಲಿ ಅಂತಹ ಪ್ರಕರಣಗಳು ಆದಾಗ ಕ್ರಮ ತೆಗೆದುಕೊಳ್ಳಲಾಗುತ್ತದೆ.ಮಹಾರಾಷ್ಟ್ರದವರು ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವುದು ಸರಿಯಲ್ಲ ಎಂದು ಗೃಹ ಸಚಿವರು ಎಚ್ಚರಿಸಿದರು.
ಕಾಂಗ್ರೆಸ್ ನಾಯಕರು ದೆಹಲಿ ಪ್ರವಾಸ ಕೈಗೊಳ್ಳುತ್ತಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕೆಲಸಕಾರ್ಯಗಳ ನಿಮಿತ್ತ ಸಚಿವರು, ಶಾಸಕರು ದೆಹಲಿಗೆ ಹೋಗುತ್ತಾರೆ. ನಾನು ಒಂದು ವರ್ಷದ ನಂತರ ದೇಹಲಿಗೆ ಹೋಗಿದ್ದೆ. ಖಾಸಗಿ ಕೆಲಸದ ನಿಮಿತ್ತ ದೆಹಲಿಗೆ ಹೋಗಿರುವುದಾಗಿ ತಿಳಿಸಿದ್ದೆ. ದೆಹಲಿಗೆ ಹೋದಾಗ ಪಕ್ಷದಕಚೇರಿಗೆ ಭೇಟಿ ನೀಡುವುದು ಸಹಜವಾದ ಪ್ರಕ್ರಿಯೆ. ಇದನ್ನು ಬೇರೆ ರೀತಿಯಾಗಿ ಅರ್ಥೈಸಿಕೊಳ್ಳುವುದರಿಂದ ಪ್ರಯೋಜನವಿಲ್ಲಎಂದು ಪರಮೇಶ್ವರ್ ತಿಳಿಸಿದರು.
ಕೊರಟಗೆರೆಯಲ್ಲಿ ಕಾರ್ಯಕರ್ತರೊಂದಿಗೆ ಮಾತನಾಡುವಾಗ ಸಹಜವಾಗಿ ಅನಿಸಿಕೆ ಆಧಾರದ ಮೇಲೆ ಮಾತನಾಡಿದ್ದೇನೆ. ಅದಕ್ಕೆ ಅಷ್ಟೊಂದು ಮಹತ್ವ ಕೊಡುವ ಅಗತ್ಯತೆ ಇಲ್ಲ. ಇದರಿಂದ ಯಾವ ಸಂಚಲನ ಮಾಡಬೇಕಾದ ಅಗತ್ಯವಿಲ್ಲ. ನನ್ನ ರಾಜಕೀಯದ ವಿಚಾರ ಕೊರಟಗೆರೆ ಜನತೆಗೆ ಬಿಟ್ಟಿದ್ದು. ಕೊರಟಗೆರೆ ಜನ ನನ್ನನ್ನು ಆರಿಸಿದ್ದಾರೆ. ಅವರ ಏನು ಆಪೇಕ್ಷೆ ಪಡುತ್ತಾರೋ, ಅದನ್ನು ಮಾತಾಡಿದ್ದೇನೆ ಎಂದು ಅವರು ರಾಜೀನಾಮೆ ಕುರಿತು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿಗಳ ವಿಚಾರ, ಕೆಪಿಸಿಸಿ ಅಧ್ಯಕ್ಷರ ವಿಚಾರದಲ್ಲಿ ಯಾವುದನ್ನು ಬಹಿರಂಗವಾಗಿ ಮಾತನಾಡುವುದಿಲ್ಲ. ನಮ್ಮ ಅನಿಸಿಕೆಗಳನ್ನು ಹೈಕಮಾಂಡ್ ಮುಂದೆ ಹೇಳುವಂತಹದು ನಮ್ಮ ಪಕ್ಷದಲ್ಲಿನ ಪ್ರಕ್ರಿಯೆ.ಇದನ್ನು ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿಗಳು ಮಾಡುತ್ತಾರೆ. ನಾನು ಸೇರಿದಂತೆಎಲ್ಲರೂ ಮಾಡುತ್ತೇವೆಎಂದು ತಿಳಿಸಿದರು.