ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜನಗಣತಿಯೊಂದಿಗೆ ಜಾತಿಗಣತಿಯನ್ನೂ ಸೇರ್ಪಡೆಗೊಳಿಸುವ ಮೂಲಕ ಸಾಮಾಜಿಕ ನ್ಯಾಯ ವಿತರಿಸಲು ನೈಜ ಬದ್ಧತೆ ತೋರಿರುವ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವನ್ನು ಕರ್ನಾಟಕದ ಜನತೆಯ ಪರವಾಗಿ ಅಭಿನಂದಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ.
ಐದು ದಶಕಗಳಷ್ಟು ದೇಶವನ್ನು ಆಳಿದ ಕಾಂಗ್ರೆಸ್ ಎಂದೂ ಇಂತಹ ಸಾಮಾಜಿಕ ನ್ಯಾಯದ ಪರ ಬದ್ಧತೆಯನ್ನು ತೋರದೇ ಜಾತಿಗಣತಿಗಷ್ಟೇ ತನ್ನ ವ್ಯಾಪ್ತಿಯನ್ನು ಸೀಮಿತಗೊಳಿಸಿಕೊಂಡಿತ್ತು ಎಂದು ವಿಜಯೇಂದ್ರ ಆರೋಪಿಸಿದರು.
ಸಮಾಜದ ಶೋಷಿತರು, ಹಿಂದುಳಿದವರು, ಅತಿ ಹಿಂದುಳಿದವರ ಶೈಕ್ಷಣಿಕ, ಆರ್ಥಿಕ ಹಾಗೂ ಔದ್ಯೋಗಿಕ ಸ್ಥಿತಿಗತಿಗಳನ್ನು ಅರಿಯಲು ಜನಗಣತಿಯೊಂದಿಗೆ ಜಾತಿಗಣತಿಯನ್ನೂ ಸೇರ್ಪಡೆಗೊಳಿಸುವ ಐತಿಹಾಸಿಕ ನಿರ್ಧಾರ ಕೈಗೊಳ್ಳುವ ಮೂಲಕ ಮೋದಿ ಅವರ ನೇತೃತ್ವದ NDA ಸರ್ಕಾರ ತನ್ನ ಸಾಮಾಜಿಕ ಬದ್ಧತೆಯನ್ನು ಮೆರೆದಿದೆ ಎಂದು ವಿಜಯೇಂದ್ರ ಅಭಿಪ್ರಾಯ ಪಟ್ಟಿದ್ದಾರೆ.
ಕಾಂಗ್ರೆಸ್ ಎಂದರೆ ಜಾತಿ -ಜಾತಿಗಳನ್ನು ಎತ್ತಿ ಕಟ್ಟುವುದು, ಮತೀಯ ಶಕ್ತಿಗಳನ್ನು ಮತ ಬೇಟೆಗಾಗಿ ಓಲೈಸುವುದು, ಇತ್ತೀಚಿಗೆ ಕರ್ನಾಟಕದಲ್ಲಿ ಜಾತಿ ಗಣತಿಯ ಹೆಸರಿನಲ್ಲಿ ವಿಪರೀತ ಗೊಂದಲ ಸೃಷ್ಟಿಸಿ ಅವೈಜ್ಞಾನಿಕ ಅಂಶಗಳಿಂದ ಕೂಡಿದ ವಾಸ್ತವಕ್ಕೆ ದೂರವಾದ ವರದಿಯನ್ನು ಬಿಡುಗಡೆ ಮಾಡಲು ಯತ್ನಿಸಿ ಸಮುದಾಯಗಳ ನಡುವೆ ಬಿರುಕು ಮೂಡಿಸುವ ಕೆಲಸಕ್ಕೆ ಕೈ ಹಾಕಿರುವ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ನಾಡಿನದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ದೂರಿದ್ದಾರೆ.
ಈ ನಡುವೆ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರ ಸಾಮಾಜಿಕ ಸ್ಥಿತಿಗತಿ ಅದರಲ್ಲೂ ಜಾತಿ ಆಧಾರಿತ ಸ್ಥಿತಿ ಗತಿಗಳನ್ನು ಅಳೆಯಲು ಜನಗಣತಿಯ ಜೊತೆಗೆ ಜಾತಿಗಣತಿಯನ್ನು ಸೇರಿಸುವ ಮೂಲಕ ಕಾಂಗ್ರೆಸ್ಸಿಗರ ಮತ ಬ್ಯಾಂಕ್ ರಾಜಕಾರಣಕ್ಕೆ ತಕ್ಕ ಉತ್ತರ ನೀಡುವ ಮೂಲಕ ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರ ಸಿದ್ಧಾಂತ ಹಾಗೂ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಜಾತಿಗಣತಿಗೆ ಮುಂದಾಗಿರುವ ನಿರ್ಧಾರವನ್ನು ಜಗಜ್ಯೋತಿ ಬಸವೇಶ್ವರರ ಜಯಂತಿಯಂದೇ ಕೈಗೊಂಡಿರುವುದು ಸಾಮಾಜಿಕ ನ್ಯಾಯದ ಕ್ರಾಂತಿಗಾಗಿ ನ್ಯಾಯದ ಕಹಳೆ ಮೊಳಗಿಸಿದಂತಾಗಿದೆ ಎಂದು ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ.