ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಅವರ ಕುಟುಂಬದ ವಿರುದ್ಧದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣ ಆರೋಪ ಸಂಬಂಧ ಮುಡಾದ ಮಾಜಿ ಆಯುಕ್ತ ಜಿ.ಟಿ. ದಿನೇಶ್ಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬಂಧಿಸಿದ್ದಾರೆ.
ನೋಟಿಸ್ಹಿನ್ನೆಲೆಯಲ್ಲಿ ಶಾಂತಿನಗರದ ಇ.ಡಿ. ಕಚೇರಿಗೆ ಮಂಗಳವಾರ ವಿಚಾರಣೆಗೆ ಹಾಜರಾಗಿದ್ದ ದಿನೇಶ್ಕುಮಾರ್ಅವರನ್ನು ಇ.ಡಿ. ಅಧಿಕಾರಿಗಳು ಕೆಲ ಹೊತ್ತು ವಿಚಾರಣೆ ನಡೆಸಿದ ಬಳಿಕ ಸಂಜೆ ಬಂಧಿಸಿದ್ದಾರೆ.
ಬಳಿಕ ಬೌರಿಂಗ್ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆ ಮಾಡಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ನಿವಾಸಕ್ಕೆ ಹಾಜರುಪಡಿಸಿದರು.
ಈ ಪ್ರಕ್ರಿಯೆಗಳು ಮುಗಿದ ಮೇಲೆ ವಿಚಾರಣೆ ನಡೆಸಿದ ನ್ಯಾಯಾಧೀಶರು ಇ.ಡಿ. ಅಧಿಕಾರಿಗಳ ಮನವಿ ಮೇರೆಗೆ ಹೆಚ್ಚಿನ ವಿಚಾರಣೆಗಾಗಿ ದಿನೇಶ್ಕುಮಾರ್ಅವರನ್ನು ಇ.ಡಿ. ವಶಕ್ಕೆ ನೀಡಿದರು.
ಹಿನ್ನೆಲೆ: 2022ರಲ್ಲಿ ದಿನೇಶ್ ಕುಮಾರ್ ಅವರು ಮುಡಾ ಆಯುಕ್ತರಾಗಿದ್ದರು. ಇವರ ಅವಧಿಯಲ್ಲಿ 50:50ರ ಅನುಪಾತದಲ್ಲಿ ನೂರಾರು ಕೋಟಿ ರೂ. ಮೌಲ್ಯದ ನಿವೇಶನಗಳನ್ನು ಅಕ್ರಮವಾಗಿ ಹಂಚಿದ ಆರೋಪ ಕೇಳಿ ಬಂದಿತ್ತು. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಕೋಟ್ಯಂತರ ರೂ. ಮೌಲ್ಯದ 14 ಬದಲಿ ನಿವೇಶನ ಕೊಡಿಸುವಲ್ಲಿ ಪ್ರಭಾವ ಬೀರಿರುವ ಆರೋಪ ಕೇಳಿ ಬಂದಿತ್ತು.
ಈ ಸಂಬಂಧ ಇ.ಡಿ. ಅಧಿಕಾರಿಗಳು ಅಕ್ರಮ ಹಣ ವರ್ಗಾಣೆ ತಡೆ ಕಾಯ್ದೆ(ಪಿಎಂಎಲ್ಎ) ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದು, 2024ರ ಅ. 28ರಂದು ದಿನೇಶ್ಕುಮಾರ್ ಅವರ ಬಾಣಸವಾಡಿಯಲ್ಲಿರುವ ಮನೆಯ ಮೇಲೆ ದಾಳಿ ನಡೆಸಿ ಶೋಧಿಸಿದ್ದರು. ಈ ವೇಳೆ ದಿನೇಶ್ ಕುಮಾರ್ವಾಯು ವಿಹಾರಕ್ಕೆ ತೆರಳಿದ್ದರು.
ಇ.ಡಿ. ಅಧಿಕಾರಿಗಳು ಶೋಧ ಕಾರ್ಯದ ಬಳಿಕ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದ್ದರು. ನೋಟಿಸ್ ಹಿನ್ನೆಲೆಯಲ್ಲಿ ನ. 9 ರಂದು ಇ.ಡಿ. ಅಧಿಕಾರಿಗಳ ಎದುರು ಹಾಜರಾಗಿದ್ದ ದಿನೇಶ್ ಕುಮಾರ್ವಿಚಾರಣೆ ಎದುರಿಸಿದ್ದರು.
ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಆರೋಪ ಕೇಳಿಬಂದ ಬೆನ್ನಲ್ಲೇ ಮುಡಾ ಆಯುಕ್ತ ದಿನೇಶ್ ಕುಮಾರ್ ಅವರನ್ನು ರಾಜ್ಯ ಸರ್ಕಾರ ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವ ಹುದ್ದೆಗೆ ವರ್ಗಾಯಿಸಿತ್ತು. ಸರ್ಕಾರದ ಈ ಆದೇಶವು ತೀವ್ರ ಟೀಕೆಗೆ ಗುರಿಯಾದ ಹಿನ್ನೆಲೆಯಲ್ಲಿ ವರ್ಗಾವಣೆ ಆದೇಶ ರದ್ದುಗೊಳಿಸಲಾಗಿತ್ತು. ಬಳಿಕ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ದಿನೇಶ್ಕುಮಾರ್ಅವರನ್ನು ಸೇವೆಯಿಂದ ಅಮಾನತುಗೊಳಿಸಿದ್ದನ್ನು ಸ್ಮರಿಸಬಹುದಾಗಿದೆ.

