ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಪ್ರಥಮ ವರದಿ ಸಲ್ಲಿಕೆಯ ಸುವರ್ಣ ಮಹೋತ್ಸವದ ಅಂಗವಾಗಿ ವಸಂತ ನಗರದ ಡಿ.ದೇವರಾಜ ಅರಸು ಭವನದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರುಗಳು ಎಲ್.ಜೆ.ಹಾವನೂರು ಅವರ ಪ್ರತಿಮೆ ಅನಾವರಣಗೊಳಿಸಿ, ಶುಭ ಕೋರಿದರು.
ಶೋಷಿತ ವರ್ಗಗಳ ಕಲ್ಯಾಣಕ್ಕೆ ಶ್ರಮಿಸಿದ ಎಲ್.ಜಿ.ಹಾವನೂರು ಮಹನೀಯರಿಗೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು.
ರಾಣೆಬೆನ್ನೂರು ತಾಲೂಕಿನಲ್ಲಿ ಜನಿಸಿದ ಎಲ್.ಜಿ.ಹಾವನೂರು (ಲಕ್ಷ್ಮಣ ಗುಂಡಪ್ಪ ಹಾವನೂರು) ಅವರು ವಕೀಲ ವೃತ್ತಿಯಲ್ಲಿ ಶೋಷಿತ ವರ್ಗಗಳ ಏಳಿಗೆಗಾಗಿ ಶ್ರಮಿಸಿದ್ದರು.

ಇವರ ಕಾಳಜಿಯನ್ನು ಗುರುತಿಸಿದ ದೇವರಾಜ ಅರಸು ಅವರು ಎಲ್.ಜಿ.ಹಾವನೂರು ಅವರನ್ನು ಹಿಂದುಳಿದ ವರ್ಗಗಳ ಅಧ್ಯಯನ ಆಯೋಗದ ಅಧ್ಯಕ್ಷರನ್ನಾಗಿ ಮಾಡಿದ್ದರು ಎಂದು ಡಿಸಿಎಂ ಶಿವಕುಮಾರ್ ಹೇಳಿದರು.

