ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಸ್ಫೋಟಕ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಕಲಾಸಿಪಾಳ್ಯದ ನಿಲ್ದಾಣದಲ್ಲಿ ನಡೆದಿದೆ.
ಜುಲೈ-23 ರಂದು ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಲಾಸಿಪಾಳ್ಯ ಬಸ್ ನಿಲ್ದಾಣದ ಶೌಚಾಲಯದ ಸಮೀಪ ಸ್ಫೋಟಕ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು, ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸಿತು.
ಪೊಲೀಸರಿಗೆ ಲಭ್ಯವಾಗಿರುವ ಒಂದು ಬ್ಯಾಗ್ ನಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಸ್ಥಳಕ್ಕೆ ಡಿಸಿಪಿ ಎಸ್.ಗಿರೀಶ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.
ಬಸ್ ನಿಲ್ದಾಣದಲ್ಲಿ ಪತ್ತೆಯಾದ ಸ್ಫೋಟಕವನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ಚುರುಕುಗೊಳಿಸಿದ್ದಾರೆ. ಜಿಲೆಟಿನ್ ಕಡ್ಡಿ ಜೊತೆಗೆ ಕೆಲವು ಡಿಟೋನೆಟರ್ಗಳು ಕೂಡ ಪತ್ತೆಯಾಗಿದ್ದು, ಈ ಸಂಬಂಧ ಕಲಾಸಿಪಾಳ್ಯ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಸಿಸಿಬಿ ಡಿಸಿಪಿ ರಾಜ್ ಹಿಮಾಮ್ ಖಾಸಿಂ ಅವರು ಸಹ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಮತ್ತೊಂದೆಡೆ ಪೊಲೀಸರು, ಬಿಎಂಟಿಸಿ ಸೆಕ್ಯುರಿಟಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ. ಅಲ್ಲದೇ ಬಸ್ ನಿಲ್ದಾಣಕ್ಕೆ ಯಾರು ಈ ವಸ್ತುಗಳನ್ನು ತಂದಿಟ್ಟರು ಎನ್ನುವುದನ್ನು ಪತ್ತೆ ಮಾಡಲು ಸುತ್ತಮುತ್ತಲಿನ ಸಿಸಿಟಿವಿಗಳ ಪರಿಶೀಲನೆಯನ್ನು ಪೊಲೀಸರು ಮಾಡಲಿದ್ದಾರೆ.
ಪಶ್ಚಿಮ ವಿಭಾಗ ಡಿಸಿಪಿ ಗಿರೀಶ್ ಅವರು ಪ್ರಕರಣ ಕುರಿತು ಮಾತನಾಡಿ, 6 ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ವ್ಯಕ್ತಿಯೊಬ್ಬ ಈ ಬ್ಯಾಗ್ನ ಜೊತೆ ಕುಳಿತಿರುವುದು ಕಂಡು ಬಂದಿದ್ದು, ಬಂಡೆ ಹೊಡೆಯುವ ಕೆಲಸಗಾರರು ಬಿಟ್ಟುಹೋಗಿರುವ ಶಂಕೆ ಇದೆ. ಉದ್ದೇಶಪೂರ್ವಕವಾಗಿ ಬಿಟ್ಟು ಹೋಗಿದ್ದಾನಾ ಅಥವಾ ಮರೆತು ಹೋಗಿದ್ದಾನಾ ಎಂದು ಪರಿಶೀಲಿಸಲಾಗುತ್ತಿದೆ. ಜೆಲೆಟಿನ್ ಕಡ್ಡಿ ಹೊರತುಪಡಿಸಿ ಬೇರೆ ಸ್ಫೋಟಕ ವಸ್ತುಗಳು ಸಿಕ್ಕಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.

