ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಬೇಸಿಗೆ ಬಿಸಿಲು ಹೆಚ್ಚಾಗಿರುವುದರಿಂದ ಪರಿವರ್ತಕಗಳು ಸುಟ್ಟಾಗ ಇಲಾಖೆ ಕೊಡುವ ವಿದ್ಯುತ್ ಪರಿವರ್ತಕಗಳು ಕಳಪೆಯಾಗಿವೆ.
ಬೆಸ್ಕಾಂ ನೀಡುತ್ತಿರುವ ದುರಸ್ತಿಯಾದ ಪರಿವರ್ತಕಗಳು ಕಳಪೆ ಗುಣಮಟ್ಟದಿಂದ ಕೂಡಿದ್ದು ಕೊಟ್ಟ ಒಂದೆರಡು ದಿನಗಳಲ್ಲಿ ಮತ್ತೆ ಮತ್ತೆ ಸುಟ್ಟು ಹೋಗುತ್ತಿವೆ. ಇದರಿಂದ ರೈತರ ಬೆಳೆಗಳು ಒಣಗಿ ತೀವ್ರತರದ ನಷ್ಟವುಂಟಾಗುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳಪೆ ಗುಣಮಟ್ಟದ ವಿದ್ಯುತ್ ನೀಡುತ್ತಿರುವವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಉತ್ತಮ ಗುಣಮಟ್ಟದ ಪರಿವರ್ತಕಗಳನ್ನು ರೈತರಿಗೆ ನೀಡಬೇಕು ಬೇಸಿಗೆ ಮುಗಿಯುವತನಕ ಅಧಿಕಾರಿಗಳು ರೈತರಿಗೆ ಯಾವುದೇ ವಿಧವಾದ ವಿದ್ಯುತ್ ಸಮಸ್ಯೆಯಾಗದಂತೆ ಪೂರ್ಣ ಪ್ರಮಾಣದ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ರೈತರು ಆಗ್ರಹ ಮಾಡಿದ್ದಾರೆ.
ಇದೇ ರೀತಿಯ ಸಮಸ್ಯೆಗಳು ತಲೆದೂರಿದಲ್ಲಿ ತಮ್ಮ ಇಲಾಖೆಯ ಮುಂದೆ ಧರಣಿ ಸತ್ಯಾಗ್ರಹದ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಬೆಸ್ಕಾಂ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಯಿತು ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಕಾತ್ರಿಕೇನಹಳ್ಳಿ ತಿಳಿಸಿದರು.
ಇದಕ್ಕೆ ಉತ್ತರಿಸಿದ ಇಲಾಖೆಯ ಕಾರ್ಯ ನಿರ್ವಾಹಕ ಅಭಿಯಂತರ ಅಶೋಕ್ ಹೆಡಗೆವಾರ್ ರವರು ಇನ್ನು ಮುಂದೆ ಈ ರೀತಿಯ ಯಾವುದೇ ಲೋಪ ದೋಷಗಳು ಬರದಂತೆ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ರೈತರ ಹಿತ ಕಾಪಾಡಿಕೊಂಡು ಬರುವ ಜವಾಬ್ದಾರಿ ತಮ್ಮೆಲ್ಲರ ಹೊಣೆ ಎಂದು ಅಧಿಕಾರಿಗಳಿಗೆ ಸೂಚಿಸಿದರು .
ಈ ಸಂದರ್ಭದಲ್ಲಿ ಭಾರತೀಯ ಕಿಸಾನ್ ಸಂಘದ ತಾಲ್ಲೂಕು ಅಧ್ಯಕ್ಷ ಗಡಾರಿ ಕೃಷ್ಣಪ್ಪ, ತಾಲ್ಲೂಕು ಕಾರ್ಯದರ್ಶಿ ಚಂದ್ರಗಿರಿ ದಿಂಡಾವರ, ತಾಲ್ಲೂಕು ಸಹ ಕಾರ್ಯದರ್ಶಿ ಜಯಪ್ರಕಾಶ್ ಕೆ.ಕೆ. ಹಟ್ಟಿ, ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಶಿವಕುಮಾರ್ ಬ್ಯಾಡರಹಳ್ಳಿ, ತಾಲ್ಲೂಕು ಯುವ ಘಟಕದ ಅಧ್ಯಕ್ಷ ಚೇತನ್ ಯಳನಾಡು ಮತ್ತಿತರರು ಭಾಗವಹಿಸಿದ್ದರು.

