ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸೆಂಟ್ರಲ್ ಕಾಲೇಜಿನ ಜ್ಞಾನಭಾರತಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ(ಕಾಸಿಯಾ)ದ ಅಮೃತ ಮಹೋತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಪಾಲ್ಗೊಂಡು, ಮಾತನಾಡಿದರು.
ಮನೆ ಬಾಗಿಲಿಗೆ ಖಾತೆಯನ್ನು ಹಂಚುವ ವಿಷಯದಲ್ಲಿ ಶೇ. 60ರಷ್ಟು ಪ್ರಗತಿಯನ್ನು ಸಾಧಿಸಿದ್ದೇವೆ. ವಿದ್ಯುತ್ ದರವನ್ನು ಎರಡು ಬಾರಿ ಇಳಿಸಿದ್ದೇವೆ. ಬೆಂಗಳೂರು ನಗರದಲ್ಲಿ ಶೇ.40ರಷ್ಟು ಕೈಗಾರಿಕೆಗಳು ಇವೆ. ಕೈಗಾರಿಕೆಗಳಿಗೆ ಸ್ಥಳಾವಕಾಶಗಳನ್ನು ಒದಗಿಸುವ ಪ್ರಯತ್ನಗಳನ್ನು ಮಾಡುತ್ತೇವೆ ಎಂದು ಡಿಸಿಎಂ ಶಿವಕುಮಾರ್ ಹೇಳಿದರು.
ಸಣ್ಣ ಕೈಗಾರಿಕೆಗಳ ಬೇಡಿಕೆಗಳನ್ನು ಪೂರೈಸಲು ನಾವು ಕಟಿಬದ್ಧರಾಗಿದ್ದೇವೆ. ಉದ್ಯೋಗ ಹಾಗೂ ವೇತನದ ವಿಚಾರದಲ್ಲಿರುವ ಸಮಸ್ಯೆಗಳನ್ನು ಪರಿಹರಿಸಲು ನಾವು ಸಿದ್ಧರಾಗಿದ್ದೇವೆ. ಇಂತಹ ಇನ್ನಷ್ಟು ಜನಪರ ಕಾರ್ಯಕ್ರಮಗಳ ಮೂಲಕ ಸರ್ವರ ಏಳಿಗೆಗಾಗಿ ಕೆಲಸ ಮಾಡಲು ನಾವು ಸಿದ್ಧರಿದ್ದೇವೆ ಎಂದು ಡಿ.ಕೆ ಶಿವಕುಮಾರ್ ಭರವಸೆ ನೀಡಿದರು.
ಯಶಸ್ಸನ್ನು ಕಾಣಬೇಕೆಂದರೆ, ಧರ್ಮರಾಯನ ಧರ್ಮತ್ವ, ದಾನಶೂರ ಕರ್ಣನ ದಾನತ್ವ, ಅರ್ಜುನನ ಗುರಿ, ಭೀಮನ ಬಲ, ವಿದುರನ ನೀತಿ, ಕೃಷ್ಣನ ತಂತ್ರವಿರಬೇಕು. ನಾವೆಲ್ಲರೂ ಒಟ್ಟಾಗಿ ಕಾರ್ಯನಿರ್ವಹಿಸೋಣ ಎಂದು ಶಿವಕುಮಾರ್ ತಿಳಿಸಿದರು.