ಸೈನಿಕರಿಗೆ ನೈತಿಕ‌ ಸ್ಥೈರ್ಯ ತುಂಬಲು ಕಾಂಗ್ರೆಸ್ ನಿಂದ ತಿರಂಗಾ ಯಾತ್ರೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೇಶದ ಗಡಿಯಲ್ಲಿ ಪ್ರಾಣದ ಹಂಗು ತೊರೆದು ಹೋರಾಡುತ್ತಿರುವ ನಮ್ಮ ಹೆಮ್ಮೆಯ ಸೈನಿಕರಿಗೆ ನೈತಿಕ‌ಸ್ಥೈರ್ಯ ತುಂಬುವ ಸಲುವಾಗಿ ಇಂದು “ತಿರಂಗಾ ಯಾತ್ರೆ” ಹೆಸರಿನಲ್ಲಿ ತ್ರಿವರ್ಣ ಧ್ವಜ ಹಿಡಿದು ಪಾದಯಾತ್ರೆಯಲ್ಲಿ ಹೆಜ್ಜೆಹಾಕುತ್ತಾ, ರಾಷ್ಟ್ರದ ಏಕತೆ ಮತ್ತು ಸಾರ್ವಭೌಮತೆಯನ್ನು ಎತ್ತಿಹಿಡಿದೆವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

“ಭಯೋತ್ಪಾದನೆ ತೊಲಗಲಿ” ಎಂದು ಇಡೀ ದೇಶ ಒಂದು ದನಿಯಾಗಿ ನಿಂತಿದೆ. ಮತ್ತೊಮ್ಮೆ ಭಾರತ ನೆಲದಲ್ಲಿ ಭಯೋತ್ಪಾದಕ ಕೃತ್ಯಕ್ಕೆ ಬೆಂಬಲ ಕೊಡುವ ಮೊದಲು ನೂರು ಬಾರಿ ಯೋಚಿಸುವಂತೆ ಪಾಕಿಸ್ತಾನಕ್ಕೆ ನಮ್ಮ ಸೇನೆ ಪಾಠ ಕಲಿಸಲಿದೆ ಎಂಬ ಪೂರ್ಣ ವಿಶ್ವಾಸವಿದೆ. ನಮ್ಮ ಸೈನ್ಯ ನಮ್ಮ ಹೆಮ್ಮೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಕೈಗೊಂಡಿರುವ ಆಪರೇಷನ್ ಸಿಂದೂರ್ಕಾರ್ಯಾಚರಣೆಯನ್ನು ಬೆಂಬಲಿಸಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ತಿರಂಗಾ ಯಾತ್ರೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪಾಲ್ಗೊಂಡಿದ್ದರು.

ದೇಶದ ಭದ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ದೇಶದ ರಕ್ಷಣಾ ಪಡೆಗಳು ಕೈಗೊಂಡಿರುವ ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಒಕ್ಕೊರಲಿನ ಬೆಂಬಲ ಸೂಚಿಸಿ, ಕೆ.ಆರ್. ವೃತ್ತದಿಂದ ಚಿನ್ನಸ್ವಾಮಿ ಕ್ರೀಡಾಂಗಣ ವೃತ್ತದವರೆಗೆ ನಡೆದ “ತಿರಂಗಾ ಯಾತ್ರೆ” ಮಾಡಲಾಯಿತು ಎಂದು ಶಿವಕುಮಾರ್ ತಿಳಿಸಿದರು.

ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದು ಸಾಗಿದ ಮಕ್ಕಳು, ಹಿರಿಯರು, ಚಿಂತಕರು, ಸಾಹಿತಿಗಳು, ರಾಜಕೀಯ ಪಕ್ಷದ ಮುಖಂಡರು, ಕಾರ್ಯಕರ್ತರು, ಸರ್ಕಾರಿ ಹಾಗೂ ಖಾಸಗಿ ಉದ್ದಿಮೆಗಳ ನೌಕರರು, ಚಿತ್ರರಂಗದವರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ನೂರಾರು ಸಂಖ್ಯೆಯಲ್ಲಿ ಪಾಲ್ಗೊಂಡು‌, ನಾವೆಲ್ಲಾ ದೇಶದ ಪರವಾಗಿದ್ದೇವೆ ಎಂಬ ಪ್ರಬಲ ಸಂದೇಶವನ್ನು ಸಾರಿದರು ಎಂದು ಡಿಸಿಎಂ ಶಿವಕುಮಾರ್ ಹೇಳಿದರು.

ನಮ್ಮ ಕರೆಗೆ ಓಗೊಟ್ಟು, ಈ ಮಹೋನ್ನತವಾದ ಉದ್ದೇಶವನ್ನು ಹೊಂದಿರುವ ಯಾತ್ರೆಯನ್ನು ಯಶಸ್ವಿಗೊಳಿಸಿದ ಸರ್ವರಿಗೂ ಧನ್ಯವಾದಗಳನ್ನು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

 

Share This Article
error: Content is protected !!
";