ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕುರ್ಚಿ ಉಳಿಸಿಕೊಳ್ಳಲು ಆಪ್ತ ಶಾಸಕರನ್ನು ವಿದೇಶ ಪ್ರವಾಸಕ್ಕೆ ಕಳಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಕೈ ಶಾಸಕರ ವಿದೇಶ ಪ್ರವಾಸ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು.
ಕಾಂಗ್ರೆಸ್ ಸರ್ಕಾರದ ಸಿಎ ಅವರ ಆದ್ಯತೆ ಏನು ಅಂತಾ ಇದರಲ್ಲೇ ಗೊತ್ತಾಗುತ್ತದೆ. ಸರ್ಕಾರ ಬಂದ ಬಳಿಕ ಅನುದಾನಕ್ಕೆ ಬೇಡಿಕೆ ಇಟ್ಟಿದ್ದರು. ಗಂಗಕಲ್ಯಾಣ ಹಣವಿಲ್ಲ, ಆಸ್ಪತ್ರೆಗೆ ಔಷಧಿ ರವಾನೆ ಮಾಡಿಲ್ಲ, ಮನೆ ಕಟ್ಟಲು ಸಾಧ್ಯವಾಗಿಲ್ಲ. ಇಂತಹ ಲಜ್ಜೆಗೆಟ್ಟ ಸರ್ಕಾರವನ್ನು ರಾಜ್ಯದ ಇತಿಹಾಸದಲ್ಲಿ ನೋಡಿಲ್ಲ ಅಂತಾ ಜನ ಮಾತನಾಡುತ್ತಿದ್ದಾರೆ ಎಂದು ಅವರು ದೂರಿದರು. ಶಾಸಕರ ಪ್ರವಾಸ ಕುರಿತು ಸಿಎಂ ಸಿದ್ದರಾಮಯ್ಯ ಅವರು ಸರ್ಕಾರದಿಂದ ಯಾವುದೇ ಹಣ ಕೊಡುತ್ತಿಲ್ಲ. ಅವರ ಸ್ವಂತ ಖರ್ಚಿನಲ್ಲಿ ಶಾಸಕರು ವಿದೇಶಕ್ಕೆ ಹೋಗುತ್ತಿದ್ದಾರೆ ಎಂದು ಹೇಳಿದ್ದಾರೆ. ಆದರೆ, ತಮ್ಮ ಕುರ್ಚಿ ಉಳಿಸಿಕೊಳ್ಳಲು ತಾವೇ ಅವರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಎಂದು ಕುಟುಕಿದರು.
ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಆಪ್ತ ಕಾಂಗ್ರೆಸ್ ಶಾಸಕರು ರೆಸಾರ್ಟ್ ಬುಕ್ ಮಾಡಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, ಅವರಿಗೆ ಅನುಕೂಲ ಆಗಲಿ ಅಂತ ಬಿಜೆಪಿಯಿಂದ ಬಡಿಗೆ ರೆಡಿ ಮಾಡಿಸಿದ್ದೇವೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ಯಾರಿಗೆ ಹೇಳುತ್ತಾರೆ ಅವರಿಗೆ ಬಡಿಗೆ ಕೊಡುತ್ತೇವೆ. ಒಬ್ಬರಿಗೊಬ್ಬರು ಹೊಡೆದಾಡಿಕೊಳ್ಳಲಿ. ಆ ಹಂತಕ್ಕೆ ಅವರು ಬಂದಿದ್ದಾರೆ. ಮುಂದೆ ಏನಾಗುತ್ತೆ ಕಾದು ನೋಡೋಣ ಎಂದು ಅವರು ಲೇವಡಿ ಮಾಡಿದರು.
ಯತೀಂದ್ರ ಅವರು ದಿನಕ್ಕೊಂದು ಹೇಳಿಕೆ ನೀಡುತ್ತಿರುತ್ತಾರೆ. ನಮ್ಮ ಪಕ್ಷದ ಹೈಕಮಾಂಡ್ ಅವರು ಹೇಳಿದಂತೆ ಕೇಳಿಕೊಂಡು ಹೋಗುತ್ತೇವೆ ಅಂತ ಡಿ.ಕೆ.ಶಿವಕುಮಾರ್ ಅವರೇ ಹೇಳಿದ್ದಾರೆ. ಅವರ ಎಲ್ಲಾ ಮಾತುಗಳಿಗೆ ನಾನು ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ. ಆದರೆ, ಮುಖ್ಯಮಂತ್ರಿಗಳು ತಮ್ಮ ಕುರ್ಚಿ ಉಳಿಸಿಕೊಳ್ಳಲು ರಾಜ್ಯದ ಹಿತಾಸಕ್ತಿ ಬಲಿ ಕೊಡುತ್ತಿರುವುದು ಸತ್ಯ. ಇದನ್ನು ಅಲ್ಲಗಳೆಯಲು ಸಾಧ್ಯವಿಲ್ಲ. ನಮ್ಮದು ನುಡಿದಂತೆ ನಡೆಯುವ ಸರ್ಕಾರ ಎನ್ನುತ್ತ ರಾಜ್ಯದ ಗೌರವ ಹಾಳು ಮಾಡುತ್ತಿದ್ದಾರೆ. ಅಭಿವೃದ್ಧಿ ಏನೂ ಆಗುತ್ತಿಲ್ಲ. ಉದ್ಯೋಗ ಸೃಷ್ಟಿಯಲ್ಲಿ ವಿಫಲರಾಗಿದ್ದಾರೆ. ಎಲ್ಲ ಸಮುದಾಯಗಳಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಜೊತೆಗೆ ತಾವು ಹೊಂದಾಣಿಕೆ ಮಾಡಿಕೊಂಡಿದ್ದೀರಿ ಎಂಬ ಮಾಧ್ಯಮಗಳ ಪ್ರಶ್ನೆಗೆ ಗರಂ ಆದ ವಿಜಯೇಂದ್ರ, ನಮ್ಮ ಕುಟುಂಬದ ಜೊತೆಗೆ ಅವರ ಏನು ಸಂಬಂಧ ಹೊಂದಲು ಸಾಧ್ಯ. ಮೊದಲ ಬಾರಿ ಶಾಸಕನಾಗಿ, ರಾಜ್ಯದ ಅಧ್ಯಕ್ಷನಾಗಿ ಮುಡಾ ಹಗರಣದ ವಿರುದ್ಧ ಮುಖ್ಯಮಂತ್ರಿಗಳ ವಿರುದ್ಧವೇ ತೊಡೆ ತಟ್ಟಿದ್ದೇನೆ. ಬೆಂಗಳೂರಿನಿಂದ ಮೈಸೂರುವರೆಗೆ ಪಾದಯಾತ್ರೆ ಮಾಡಿದ್ದೇನೆ. ಯಾವುದೇ ಭಾವನೆ ಇಟ್ಟುಕೊಳ್ಳದೇ, ನನ್ನ ಆದ್ಯತೆ ಈ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಬೀದಿಗೆ ತರುವುದೇ ಆಗಿದೆ. ಅದು ಮುಖ್ಯಮಂತ್ರಿ ಮತ್ತು ಯಾವುದೇ ಸಚಿವರಾಗಲಿ ಎಂದು ತಿಳಿಸಿದರು.
ಸಾವಿರಾರು ಕೋಟಿ ಹಣ ಎಲ್ಲಿಗೆ ಹೋಗಿದೆ?:
ಗೃಹಲಕ್ಷ್ಮೀ ಯೋಜನೆಯ ಐದು ಸಾವಿರ ಕೋಟಿ ಹಣ ಎಲ್ಲಿಗೆ ಹೋಗಿದೆ? ಯಾವ ರೀತಿ ದುರುಪಯೋಗ ಆಗುತ್ತಿದೆ? ಕೇಂದ್ರ ಸರ್ಕಾರಕ್ಕೆ ಕೆಲವು ನಕಲಿ ದಾಖಲೆ ಕೊಟ್ಟಿದ್ದಾರೆ. ಇದೆಲ್ಲದರ ಬಗ್ಗೆ ಚರ್ಚಿಸುತ್ತೇವೆ. ಹಾಗಾಗಿ, ಯಾವುದೇ ಸಚಿವರ ಬಗ್ಗೆ ಪ್ರೀತಿ ಮತ್ತೊಂದು ಇಲ್ಲ. ತಪ್ಪಿತಸ್ಥರು ಯಾರೇ ಇದ್ದರೂ ಅವರ ವಿರುದ್ಧ ಬೀದಿಗಿಳಿದು ಹೋರಾಡುತ್ತೇವೆ ಎಂದು ವಿಜಯೇಂದ್ರ ಸಮರ್ಥಿಸಿಕೊಂಡರು.
ಗೃಹ ಲಕ್ಷ್ಮೀ ಯೋಜನೆಯ ಐದು ಸಾವಿರ ಕೋಟಿ ಹಣದ ಬಗ್ಗೆ ಮಹೇಶ ಟೆಂಗಿನಕಾಯಿಸದನದಲ್ಲಿ ಪ್ರಶ್ನೆ ಮಾಡಿದ್ದರು. ಬೆಳಗಾವಿ, ಬೆಂಗಳೂರಿನಲ್ಲಿ ನಡೆದ ಸದನದಲ್ಲೂ ಸರಿಯಾದ ಉತ್ತರ ಸಿಕ್ಕಿಲ್ಲ. ಐದು ಸಾವಿರ ಕೋಟಿ ಹಣ ಎಲ್ಲೋಯ್ತು ಎಂಬುದಕ್ಕೆ ಹಣಕಾಸು ಸಚಿವರಾಗಿರುವ ಸಿದ್ದರಾಮಯ್ಯ ಅವರು ಉತ್ತರ ಕೊಡುತ್ತಿಲ್ಲ. ಹಣ ಉಪಯೋಗ ಆಯ್ತಾ? ದುರಪಯೋಗ ಆಯ್ತಾ? ಉತ್ತರ ಕೊಡೊಕೆ ಇನ್ನೂ ಎಷ್ಟು ದಿನ ಬೇಕು? ಇನ್ಯಾವುದೇ ರಾಜ್ಯಕ್ಕೆ ವರ್ಗಾವಣೆ ಮಾಡಿ ತಿಂದಿ ತೇಗಿದ್ದಾರಾ ಅನ್ನುವುದರ ಬಗ್ಗೆಯೂ ಹೇಳಬೇಕು. ಐದು ಸಾವಿರ ಕೋಟಿ ಹಣ ಎಲ್ಲೋಯ್ತು ಎಂಬುದರ ಬಗ್ಗೆ ಸಿಎಂಗೆ ಗೊತ್ತಿಲ್ಲ ಅಂದರೆ ಇದು ಎಂಟನೇ ಅದ್ಭುತ ಎಂದು ವಿಜಯೇಂದ್ರ ವಾಗ್ದಾಳಿ ಮಾಡಿದರು.
ಮೇಲ್ವಿಚಾರಣೆ ಮಾಡಬೇಕು;
ಪ್ರಾದೇಶಿಕ ಅಸಮಾನತೆ ನಿವಾರಣೆ ಸಮಿತಿಯು ಪ್ರೊ.ಎಂ. ಗೋವಿಂದರಾಜ್ ಅಧ್ಯಕ್ಷತೆಯಲ್ಲಿ ರಾಜ್ಯ ಸರ್ಕಾರಕ್ಕೆ ವರದಿ ಕೊಡಲಾಗಿದೆ. ಶೇಕಡಾ 60ರಷ್ಟು ಇದ್ದ ಅಸಮಾನತೆ, ಈಗ ಶೇ. 72.08ಕ್ಕೆ ಏರಿಕೆಯಾಗಿದೆ. ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಮುಖ್ಯಮಂತ್ರಿಗಳೋ ಅಥವಾ ರಾಜ್ಯಕ್ಕೆ ಮುಖ್ಯಮಂತ್ರಿಗಳೋ ಎಂಬ ಪ್ರಶ್ನೆ ಉದ್ಭವಿಸಿದೆ. ಅನುದಾನ ಬಿಡುಗಡೆ ಮಾಡಿದರೆ ಸಾಕಾಗುವುದಿಲ್ಲ. ಯಾವ ರೀತಿ ಬಳಕೆ ಆಗುತ್ತಿದೆ ನೋಡಬೇಕು ಇದಕ್ಕೂ ಸಿಎಂ ಸಿದ್ದರಾಮಯ್ಯ ಅವರು ಉತ್ತರ ಕೊಡಬೇಕು. ಕಿತ್ತೂರು ಮತ್ತು ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಾದೇಶಿಕ ಅಸಮಾನತೆ ಹೆಚ್ಚಿದೆ. ಕಲಬುರ್ಗಿಯಲ್ಲಿ ಶೇ. 65ರಷ್ಟು ಪ್ರಾದೇಶಿಕ ಅಸಮಾನತೆ ಇದೆ. ಇಷ್ಟಿದ್ದರೂ ಪ್ರಿಯಾಂಕ್ ಖರ್ಗೆ ಬೊಬ್ಬೆ ಹೊಡೆಯುತ್ತಾರೆ ಎಂದು ವಾಗ್ದಾಳಿ ಮಾಡಿದರು.
ಮರಣ ಹೊಂದುವ ಕುರಿ ಮೇಕೆಗಳಿಗೆ ಅನುಗ್ರಹ ಯೋಜನೆಯಡಿ ಹಣ ಕೊಟ್ಟಿಲ್ಲ. ರಾಜ್ಯ ಸರ್ಕಾರ 45 ಕೋಟಿ ಬಾಕಿ ಇಟ್ಟುಕೊಂಡಿದೆ. ಸಿಎಂ ತಮ್ಮ ಕುರ್ಚಿ ಉಳಿಸಿಕೊಳ್ಳುವ ಭರಾಟೆಯಲ್ಲಿ ಅವರಿಗೆ ಯಾರು ಕಾಣುತ್ತಿಲ್ಲ. ಡಿಸೆಂಬರ್ವರೆಗೂ ಸಾವನ್ನಪ್ಪಿದ 90 ಸಾವಿರ ಕುರಿಗಳ ಪೈಕಿ 30 ಸಾವಿರ ಕುರಿಗಳಿಗೆ ಮಾತ್ರ ಪರಿಹಾರ ಕೊಟ್ಟಿದ್ದಾರೆ. ಅಹಿಂದಾ ಹೆಸರು ಹೇಳುವ ಮುಖ್ಯಮಂತ್ರಿಗಳು ರಾಜ್ಯದ ಕುರಿಗಾರರಿಗೆ ಅನ್ಯಾಯ ಮಾಡಿದ್ದಾರೆ ಎಂದು ವಿಜಯೇಂದ್ರ ಟೀಕಾಪ್ರಹಾರ ಮಾಡಿದರು.
ಬೆಂಗಳೂರಿನ ಅರಮನೆಯ ಮೈದಾನದಲ್ಲಿ ಫೆಬ್ರವರಿ 19ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಸಭೆಯಲ್ಲಿ ಮುಂದಿನ ಕೆಲವು ಸಂಘಟನಾತ್ಮಕ ವಿಚಾರಗಳ ಬಗ್ಗೆ ಚರ್ಚೆ ಮಾಡುತ್ತೇವೆ. ಅಲ್ಲದೇ ಜಿಪಂ, ತಾಪಂ, ಗ್ರೇಟರ್ ಬೆಂಗಳೂರು, ವಿಧಾನಪರಿಷತ್ ಸ್ಥಾನಗಳ ಚುನಾವಣೆ, ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಕೇಂದ್ರ ಸರ್ಕಾರದ ಸಾಧನೆಗಳ ಚರ್ಚೆ ಮಾಡುತ್ತೇವೆ. ಉದ್ಘಾಟನೆಗೆ ಹಿರಿಯ ಸಚಿವರು ಬರುತ್ತಾರೆ. ಸಮಾರೋಪ ಸಮಾರಂಭಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ ಬರುತ್ತಾರೆ. ಕಾಂಗ್ರೆಸ್ ಸರ್ಕಾರ ಜನರಿಗೆ ಹೇಗೆ ಮೋಸ ಮಾಡುತ್ತಿದೆ ಎಂಬುದರ ಬಗ್ಗೆಯೂ ಚರ್ಚಿಸಲಾಗುವುದು. ಸರ್ಕಾರದ ವೈಫಲ್ಯಗಳ ಬಗ್ಗೆ ಜಾಗೃತಿ ಮಾಡುತ್ತಿದ್ದೇವೆ ಎಂದು ವಿಜಯೇಂದ್ರ ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಶಾಸಕ ಅಭಯ್ ಪಾಟೀಲ್, ಮಾಜಿ ಶಾಸಕರಾದ ಮಹಾದೇವಪ್ಪ ಯಾದವಾಡ, ಡಾ.ವಿಶ್ವನಾಥ ಪಾಟೀಲ್, ಅನಿಲ್ ಬೆನಕೆ, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್, ಮಹಾನಗರ ಜಿಲ್ಲಾಧ್ಯಕ್ಷೆ ಗೀತಾ ಸುತಾರ ಸೇರಿ ಮತ್ತಿತರರು ಇದ್ದರು.

