ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗ್ರೇಟರ್ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಜಿಬಿಎ ಕೇಂದ್ರ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭಾಗವಹಿಸಿ ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕೃತ ಲಾಂಛನವನ್ನು ಅಂತಿಮಗೊಳಿಸಲಾಗಿದೆ. ಬನಶಂಕರಿ ದೇವಸ್ಥಾನದ ಮುಂಭಾಗದಲ್ಲಿ ಪ್ರಾಧಿಕಾರದ ಕಚೇರಿ ಯಾವ ವಿನ್ಯಾಸದಲ್ಲಿ ಇರಬೇಕು ಎಂಬುದರ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.
ಬೆಂಗಳೂರು ನಗರದಲ್ಲಿ ರಸ್ತೆ ಕಾಮಗಾರಿ ಚಾಲ್ತಿಯಲ್ಲಿದ್ದು,ಈಗಾಗಲೇ ಶೇ. 80ರಷ್ಟು ಟೆಂಡರ್ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಏಪ್ರಿಲ್ ಅಂತ್ಯದೊಳಗೆ ಎಲ್ಲಾ ರಸ್ತೆ ಕಾಮಗಾರಿಗಳನ್ನು ಮುಗಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ ಎಂದು ಡಿಸಿಎಂ ತಿಳಿಸಿದರು.
ಏಪ್ರಿಲ್ ಮೂರನೇ ವಾರದಲ್ಲಿ ಒಂದೇ ಹಂತದಲ್ಲಿ ಸುಮಾರು 10 ಲಕ್ಷ ಜನರಿಗೆ ಇ-ಖಾತಾ ವಿತರಿಸಲು ನಿರ್ಧರಿಸಲಾಗಿದೆ. ಹಾಗೂ ಬೆಂಗಳೂರಿನಲ್ಲಿ ‘ಬಿ‘ ಖಾತೆಯಿಂದ ‘ಎ‘ ಖಾತೆಗೆ ಪರಿವರ್ತಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಎಲ್ಲಾ ರೆವೆನ್ಯೂ ಸ್ವತ್ತುಗಳು ಈಗ ಜಿಬಿಎ ರಸ್ತೆಗಳ ವ್ಯಾಪ್ತಿಗೆ ಬರಲಿವೆ.
ಅರ್ಜಿ ಸಲ್ಲಿಸಿದ ಸುಮಾರು 30,000 ಬೀದಿ ಬದಿ ವ್ಯಾಪಾರಿಗಳಿಗೆ ಸರ್ಕಾರದಿಂದ ವಿವಿಧ ಮಾದರಿಯ ಜೀವನೋಪಾಯ ವಾಹನಗಳನ್ನು ವಿತರಿಸಲಾಗುವುದು.
ಬಿಬಿಸಿ ಯೋಜನೆಗೆ ಸಂಬಂಧಿಸಿದಂತೆ ಭೂಮಿ ನೀಡಿದವರಿಗೆ ನಿಯಮಾನುಸಾರ ಟಿಡಿಆರ್ (TDR) ವಿತರಿಸಲಾಗುತ್ತಿದೆ. ಪೌರಕಾರ್ಮಿಕರ ಕೆಲಸದ ಹೊರೆ ಕಡಿಮೆ ಮಾಡಲು ಮತ್ತು ನಗರದ ಸ್ವಚ್ಛತೆ ಕಾಪಾಡಲು ಆಯಾ ಪಾಲಿಕೆಗಳಿಗೆ ಅವಶ್ಯಕವಿರುವ ಸ್ವೀಪಿಂಗ್ ಮೆಷಿನ್ ಖರೀದಿಸಲು ಸೂಚಿಸಲಾಗಿದೆ ಎಂದು ಡಿ.ಕೆ ಶಿವಕುಮಾರ್ ಹೇಳಿದರು.
ಗ್ರೇಟರ್ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಇಂದು ಜಿಬಿಎ ಕೇಂದ್ರ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಹಾಗೂ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

