ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮುಂಬರುವ ನವೆಂಬರ್ ತಿಂಗಳಲ್ಲಿ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಬೆಂಬಲಿಗ ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 136 ಸ್ಥಾನ ಗೆಲ್ಲುವಲ್ಲಿ ಡಿಕೆ ಶಿವಕುಮಾರ್ ಶ್ರಮ ಅಪಾರವಾಗಿದೆ ಎಂದು ಕುಣಿಗಲ್ ಶಾಸಕ ಡಾ.ರಂಗನಾಥ್ ಹೇಳಿದ್ದಾರೆ.
ಒಂದಲ್ಲ ಒಂದು ದಿನ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುತ್ತಾರೆಂಬ ಭವಿಷ್ಯ ನುಡಿದ್ದಾರೆ.
ರಾಜಕೀಯ ಗುರು- ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕೆಂಬ ಲಕ್ಷಾಂತರ ಕಾರ್ಯಕರ್ತರು ಅಪೇಕ್ಷೆ ಪಡುತ್ತಿದ್ದಾರೆ. ಹೀಗಾಗಿ ಡಿಕೆಶಿಗೆ ಸ್ಥಾನಮಾನ ಕೊಡುವ ಬಗ್ಗೆ ಹೈಕಮಾಂಡ್ ಚಿಂತನೆ ಮಾಡಬೇಕು. ಹೈಕಮಾಂಡ್ ನಿರ್ಧಾರಕ್ಕಾಗಿ ಪಕ್ಷದ ಕಾರ್ಯಕರ್ತರು ಕಾಯುತ್ತಿದ್ದಾರೆ. ರಾಜಕೀಯ ಅನ್ನೋದು ಕೃಷಿ ಇದ್ದ ಹಾಗೆ. ಕೃಷಿಯಲ್ಲಿ ಶ್ರಮ ಹಾಕಿದಂತೆ ರಾಜಕೀಯದಲ್ಲಿ ಸಮಸ್ಯೆ ಬಗೆಹರಿಸಬೇಕು ಎಂದು ರಂಗನಾಥ್ ಆಗ್ರಹಿಸಿದ್ದಾರೆ.
ಡಿ.ಕೆ.ಶಿವಕುಮಾರ್ ಹಾರ್ಡ್ಶಿಪ್ ನಂಬಿ ಕೆಲಸ ಮಾಡುವವರಾಗಿದ್ದು, ಬೆಳಗ್ಗೆ 8 ಗಂಟೆಯಿಂದ ಮಧ್ಯರಾತ್ರಿವರೆಗೂ ದುಡಿಯುತ್ತಾರೆ. ಅವರಿಗೆ ಭಗವಂತನ ಆಶೀರ್ವಾದ ಇರುವುದರಿಂದ ಮುಖ್ಯಮಂತ್ರಿ ಆಗುತ್ತಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ನಮಗೆ ರಾಜಕೀಯ ಗುರುಗಳು. ಸದ್ಯ ಮುಖ್ಯಮಂತ್ರಿ ಕುರ್ಚಿಯಲ್ಲಿ ಇರುವ ಸಿದ್ದರಾಮಯ್ಯನವರು ದೇಶಕ್ಕೆ ಮಾದರಿಯಾಗುವ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕ ಡಾ.ರಂಗನಾಥ್ ಹೇಳಿದ್ದಾರೆ.
ನವೆಂಬರ್ ನಲ್ಲಿ ಸಿಎಂ-
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನವೆಂಬರ್ ನಲ್ಲಿ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಹೇಳಿದ್ದಾರೆ. ಡಿಕೆಶಿ ಮುಖ್ಯಮಂತ್ರಿ ಆಗಬೇಕು ಎಂಬುದು ನಮ್ಮೆಲ್ಲರ ಇಚ್ಛೆ. ಆದರೆ ಅಂತಿಮ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳುತ್ತದೆ ಎಂದು ಅವರು ತಿಳಿಸಿದ್ದಾರೆ.

