ಚಿತ್ರದುರ್ಗ, ಬೆಂಗಳೂರು ಸೇರಿ ವಿವಿಧೆಡೆ ಭಾರಿ ಮಳೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೇಸಿಗೆ ಧಗೆಯಿಂದ ಹೈರಾಣಾಗಿದ್ದ ಬೆಂಗಳೂರು, ಚಿತ್ರದುರ್ಗ ಸೇರಿದಂತೆ ರಾಜ್ಯದ ಮತ್ತಿತರ ಕಡೆಗಳಲ್ಲಿ ಗುರುವಾರ ಬೆಳಗ್ಗೆಯಿಂದಲೆ ಮಳೆ ಸುರಿದಿದೆ.

ಚಿತ್ರದುರ್ಗ ನಗರದಲ್ಲಿ ಮಧ್ಯಾಹ್ನ 1 ಗಂಟೆ ತನಕ ಸೂರ್ಯ ಪ್ರಜ್ವಲಿಸುತ್ತಿದ್ದ. ನಂತರ ಗುಡುಗು ಸಮೇತ ಅರ್ಧ ಗಂಟೆಗೂ ಹೆಚ್ಚು ಕಾಲ ಬಿರುಸಿನ ಮಳೆ ಸುರಿದು ಇಳೆ ತಂಪು ಮಾಡಿತು. ಮಳೆ ಸುರಿದ ನಂತರ ಮೋಡ ಮುಚ್ಚಿದ ವಾತಾವರಣ ಕಂಡು ಬಂದಿತು.
ಬುಧವಾರ ಸಂಜೆ ಹತ್ತಾರು ಹನಿ ಮಳೆ ಬಿದ್ದಿತ್ತು. ಹಿರಿಯೂರು ಸುತ್ತ ಮುತ್ತ ಬುಧವಾರ ರಾತ್ರಿಯೇ ಒಂದಿಷ್ಟು ಮಳೆಯಾಗಿದೆ. ಜಿಲ್ಲೆಯ ಇತರೆಡೆಗಳಲ್ಲಿ ಅಲ್ಲಲ್ಲಿ ಚದುರಿತಂದೆ ಮಳೆಯಾದ ವರದಿಯಾಗಿದೆ. ಹಿರಿಯೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಗುರುವಾರ ಸಂಜೆ 7 ಗಂಟೆಗೆ ಸಾವಕಾಶವಾಗಿ ಆರಂಭಗೊಂಡ ವರ್ಷದ ಮೊದಲ ಮಳೆ ಸುಮಾರು 45 ನಿಮಿಷಗಳಿಗೂ ಅಧಿಕ ಸಮಯ ಬಿರುಸಾಗಿ ಬಿದ್ದುದರಿಂದ ಬೇಸಿಗೆ ಬಿಸಿಲಿಗೆ ಕಾದ ಕಾವಲಿಯಂತಾಗಿದ್ದ ಭೂಮಿ ಸ್ವಲ್ಪ ತಂಪಾಯಿತು. ಹವಾಮಾನದಲ್ಲಿ ಬೇಸಿಗೆಯ ಧಗೆ ಕಡಿಮೆಯಾಗಿ ಜನರು ನಿರಾಳ ಭಾವ ಅನುಭವಿಸುವಂತಾಗಿದೆ.

ಬೆಂಗಳೂರು ನಗರ ಸೇರಿದಂತೆ ನಗರದ ಒಳ ಮತ್ತು ಹೊರವಲಯಗಳಲ್ಲಿ ಗುರುವಾರ ಬೆಳಗ್ಗೆಯೇ ಮಳೆ ಬಿದ್ದಿದೆ. ಪೀಣ್ಯ, ದಾಸರಹಳ್ಳಿ, ಹೆಸರಘಟ್ಟ ಸುತ್ತಮುತ್ತ ವರುಣ ತಂಪೆರೆದಿದ್ದಾನೆ. ನಗರದಲ್ಲಿ ಬೆಳ್ಳಂಬೆಳಗ್ಗೆ ಮೋಡ ಕವಿದ ವಾತಾವರಣ ಇತ್ತು.

ಬೆಂಗಳೂರು ನಗರ ಸೇರಿ ರಾಜ್ಯದ ವಿವಿಧೆಡೆಗಳಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದರ ಬೆನ್ನಲ್ಲೇ ಬೆಂಗಳೂರಿನಾದ್ಯಂತ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುತ್ತಿದೆ.

ಬೆಂಗಳೂರಿನ ಪ್ರಮುಖ ಪ್ರದೇಶಗಳಾದ ವಿಧಾನಸೌಧ, ಶಿವಾಜಿ ನಗರ, ಹೆಚ್ಎಸ್ ಆರ್ ಲೇಔಟ್, ಕೆಆರ್ ಮಾರುಕಟ್ಟೆ, ಚಾಮರಾಜಪೇಟೆ, ಬಸವನಗುಡಿ, ಜಯನಗರ, ಒಆರ್ ಆರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ.
ಯೆಲ್ಲೋ ಅಲರ್ಟ್-

ಏಪ್ರಿಲ್ 3 ರಂದು ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಗರಕ್ಕೆ ಯೆಲ್ಲೋ ಅಲರ್ಟ್ ನೀಡಿದೆ. ಬಿರುಗಾಳಿ ಬೀಸುವ ಸಾಧ್ಯತೆಯೂ ಇದೆ. ನಗರದಲ್ಲಿ ಕನಿಷ್ಠ ತಾಪಮಾನವು ಬೆಳಿಗ್ಗೆ 20 ಡಿಗ್ರಿ ಸೆಲ್ಸಿಯಸ್ ಮತ್ತು ಮಧ್ಯಾಹ್ನ 33 ಡಿಗ್ರಿ ಸೆಲ್ಸಿಯಸ್ ಇರಬಹುದು. ವಾತಾವರಣದಲ್ಲಿ ತೇವಾಂಶವು ಸುಮಾರು 54 ಪ್ರತಿಶತದಷ್ಟು ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರದಲ್ಲಿ ಗುರುವಾರ ಬೆಳಿಗ್ಗೆ ದಿಢೀರ್ ಸುರಿದ ಮಳೆಗೆ ಚಂಡಮಾರುತ ಕಾರಣ ಎಂದು ಹೇಳಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಇದೆ. ಇದರ ಪರಿಣಾಮವಾಗಿ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಒಡಿಶಾ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದು ಚಂಡಮಾರುತವಾಗಿ ಬದಲಾಗಬಹುದು. ಇದರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ.

 ವಿವಿಧ ಜಿಲ್ಲೆಗಳಲ್ಲಿ ಮಳೆ-
ರಾಜಧಾನಿ ಬೆಂಗಳೂರು ಸೇರಿದಂತೆ ಕೋಲಾರ
, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಚಿತ್ರದುರ್ಗ ಮತ್ತಿತರ ಜಿಲ್ಲೆಗಳಲ್ಲೂ ವೇಗದ ಗಾಳಿಯ ಜೊತೆ ಗುಡುಗು ಸಹಿತ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೆ ಬೆಂಗಳೂರಿನಲ್ಲಿ ಮುಂದಿನ ಸೋಮವಾರದವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

 

Share This Article
error: Content is protected !!
";