ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಾಯಕತ್ವ ಬದಲಾವಣೆ, ಮುಖ್ಯಮಂತ್ರಿ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ನಡೆಯುತ್ತಿರುವ ಮುಸುಕಿನ ಗುದ್ದಾಟ ದಿನಕ್ಕೊಂದು ತಿರುವ ಪಡೆದುಕೊಳ್ಳುತ್ತಿದ್ದು ಸದ್ಯಕ್ಕೆ ಇದು ಕೊನೆಗೊಳ್ಳದೇ ಮುಂದುವರೆದಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೆಹಲಿಗೆ ತೆರಳಿ ತಮ್ಮ ಕೆಲಸ ಕಾರ್ಯ ಪೂರ್ಣಗೊಳಿಸಿ ರಾಹುಲ್ ಗಾಂಧಿ ಭೇಟಿಗೆ ಯತ್ನಿಸಿ ಸಾಧ್ಯವಾಗದೆ ವಾಪಸ್ ಬಂದಿದ್ದಾರೆ.
ಕಾಂಗ್ರೆಸ್ಕಾರ್ಯಕಾರಿ ಸಮಿತಿ ಸಭೆಗೆ ಡಿಕೆ ಶಿವಕುಮಾರ್ ಅವರಿಗೆ ಆಹ್ವಾನ ಬಂದಿಲ್ಲ. ಬದಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮಾತ್ರ ಕಾರ್ಯಕಾರಿ ಸಮಿತಿ ಸಭೆಗೆ ಬರುವಂತೆ ಆಹ್ವಾನ ನೀಡಲಾಗಿದೆ.
ಹೀಗಾಗಿ ಡಿಸೆಂಬರ್-26ರ ಶುಕ್ರವಾರ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಗುರುವಾರ ಬೆಂಗಳೂರಿನಲ್ಲಿ ದಿಢೀರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದು, ಮಹತ್ವದ ಚರ್ಚೆ ಮಾಡಿದ್ದಾರೆ. ಇದು ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆಯಲ್ಲದೆ ಹಲವು ವಿಷಯಗಳ ಚರ್ಚೆಗೆ ಗ್ರಾಸವಾಗಿದೆ.
ಮಲ್ಲಿಕಾರ್ಜುನ್ ಖರ್ಗೆ ಭೇಟಿ ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಡಿಸೆಂಬರ್ 27ರಂದು ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಇದ್ದು, ಸಿಡಬ್ಲ್ಯುಸಿ ಸಭೆಗೆ ನನ್ನನ್ನು ಕರೆದಿಲ್ಲ. ಕರೆದರೆ ನಾನು ಹೋಗುತ್ತೇನೆ. ಸಿಎಂ ಸಿದ್ದರಾಮಯ್ಯರನ್ನು ಸಿಡಬ್ಲ್ಯುಸಿ ಸಭೆಗೆ ಕರೆದ ಮಾಹಿತಿ ಇದ್ದು, ಸಭೆಯಲ್ಲಿ ಭಾಗಿಯಾಗಲು ಸಿಎಂ ದೆಹಲಿಗೆ ಹೋಗುತ್ತಾರೆ ಎಂದು ತಿಳಿಸಿದರು.
ಅಲ್ಲದೆ ಕಾಂಗ್ರೆಸ್ ವರಿಷ್ಠರ ಮೌನಕ್ಕೆ ಡಿಕೆ ಶಿವಕುಮಾರ್ ಅವರು ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ ಘಟನೆ ಕೂಡ ನಡೆದಿದೆ.

