ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಹಳ್ಳಿಗಳಲ್ಲಿ ರೈತರಿಗೆ ಕೃಷಿಯೊಂದಿಗೆ ಹೈನುಗಾರಿಕೆಯೂ ಸ್ವಾವಲಂಬನೆ ಬದುಕಿಗೆ ಸಹಕಾರಿಯಾಗಿದೆ ಎಂದು ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ತಿಳಿಸಿದರು.
ನಗರದ ಪಶುಇಲಾಖೆ ಕಚೇರಿ ಆವರಣದಲ್ಲಿ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ, ಪಶುಪಾಲನಾ ಮತ್ತು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ವಿದ್ಯುತ್ ಚಾಲಿತ ಮೇವು ಕತ್ತರಿಸುವ ಯಂತ್ರಗಳ ವಿತರಣಾ ಕಾರ್ಯಕ್ರಮಕ್ಕೆ ಶಾಸಕ ಧೀರಜ್ ಮುನಿರಾಜು ಚಾಲನೆ ನೀಡಿ ಮಾತನಾಡಿ ರೈತರಿಗೆ ಅನುಕೂಲವಾಗಲು ಸಬ್ಸಿಡಿ ದರದಲ್ಲಿ ವಿದ್ಯುತ್ ಚಾಲಿತ ಕಟಾವು ಯಂತ್ರವನ್ನು ನೀಡಲಾಗುತ್ತಿದೆ. ಆದರೆ ಈ ಕಟಾವು ಯಂತ್ರವನ್ನು ಹೆಚ್ಚುವರಿ ನೀಡಬೇಕು ಎಂದು ಪ್ರಸ್ತಾವನೆ ಸಲ್ಲಿಸಲಾಗಿದೆ. ಹೈನುಗಾರಿಕೆಯೂ ಸ್ವಾವಲಂಬನೆ ಜೀವನಕ್ಕೆ ಸಹಕಾರಿ.
ತಾಲೂಕಿನಲ್ಲಿ ಹೈನುಗಾರಿಕೆ ಉತ್ತಮವಾಗಿ ನಡೆಯುತ್ತಿದೆ. ಕಾಲುಬಾಯಿ ಲಸಿಕೆಯ ವಿತರಣೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಬಂದಿದೆ. ಪಶುವೈದ್ಯರು, ಸಿಬ್ಬಂದಿ ಉತ್ತಮ ಕೆಲಸ ಮಾಡಿದ್ದಕ್ಕೆ ಇದು ಸಾಧ್ಯವಾಗಿದೆ. ತಮ್ಮ ವ್ಯಾಪ್ತಿಯಲ್ಲಿ ಉತ್ತಮ ಕೆಲಸ ಮಾಡಬೇಕು. ಸಾಕು ಪ್ರಾಣಿಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕು ಎಂದರು.
ಪಶು ವೈದ್ಯಾಧಿಕಾರಿ ಡಾ.ಸದಾಶಿವಮೂರ್ತಿ ಮಾತನಾಡಿ, ಮೇವು ಕಟಾವು ಯಂತ್ರವನ್ನು ರೈತರಿಗೆ ವಿತರಣೆ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಶೇ.೫೦ರ ಸಬ್ಸಿಡಿಯಲ್ಲಿ ಕಟಾವು ಯಂತ್ರಗಳನ್ನು ನೀಡಲಾಗುತ್ತಿದೆ. ರಾಜ್ಯದಲ್ಲಿ ದೊಡ್ಡಬಳ್ಳಾಪುರ ಕಾಲುಬಾಯಿ ಲಸಿಕಾ ಕಾರ್ಯಕ್ರಮದಲ್ಲಿ ಮೊದಲ ಸ್ಥಾನ ಬಂದಿದೆ. ಲಸಿಕೆ ವಿತರಣೆಗೆ ಶಾಸಕರು ಸಾಕಷ್ಟು ಸಲಹೆ ನೀಡಿದ್ದರು. ರೈತರಿಗೆ ಸೌಕರ್ಯಗಳು ಸಮರ್ಪಕವಾಗಿ ಸಿಗಬೇಕು ಎಂದು ಸೂಚನೆ ನೀಡಿದ್ದರು. ಕಾರ್ಯಕ್ರಮದಲ್ಲಿ 25 ಮೇವು ಕತ್ತರಿಸುವ ಯಂತ್ರವನ್ನು ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ನಗರಸಭಾ ಮಾಜಿ ಅಧ್ಯಕ್ಷ ಮುದ್ದಪ್ಪ, ಬಿಜೆಪಿ ತಾಲೂಕು ಅಧ್ಯಕ್ಷ ನಾಗೇಶ್, ಮುಖಂಡರಾದ ನಟರಾಜ್, ನಂಜುಂಡ, ಭಾಸ್ಕರ್, ರೈತ ಮುಖಂಡ ವಾಸು. ಪಶು ಅಧಿಕಾರಿಗಳು, ಸಿಬ್ಬಂದಿ, ರೈತರು ಹಾಜರಿದ್ದರು.

