ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೈಕ್ರೋ ಫೈನಾನ್ಸ್ ಕಂಪನಿಗಳ ಸಾಲದ ಶೂಲಕ್ಕೆ ಸಿಲುಕಿ ಪ್ರಾಣ ಕಳೆದುಕೊಳ್ಳುತ್ತಿರುವ, ಬೀದಿಗೆ ಬರುತ್ತಿರುವ ಜನರ ಸಂಖ್ಯೆ ದಿನೇ ದಿನೇ ಏರಿಕೆ ಆಗುತ್ತಿದ್ದರೂ ಇನ್ನೂ ಎಚ್ಚರಗೊಳ್ಳದ ರಾಜ್ಯ ಕರ್ನಾಟಕ ಕಾಂಗ್ರೆಸ್ ಸರ್ಕಾರ, ಮೈಕ್ರೋ ಫೈನಾನ್ಸ್ ಕಂಪನಿಗಳ ಒತ್ತಡಕ್ಕೆ ಮಣಿದು ಅವರ ಜೊತೆ ಶಾಮೀಲಾಗಿದೆಯೇ ಎನ್ನುವ ಅನುಮಾನ ಮೂಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಮೈಸೂರು, ಬೆಳಗಾವಿ ಜಿಲ್ಲೆಗಳಲ್ಲಿ ಇಬ್ಬರು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ್ದಾರೆ. ವಿಜಯನಗರ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಆತಹತ್ಯೆಗೆ ಪ್ರಯತ್ನಿಸಿದ್ದಾರೆ. ಧಾರವಾಡ, ಗದಗ ಜಿಲ್ಲೆಗಳಲ್ಲಿ ಎರಡು ಕುಟುಂಬಗಳು ಬೀದಿಗೆ ಬಂದಿವೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಇಷ್ಟೆಲ್ಲಾ ಅನಾಹುತ ನಡೆಯುತ್ತಿದ್ದರೂ ಸುಗ್ರೀವಾಜ್ಞೆ ಜಾರಿಗೊಳಿಸಲು ಇನ್ನೂ ಮೀನ ಮೇಷ ಎಣಿಸುತ್ತಿರುವ ಸಿಎಂ ಸಿದ್ದರಾಮಯ್ಯ ಸರ್ಕಾರ, ಬಡವರ ಬದುಕಿನ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಅಶೋಕ್ ವಾಗ್ದಾಳಿ ಮಾಡಿದ್ದಾರೆ.