ಚಂದ್ರವಳ್ಳಿ ನ್ಯೂಸ್, ನವದೆಹಲಿ:
ರಾಷ್ಟ್ರ ರಾಜಧಾನಿಯ ರಾಮಲೀಲಾ ಮೈದಾನದಲ್ಲಿ ಮತಗಳ್ಳತನ ಮತ್ತು ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸುತ್ತಿದೆ.
ಬಿಜೆಪಿ ಮತಗಳ್ಳತನ ಆರೋಪಿದ ಹೋರಾಟ ಕುರಿತು ಪ್ರತಿಕ್ರಿಯಿಸಿ, ನುಸುಳುಕೋರರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕದಂತೆ ಅವರನ್ನು ರಕ್ಷಿಸಲು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ ಎಂದು ಗಂಭೀರ ಆರೋಪ ಮಾಡಿದೆ.
ಭಾರತದ ಪ್ರಜಾಪ್ರಭುತ್ವ ಇಡೀ ಜಗತ್ತಿಗೆ ತಿಳಿದಿರುವಂತೆ ಸದೃಢವಾಗಿದೆ. ಆದರೆ ಜನರನ್ನು ದಾರಿತಪ್ಪಿಸುವ ಮತ್ತು ಸಾಂವಿಧಾನಿಕ ಸಂಸ್ಥೆಗಳನ್ನು ಅವಮಾನಿಸುವ ಮತ್ತು ಮಾನಹಾನಿ ಮಾಡುವ ಸಂಚಿನಲ್ಲಿ ಕಾಂಗ್ರೆಸ್ ಯಶಸ್ವಿಯಾಗುವುದಿಲ್ಲ ಎಂದು ಆಡಳಿತಾರೂಢ ಬಿಜೆಪಿ ಎಚ್ಚರಿಸಿದೆ.
ಎಐಸಿಸಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕಾ ಗಾಂಧಿ ವಾದ್ರಾ, ಕೆ.ಸಿ. ವೇಣುಗೋಪಾಲ್, ಜೈರಾಮ್ ರಮೇಶ್ ಮತ್ತು ಸಚಿನ್ ಪೈಲಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಮತಗಳ್ಳತನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರ, ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಚುನಾವಣಾ ಸುಧಾರಣೆಗಳ ಮೇಲಿನ ಚರ್ಚೆಯ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ವಿರುದ್ಧದ ಸುಳ್ಳು ಆರೋಪಗಳಿಗೆ ಪಾಯಿಂಟ್-ಬೈ-ಪಾಯಿಂಟ್ ಪ್ರತ್ಯಾರೋಪದ ಮೂಲಕ ವಿಪಕ್ಷಗಳಿಗೆ ಮುಖಭಂಗ ಉಂಟು ಮಾಡಿದ್ದರು. ಇದಕ್ಕಾಗಿ ಕಾಂಗ್ರೆಸ್ ಈ ಪ್ರತಿಭಟನೆ ನಡೆಸುತ್ತಿದೆ ಎಂದು ಅವರು ಹೇಳಿದ್ದಾರೆ.

