ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಸಂಚರಿಸುವ ಬಸ್ಗಳು ಬೈಪಾಸ್ನಲ್ಲಿ ಹೋಗುತ್ತಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ ಬರ ಪೀಡಿತ ಪ್ರದೇಶ ಚಿತ್ರದುರ್ಗದಲ್ಲಿ ಸರ್ಕಾರಿ ಬಸ್ಗಳು ಬೈಪಾಸ್ನಲ್ಲಿ ಸಂಚರಿಸುವುದರಿಂದ ರೈತರು, ಬಡವರು, ಜನಸಾಮಾನ್ಯರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಶಾಲಾ-ಕಾಲೇಜು, ಆಸ್ಪತ್ರೆ
ಮಾರುಕಟ್ಟೆ ಹಾಗೂ ಸರ್ಕಾರಿ ಕಚೇರಿಗಳಿಗೆ ಕೆಲಸ ನಿಮಿತ್ತ ತೆರಳುವವರು ಬೈಪಾಸ್ಗೆ ಹೋಗಿ ಬಸ್ಗಳನ್ನು ಏರಲು ಆಟೋದಲ್ಲಿ ಹೋಗಬೇಕಾಗುತ್ತದೆ. ಇದು ಎಲ್ಲರಿಗೂ ಹೊರೆಯಾಗುತ್ತದೆಂದು ಸಂಕಷ್ಟಗಳನ್ನು ತೋಡಿಕೊಂಡರು.
ಚಿತ್ರದುರ್ಗದಿಂದ ಚಳ್ಳಕೆರೆ, ಹಿರಿಯೂರು, ಬೆಂಗಳೂರಿಗೆ ಹೋಗುವ ಬಸ್ಗಳು ಚಿತ್ರದುರ್ಗದ ಗಾಂಧಿ ಸರ್ಕಲ್ ಮೂಲಕ ಮೈಸೂರು ಬ್ಯಾಂಕ್ ವೃತ್ತ, ಪ್ರವಾಸಿ ಮಂದಿರ, ಆಸ್ಪತ್ರೆ ಮುಂಭಾಗದಿಂದ ಸಾಗಬೇಕೆಂದು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದರೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ಗಳು ಬೈಪಾಸ್ ಮೂಲಕ ಚಲಿಸುತ್ತಿವೆ. ಕೂಡಲೆ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಹೆದ್ದಾರಿ ಬಂದ್ ಮಾಡುವುದಲ್ಲದೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಘೇರಾವ್ ಹಾಕಲಾಗುವುದೆಂದು ಕೆ.ಪಿ.ಭೂತಯ್ಯ ಎಚ್ಚರಿಸಿದರು.
ಬೆಳೆ ವಿಮೆ ಪಾವತಿಸಿರುವ ರೈತರಿಗೆ ಬೆಳೆ ಪರಿಹಾರ ಹಾಗು ಮಧ್ಯಂತರ ಪರಿಹಾರ ಜ.೨೦ ರೊಳಗೆ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಆಗಬೇಕೆಂದು ಕೆ.ಪಿ.ಭೂತಯ್ಯ ಆಗ್ರಹಿಸಿದರು.
ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಧನಂಜಯ ಹಂಪಯ್ಯನಮಾಳಿಗೆ, ಎಂ.ಬಿ.ತಿಪ್ಪೇಸ್ವಾಮಿ, ಕೆ.ಸಿ.ಹೊರಕೇರಪ್ಪ, ಆರ್.ಚೇತನ, ಎನ್.ಮಲ್ಲಿಕಾರ್ಜುನಪ್ಪ,
ಬಸ್ತಿಹಳ್ಳಿ ಜಿ.ಸುರೇಶ್ಬಾಬು, ನಿತ್ಯಶ್ರಿ, ತಿಪ್ಪೇಸ್ವಾಮಿ, ಅಜ್ಜಯ್ಯ, ಬಿ.ಓ.ಶಿವಕುಮಾರ್, ಓ.ಟಿ.ತಿಪ್ಪೇಸ್ವಾಮಿ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

