ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ರೂಪಿಸಲಾಗಿದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ತಿಳಿಸಿದ್ದಾರೆ.
ವರ್ಗಾವಣೆಗೆ ಸಂಬಂಧಿಸಿದಂತೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಅಬಕಾರಿ ಇಲಾಖೆಯಲ್ಲಿ ಪಾರದರ್ಶಕತೆ ಮತ್ತು ಸುಧಾರಣೆ ತರುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ವರ್ಗಾವಣೆ ನಿಯಮಗಳನ್ನು ಮಾರ್ಪಾಡು ಮಾಡುವ ಮೂಲಕ ಪಾರದರ್ಶಕ ಮತ್ತು ನಿಯಮಾಧಾರಿತ ವರ್ಗಾವಣೆ ಪದ್ಧತಿ ಜಾರಿಗೊಳಿಸುವುದರಿಂದ ಇತರೆ ಪ್ರಭಾವಗಳಿಗೆ ಒಳಗಾಗುವುದನ್ನು ತಡೆಗಟ್ಟಲು ಸಾಧ್ಯವಾಗಲಿದೆ ಎಂದು ತಿಮ್ಮಾಪುರ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ನಾಗರಿಕ ಸೇವೆಗಳು (ಅಬಕಾರಿ ಇಲಾಖೆಯ ವರ್ಗಾವಣೆ) ನಿಯಮಗಳು, 2025 ಅನುಮೋದನೆ ನೀಡಲಾಗಿದ್ದು, ಅನುಬಂಧದಲ್ಲಿ ನೀಡಲಾದ ಕರಡನ್ನು ಹೊರಡಿಸಿ, ಸಂಬಂಧಪಟ್ಟವರಿಂದ ಆಕ್ಷೇಪಣೆ ಅಥವಾ ಸಲಹೆಗಳನ್ನು ಆಹ್ವಾನಿಸುವುದು ಹಾಗೂ ಸ್ವೀಕೃತವಾಗಬಹುದಾದ ಆಕ್ಷೇಪಣೆ ಅಥವಾ ಸಲಹೆಗಳನ್ನು ಪರಿಗಣಿಸಿದ ನಂತರ ಕರ್ನಾಟಕ ನಾಗರಿಕ ಸೇವೆಗಳು (ಅಬಕಾರಿ ಇಲಾಖೆಯ ವರ್ಗಾವಣೆ) ನಿಯಮಗಳು, 2025ನ್ನು ಅಂತಿಮಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಬಿ.ಆರ್.ತಿಮ್ಮಾಪುರ ಹೇಳಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ಹಾಲಿ ಇರುವ ಹುದ್ದೆಗಳನ್ನು ಕಾರ್ಯ ನಿರ್ವಾಹಕ ಮತ್ತು ಕಾರ್ಯನಿರ್ವಾಹಕೇತರ ಎಂದು ವಿಂಗಡಿಸಿ, ಅಬಕಾರಿ ನಿರೀಕ್ಷಕರು, ಅಬಕಾರಿ ಉಪ ನಿರೀಕ್ಷಕರು, ಅಬಕಾರಿಮುಖ್ಯ ಪೇದೆ ಮತ್ತು ಅಬಕಾರಿ ಪೇದೆಗಳ ವರ್ಗಾವಣೆಯನ್ನು ಕೌನ್ಸಿಲಿಂಗ್ ಮುಖಾಂತರ ಮಾಡಲು ನಿರ್ಧರಿಸಲಾಗಿದೆ.
ಜೊತೆಗೆ ಒಬ್ಬ ಅಧಿಕಾರಿ/ಸಿಬ್ಬಂದಿಯನ್ನು ಸತತವಾಗಿ ಎರಡಕ್ಕಿಂತ ಹೆಚ್ಚು ಅವಧಿಗೆ ಕಾರ್ಯನಿರ್ವಾಹಕ ಹುದ್ದೆಗೆ ವರ್ಗಾಯಿಸುವಂತಿಲ್ಲ ಹಾಗೂ ಅಬಕಾರಿ ಅಧಿಕಾರಿಗಳ ಕಡ್ಡಾಯ ವರ್ಗಾವಣೆಗೆ ಹೊಸ ನಿಯಮದಲ್ಲಿ ಪ್ರಸ್ತಾಪಿಸಲಾಗಿದೆ ಎಂದು ಸಚಿವ ತಿಮ್ಮಾಪುರ ತಿಳಿಸಿದ್ದಾರೆ.
ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕಳೆದ ಐದು ವರ್ಷಗಳಲ್ಲಿ ಕಾರ್ಯನಿರ್ವಾಹಕ ಹುದ್ದೆಯಲ್ಲಿ ಕಾರ್ಯ ನಿರ್ವಹಿಸಿದ ಅಬಕಾರಿ ಜಂಟಿ ಆಯುಕ್ತರು, ಉಪ ಆಯುಕ್ತರು, ಅಧೀಕ್ಷಕರು, ನಿರೀಕ್ಷಕರು ಮತ್ತು ಉಪ ನಿರೀಕ್ಷಕರುಗಳನ್ನು ಸದರಿ ಜಿಲ್ಲೆಗಳನ್ನು ಹೊರತುಪಡಿಸಿ ಇತರೆ ಜಿಲ್ಲೆಗಳಿಗೆ ವರ್ಗಾಯಿಸಲು ಹೊಸ ನಿಯಮದಲ್ಲಿ ಉಲ್ಲೇಖಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಅಬಕಾರಿ ಇಲಾಖೆಯು ಸಮವಸ್ತ್ರಾಧಾರಿತ ಮತ್ತು ನಿಯಂತ್ರಕ ಇಲಾಖೆ ಆಗಿರುವುದರಿಂದ ಹೊಸ ವರ್ಗಾವಣೆ ನಿಯಮ ಇಲಾಖೆಯಲ್ಲಿ ಜಾರಿ ಮತ್ತು ತನಿಖೆ ಕಾರ್ಯವನ್ನು ಪರಿಣಾಮಕಾರಿ ಕೈಗೊಳ್ಳಲು ಅನುಕೂಲವಾಗಲಿದೆ. ಜೊತೆಗೆ ಇಲಾಖೆಯಲ್ಲಿ ಪಾರದರ್ಶಕತೆ ವ್ಯವಸ್ಥೆ ಜಾರಿಯಾಗುವುದಿಂದ ಭ್ರಷ್ಟಾಚಾರಕ್ಕೆ ಆಸ್ಪದ ಸಿಗುವುದಿಲ್ಲ ಮತ್ತು ಸರ್ಕಾರಕ್ಕೆ ಆದಾಯ ಕೂಡ ಹೆಚ್ಚಾಗಲಿದೆ ಎಂದು ಸಚಿವ ತಿಮ್ಮಾಪುರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

