ಜಾತಿ ಮರು ಸಮೀಕ್ಷೆ ಅಕ್ಟೋಬರ್ ಕೊನೆಗೆ ವರದಿ ಸಲ್ಲಿಸಿ-ಸಿಎಂ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರ ಅಧ್ಯಕ್ಷತೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತಾದ ಪೂರ್ವಭಾವಿ ಸಭೆ ನಡೆಸಿ, ಸಮೀಕ್ಷೆಯ ರೂಪುರೇಷೆಗಳನ್ನು ಸುದೀರ್ಘವಾಗಿ ಚರ್ಚಿಸಲಾಯಿತು. ‌

ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ಸುಮಾರು ಒಂದುವರೆ ಗಂಟೆಗೂ ಹೆಚ್ಚು ಕಾಲ ಮಹತ್ವದ ಸಭೆ ಮಾಡಿದ್ದು, ಜಾತಿ ಜನಗಣತಿ ಮರು ಸಮೀಕ್ಷೆಯ ಬಗ್ಗೆ  ಗಂಭೀರ ಚರ್ಚೆ ಮಾಡಿದ್ದಾರೆ. ಸೆಪ್ಟಂಬರ್ 22 ರಿಂದ ಅಕ್ಟೋಬರ್ 7ರವರೆಗೆ 15 ದಿನಗಳ ಕಾಲ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದ್ದು, ಅಕ್ಟೋಬರ್ ಕೊನೆಯ ಒಳಗಾಗಿ ಸಮೀಕ್ಷೆ ವರದಿಯನ್ನು ಸಲ್ಲಿಸಬೇಕು ಎಂದು ಸಿದ್ದರಾಮಯ್ಯ ಸೂಚಿಸಿದ್ದಾರೆ.

- Advertisement - 

ಇದು ಅಧಿಸೂಚನೆ-
ಮರು ಸಮೀಕ್ಷೆ ಸಂಬಂಧ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜುಲೈ-
24ರ ಗುರುವಾರ ಅಧಿಸೂಚನೆ ಹೊರಡಿಸಲಿದೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ಹೊಸ ಸಮೀಕ್ಷೆ ನಡೆಯಲಿದ್ದು, ಸಮೀಕ್ಷೆ ಮಾದರಿ, ರೂಪರೇಷೆ, ಕಾಲಾವಧಿ ಬಗ್ಗೆ ಪ್ರಕಟವಾಗಲಿದೆ.

 ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹಾಗೂ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮದುಸೂದನ್ ನಾಯಕ್ ಅವರಿಂದ ಮಾಹಿತಿ ಪಡೆದುಕೊಂಡರು.

- Advertisement - 

ಮರು ಜಾತಿಗಣತಿಯಲ್ಲಿ ಯಾವುದೇ ಲೋಪದೋಷವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್ ಸೂಚನೆ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದ ಕೆಲ ಸಚಿವರು, ಶಾಸಕರು ಸೇರಿದಂತೆ ಮಠಾಧೀಶರು, ಪ್ರಬಲ ಸಮುದಾಯಗಳ ವಿರೋಧ ಬೆನ್ನಲ್ಲೇ ಕಾಂಗ್ರೆಸ್​ ಹೈಕಮಾಂಡ್ ಮರು ಜಾತಿ ಗಣತಿ ವರದಿ ಮಾಡುವಂತೆ ಸಿಎಂ ಸಿದ್ದರಾಮಯ್ಯಗೆ ಸೂಚನೆ ನೀಡಿತ್ತು. ಇದರ ಬೆನ್ನಲ್ಲೇ ಈಗ ಸಿದ್ದರಾಮಯ್ಯ ಮರು ಜಾತಿ ಗಣತಿಗೆ ಚಾಲನೆ ಕೊಟ್ಟಿದ್ದು, ವೈಜ್ಞಾನಿಕವಾಗಿ ಜಾತಿಗಣತಿ ಮಾಡುವಂತೆ ಅಧಿಕಾರಿಗಳಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಮಾನವ ಸಂಪನ್ಮೂಲ ಜೊತೆಗೆ ಆಧುನಿಕ ತಂತ್ರಜ್ಞಾನ ಬಳಕೆ ಸೂಚನೆ ನೀಡಿರುವ ಸಿಎಂ, ಲೋಪದೋಷ ಆಗದಂತೆ ಈ ಬಗ್ಗೆ ಕ್ರಮ ವಹಿಸಲು ತಿಳಿಸಿದ್ದಾರೆ.

ದೇಶದಲ್ಲೇ ಮಾದರಿಯಾಗಬೇಕು-
ತರಬೇತಿ ಸೇರಿದಂತೆ ಸಮೀಕ್ಷೆಗೆ ಪೂರ್ವಭಾವಿ ಸಿದ್ಧತೆಗಳನ್ನು ಈಗಲೇ ಆರಂಭಿಸಬೇಕು. ಸಮೀಕ್ಷೆ ಅತ್ಯಂತ ಸಮರ್ಪಕವಾಗಿ ನಡೆಯಬೇಕು. ಸಮೀಕ್ಷೆ ಕುರಿತು ಯಾವುದೇ ದೂರುಗಳಿಗೆ ಅಸ್ಪದವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಮೀಕ್ಷೆಯಿಂದ ಯಾರೂ ಹೊರಗುಳಿಯದಂತೆ ಖಾತ್ರಿಪಡಿಸಬೇಕೆಂದು ಸಿಎಂ ಸಿದ್ದರಾಮಯ್ಯ
ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಾತಿ ತಾರತಮ್ಯ ನಿವಾರಣೆ ಮಾಡುವುದು ಗಣತಿಯ ಮುಖ್ಯ ಉದ್ದೇಶ ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರತಿಯೊಬ್ಬರ ಆರ್ಥಿಕ ಪರಿಸ್ಥಿತಿ, ಜಮೀನು ಇದೆಯೇ ಇಲ್ಲವೇ ಸೇರಿದಂತೆ ಸಮಗ್ರ ಸಮೀಕ್ಷೆ ನಡೆಯಬೇಕು. ಈ ಸಮೀಕ್ಷೆ ವರದಿ ಬಜೆಟ್ ಸಿದ್ಧಪಡಿಸುವ ವೇಳೆ ಆಧಾರವಾಗಲಿದೆ. ಈ ಬಾರಿಯ ಸಮೀಕ್ಷೆ ದೇಶದಲ್ಲೇ ಮಾದರಿ ಸಮೀಕ್ಷೆಯಾಗಬೇಕು ಎಂದು ಹೇಳಿದರು.

ಮುಖ್ಯಾಂಶಗಳು-
ಹಿಂದುಳಿದ ವರ್ಗಗಳ ಆಯೋಗ
, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ರಾಜ್ಯದ  7 ಕೋಟಿ ಜನರ ಸಮೀಕ್ಷೆ ನಡೆಸಲಾಗುವುದು.

ಜಾತಿ ತಾರತಮ್ಯ ನಿವಾರಣೆ ಮಾಡುವುದು ಗಣತಿಯ ಮುಖ್ಯ ಉದ್ದೇಶ. ರಾಜ್ಯದ ಪ್ರತಿಯೊಬ್ಬರ ಆರ್ಥಿಕ ಪರಿಸ್ಥಿತಿ, ಜಮೀನು ಇದೆಯೇ ಇಲ್ಲವೇ ಸೇರಿದಂತೆ ಸಮಗ್ರ ಸಮೀಕ್ಷೆ ನಡೆಯಬೇಕು.

ಈ ಸಮೀಕ್ಷೆ ವರದಿ ಮುಂದಿನ ಬಜೆಟ್ ಸಿದ್ಧಪಡಿಸುವ ಸಂದರ್ಭದಲ್ಲಿ ಆಧಾರವಾಗಲಿದ್ದು, ಈ ಬಾರಿಯ ಸಮೀಕ್ಷೆ ದೇಶದಲ್ಲೇ ಮಾದರಿ ಸಮೀಕ್ಷೆಯಾಗಬೇಕು.

ಕಾಂತರಾಜು ಆಯೋಗ 54 ಪ್ರಶ್ನೆಗಳನ್ನು ಸಿದ್ದಪಡಿಸಿ manual ಆಗಿ ಈ ಹಿಂದೆ ಸಮೀಕ್ಷೆ ನಡೆಸಿತ್ತು. ಈ ಬಾರಿಯ ಸಮೀಕ್ಷೆಯಲ್ಲಿ ಇನ್ನಷ್ಟು ಅಂಶಗಳನ್ನು ಸೇರಿಸುವ ಕುರಿತು ಪರಿಶೀಲನೆ ಮಾಡಿ ಮೊಬೈಲ್ ಆಪ್ ಬಳಸಿಕೊಂಡು ಸಮೀಕ್ಷೆ ನಡೆಸಲಾಗುವುದು.

ತೆಲಂಗಾಣದಲ್ಲಿ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಕುರಿತು ಅಧ್ಯಯನ ನಡೆಸಲು ಸೂಚನೆ. ಸಮೀಕ್ಷೆ ಕಾರ್ಯದ ಮೇಲುಸ್ತುವಾರಿಗೆ ಉನ್ನತಮಟ್ಟದ ಸಮಿತಿ ರಚಿಸಲು ತಿರ್ಮಾನ. ಸಮೀಕ್ಷೆ ವೈಜ್ಞಾನಿಕವಾಗಿ ಮತ್ತು ಪಾರದರ್ಶಕವಾಗಿ ನಡೆಯಬೇಕು.

ಸಮೀಕ್ಷೆಯಲ್ಲಿ ಕೇಳಬೇಕಾದ ಪ್ರಶ್ನೆಗಳನ್ನು ಅಂತಿಮಗೊಳಿಸಲು ತಜ್ಞರ ಸಮಿತಿಯ ನೆರವು ಪಡೆಯಬೇಕು. ಈ ಬಾರಿ ಸಮೀಕ್ಷೆ ಕಾರ್ಯಕ್ಕೆ 1.65 ಲಕ್ಷ ಗಣತಿದಾರರು ಸೇರಿದಂತೆ ಮಾನವ ಸಂಪನ್ಮೂಲ ಅವಶ್ಯಕತೆ ಇದ್ದು, ಸಮೀಕ್ಷೆ ಕಾರ್ಯಕ್ಕೆ ಶಿಕ್ಷಕರ ಸೇವೆಯೊಂದಿಗೆ ಇತರ ಇಲಾಖೆಗಳ ಸಿಬ್ಬಂದಿಗಳನ್ನು ಸಹ ಬಳಸಿಕೊಳ್ಳಲಾಗುವುದು.
ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಸಮೀಕ್ಷೆ ಕಾರ್ಯ ಯಶಸ್ವಿಗೊಳಿಸಬೇಕು.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಮೀಕ್ಷೆ ಕಾರ್ಯವನ್ನು ಯಶಸ್ವಿಗೊಳಿಸಲು ಯೋಜನೆ ರೂಪಿಸಿ ಕಾರ್ಯನಿರ್ವಹಿಸಬೇಕು.

ಹಿಂದುಳಿದ ವರ್ಗಗಳ ಇಲಾಖೆ ಸಚಿವರಾದ ಶಿವರಾಜ ತಂಗಡಗಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂಧನ ಆರ್ ನಾಯ್ಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Share This Article
error: Content is protected !!
";