ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಹಿಳಾ ಉದ್ಯೋಗಿಗಳಿಗೆ ಕಡ್ಡಾಯ ಮುಟ್ಟಿನ ರಜೆ ನೀಡಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶಿಸಿದೆ.
ಬೆಂಗಳೂರು ಹೋಟೆಲ್ ಮಾಲೀಕರ ಸಂಘವು ಮುಟ್ಟಿನ ರಜೆ ಆದೇಶದ ವಿರುದ್ಧ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿ ರದ್ದುಗೊಳಿಸುವಂತೆ ಕೋರಿತ್ತು.
ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಪರ ವಕೀಲರ ವಾದ ಆಲಿಸಿದ ಹೈ ಕೋರ್ಟ್ ಸರ್ಕಾರದ ಆದೇಶಕ್ಕೆ ತಡೆ ನೀಡಿದೆ. ಹೋಟೆಲ್ ಮಾಲೀಕರ ಸಂಘದ ಮಾನ್ಯ ಉಚ್ಚ ನ್ಯಾಯಾಲಯದ ಮುಂದೆ ಮಂಗಳವಾರ ಅರ್ಜಿ ವಿಚಾರಣೆಗೆ ಬಂದಿದ್ದು, ಹೋಟೆಲ್ ಮಾಲೀಕರ ಸಂಘದ ಪರ ವಕೀಲರಾದ ಪ್ರಶಾಂತ್ ಬಿ.ಕೆ ವಾದ ಮಂಡಿಸಿದ್ದರು.
ರಾಜ್ಯ ಸರ್ಕಾರ ಕಳೆದ ನವೆಂಬರ್ 12ರಂದು ವೇತನ ಸಹಿತ ಮುಟ್ಟಿನ ರಜೆ ಕಡ್ಡಾಯಗೊಳಿಸುವ ನಿರ್ಧಾರ ತೆಗೆದುಕೊಂಡಿತ್ತು. ಕಾರ್ಮಿಕ ಇಲಾಖೆಯು ಕಾರ್ಖಾನೆ ಕಾಯ್ದೆ, ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸ್ಥಾಪನೆ ಕಾಯ್ದೆ, ಪ್ಲಾಂಟೇಶನ್ ಕಾರ್ಮಿಕ ಕಾಯ್ದೆ, ಬೀಡಿ ಮತ್ತು ಸಿಗಾರ್ ಕಾರ್ಮಿಕರ ಕಾಯ್ದೆ ಮತ್ತು ಮೋಟಾರ್ ಸಾರಿಗೆ ಕಾರ್ಮಿಕರ ಕಾಯ್ದೆ ಸೇರಿದಂತೆ ಹಲವಾರು ಕಾರ್ಮಿಕ ಕಾನೂನುಗಳ ವ್ಯಾಪ್ತಿಗೆ ಬರುವ ಸಂಸ್ಥೆಗಳು ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ಒದಗಿಸುವಂತೆ ಆದೇಶ ಹೊರಡಿಸಿತ್ತು.
ಸರ್ಕಾರದ ಈ ನಿರ್ಧಾರಕ್ಕೆ ವಿರೋಧ ವ್ಯಕ್ತವಾಗಿದ್ದು, ರಾಜ್ಯ ಸರ್ಕಾರಕ್ಕೆ ಅಂತಹ ಆದೇಶ ಹೊರಡಿಸಲು ಕಾರ್ಮಿಕ ಕಾನೂನುಗಳ ಪ್ರಕಾರ ಅಧಿಕಾರವಿಲ್ಲವೆಂದು ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಹೈಕೋರ್ಟ್ ಮೆಟ್ಟಿಲೇರಿತ್ತು.
1948ರ ಕಾರ್ಖಾನೆ ಕಾಯ್ದೆ, 1961ರ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸ್ಥಾಪನೆ ಕಾಯ್ದೆ, 1951ರ ಪ್ಲಾಂಟೇಶನ್ ಕಾರ್ಮಿಕ ಕಾಯ್ದೆ, 1966ರ ಬೀಡಿ ಮತ್ತು ಸಿಗಾರ್ ಕಾರ್ಮಿಕರ ಕಾಯ್ದೆ ಮತ್ತು 1961ರ ಮೋಟಾರ್ ಸಾರಿಗೆ ಕಾರ್ಮಿಕರ ಕಾಯ್ದೆಯಡಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಸಂಸ್ಥೆಗಳಿಗೆ ಮೇಲೆ ತಿಳಿಸಿದ ನೀತಿ ಅನುಸರಿಸಲು ನಿರ್ದೇಶನ ನೀಡುವ ಅಧಿಸೂಚನೆ ಹೊರಡಿಸಿದೆ. ಆದರೆ ರಜೆ ನೀತಿಗಳು ವೈಯಕ್ತಿಕ ಸಂಸ್ಥೆಗಳಿಗೆ ಆಂತರಿಕ ಆಡಳಿತಾತ್ಮಕ ವಿಷಯವಾಗಿ ಉಳಿಯಬೇಕು ಎಂದು ಹೋಟೆಲ್ ಮಾಲೀಕರ ಸಂಘ ಅರ್ಜಿ ಸಲ್ಲಿಸಿತ್ತು.
ಅರ್ಜಿ ಸಲ್ಲಿಸಲು ಸರ್ಕಾರ ಸ್ವತಂತ್ರ: ಹೈಕೋರ್ಟ್
ನ್ಯಾ.ಜ್ಯೋತಿ ಮೂಲಿಮನಿ ಅವರಿದ್ದ ಹೈಕೋರ್ಟ್ ಪೀಠವು ಅಸೋಸಿಯೇಶನ್ ಪರ ವಾದ ಆಲಿಸಿ ಋತುಚಕ್ರ ರಜೆ ಸಂಬಂಧಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.
ಸರ್ಕಾರಿ ಆದೇಶದ ಮೂಲಕ ಕಾಯ್ದೆಯಲ್ಲಿಲ್ಲದ ನಿಯಮ ಜಾರಿಗೊಳಿಸಿದೆ. ಸರ್ಕಾರದ ಏಕಪಕ್ಷೀಯ ಆದೇಶದಿಂದ ಹೋಟೆಲ್ಗಳಿಗೆ ಸಮಸ್ಯೆ ಎಂದು ಹೋಟೆಲ್ ಮಾಲೀಕರ ಸಂಘದ ಪರ ವಕೀಲರಾದ ಪ್ರಶಾಂತ್ ಬಿ.ಕೆ ವಾದ ಮಂಡಿಸಿದ್ದರು.
ಸರ್ಕಾರ ಆದೇಶ ಹೊರಡಿಸುವ ಮುನ್ನ ಸಂಘಟನೆಗಳ ಅಭಿಪ್ರಾಯ ಪಡೆಯಲಾಗಿತ್ತೆ ಎಂದು ಪ್ರಶ್ನೆ ಹಾಕಿದ ನ್ಯಾಯಮೂರ್ತಿಯವರಿಗೆ ಇಲ್ಲ ಎಂದು ಹೋಟೆಲ್ ಮಾಲೀಕರ ಸಂಘದ ಪರ ವಕೀಲರ ಉತ್ತರ ನೀಡಿದ್ದು, ಮುಂದಿನ ವಿಚಾರಣೆವರೆಗೆ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಲಾಗಿದೆ. ಮಧ್ಯಂತರ ತಡೆಯಾಜ್ಞೆ ತೆರವಿಗೆ ಅರ್ಜಿ ಸಲ್ಲಿಸಲು ಸರ್ಕಾರ ಸ್ವತಂತ್ರವೆಂದು ಹೈಕೋರ್ಟ್ ಏಕಸದಸ್ಯ ಪೀಠ ಅಭಿಪ್ರಾಯ ಪಟ್ಟಿದೆ.
ಅಧ್ಯಕ್ಷರ ಹೇಳಿಕೆ ಏನು?
ಮುಟ್ಟಿನ ರಜೆ ಸಂಬಂಧ ಹೈಕೋರ್ಟ್ ನೀಡಿರುವ ತಡೆಯಾಜ್ಞೆಗೆ ಪ್ರತಿಕ್ರಿಯಿಸಿದ ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಗೌರವಾಧ್ಯಕ್ಷ ಪಿ ಸಿ ರಾವ್, ಮುಟ್ಟಿನ ರಜೆ ಆದೇಶ ಮಾಡುವ ಮುನ್ನ ಸರ್ಕಾರ ನಮ್ಮನ್ನು ಕರೆದು ಸರ್ಕಾರ ಚರ್ಚೆಯೇ ಮಾಡಿಲ್ಲ. ಆದೇಶದ ಸಾಧಕ ಬಾಧಕಗಳ ಬಗ್ಗೆ ಸರ್ಕಾರ ಅವಲೋಕನ ಮಾಡಿಯೇ ಇಲ್ಲ.
ಖಾಸಗಿ ವಲಯದಲ್ಲಿ ಕೆಲಸ ಮಾಡುವ ಮಹಿಳಾ ನೌಕರರಿಗೆ ಈಗಾಗಲೇ ಸಾಕಷ್ಟು ರಜೆ ನೀಡುತ್ತಿದ್ದೇವೆ. ಅದರ ಮೇಲೆ ಈಗ ವಾರ್ಷಿಕ 12 ರಜೆ ಕೊಡಬೇಕು ಅನ್ನುವುದು ಕಾನೂನಾತ್ಮಕವಾಗಿಲ್ಲ. ಹೀಗಾಗಿ ಆದೇಶ ಪ್ರಶ್ನೆ ಮಾಡಿ ಮಾನ್ಯ ಹೈಕೋರ್ಟ್ ಮೊರೆ ಹೋಗಿದ್ದೇವೆ. ನಮ್ಮ ಮನವಿಯನ್ನು ಆಲಿಸಿ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.
ರಾಜ್ಯ ಸರ್ಕಾರದ ಈ ರೀತಿಯ ಅವೈಜ್ಞಾನಿಕ ಆದೇಶಗಳಿಂದಾಗಿ ಉದ್ಯಮಗಳ ಮೇಲೆ ಭಾರೀ ಹೊಡೆತ ಬೀಳಲಿದೆ. ಮುಂದಿನ ದಿನಗಳಲ್ಲಾದರೂ ಸರ್ಕಾರ ನಮ್ಮನ್ನು ಕರೆದು ಚರ್ಚೆ ಮಾಡಲಿ ಎಂದು ಅವರು ಆಗ್ರಹ ಮಾಡಿದ್ದಾರೆ.
ವಕೀಲ ಪ್ರಶಾಂತ್ ಬಿ.ಕೆ ಹೇಳಿಕೆ–
ಖಾಸಗಿ ವಲಯಕ್ಕೆ ಮಾತ್ರ ಈಆದೇಶ ಅನ್ವಯವಾಗಲಿದೆ ಎಂದು ಹೇಳಿರುವ ವಕೀಲ ಪ್ರಶಾಂತ್, ನಾವು ಖಾಸಗಿ ವಲಯ ಸಂಬಂಧಪಟ್ಟಂತೆ ವಾದ ಮಂಡನೆ ಮಾಡಿದ್ದೇವೆ. ಆ ವಿಚಾರಕ್ಕೆ ಮಾತ್ರ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಚಳಿಗಾಲದ ಅಧಿವೇಶನ ಮುಗಿದ ಮೇಲೆ ಮತ್ತೆ ವಿಚಾರಣೆಗೆ ಬರಲಿದೆ ಎಂದು ವಕೀಲರು ತಿಳಿಸಿದ್ದಾರೆ.

