ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ನೋಂದಾಯಿತ ಕಾರ್ಮಿಕರ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಹೊಸ ಸೌಲಭ್ಯವನ್ನು ಘೋಷಿಸಿದೆ.
ಈ ಹಿಂದೆ ಮಂಡಳಿಯ ನೋಂದಾಯಿತ ಫಲಾನುಭವಿಗಳು ಮರಣ ಹೊಂದಿದ ಸಂದರ್ಭದಲ್ಲಿ ಅರ್ಹತೆಯ ಆಧಾರದ ಮೇಲೆ ಕೇವಲ ಪೆನ್ಷನ್ ಸೌಲಭ್ಯವನ್ನು ಮಾತ್ರ ನೀಡಲಾಗುತ್ತಿತ್ತು. ಆದರೆ, ಆರ್ಥಿಕವಾಗಿ ಹಿಂದುಳಿದ ಕಾರ್ಮಿಕರ ಕುಟುಂಬದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಮಂಡಳಿಯು ತಿದ್ದುಪಡಿ ತಂದಿದೆ.
ನೋಂದಾಯಿತ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರು ಕೆಲಸದ ಸ್ಥಳದಲ್ಲಿ ಅಪಘಾತದಿಂದ ಮೃತಪಟ್ಟಲ್ಲಿ, ಅವರ ಇಬ್ಬರು ಮಕ್ಕಳಿಗೆ ಸ್ನಾತಕೋತ್ತರ ಪದವಿಯವರೆಗೆ ಶೈಕ್ಷಣಿಕ ಸಹಾಯಧನವನ್ನು ನೀಡಲು ಮಂಡಳಿಯು ಅನುಮೋದನೆ ನೀಡಿದೆ. ಈ ಸೌಲಭ್ಯವು ಶೈಕ್ಷಣಿಕ ವರ್ಷ 2025-26 ರಿಂದ ಜಾರಿಗೆ ಬರಲಿದೆ. ಕಾರ್ಮಿಕರ ಕುಟುಂಬದ ಶೈಕ್ಷಣಿಕ ಅಭಿವೃದ್ಧಿಯೇ ಈ ಯೋಜನೆಯ ಮುಖ್ಯ ಗುರಿಯಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಥವಾ ಅರ್ಜಿ ಸಲ್ಲಿಕೆಗಾಗಿ ಮಂಡಳಿಯ ಅಧಿಕೃತ ವೆಬ್ಸೈಟ್ ಸಂಪರ್ಕಿಸಬಹುದು ಎಂದು ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಕಾರ್ಯದರ್ಶಿಗಳು ತಿಳಿಸಿದ್ದಾರೆ.

