ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು :
“ಮನುಷ್ಯನ ದುರಾಸೆಯಿಂದ ಕೂಡಿದ ಸ್ವಾರ್ಥಪರ ಅಭಿವೃದ್ಧಿಯೇ ಇಂದು ಪರಿಸರದ ನಾಶಕ್ಕೆ ಮೂಲ ಕಾರಣವಾಗಿದೆ” ಎಂದು ಕಾಡು ನಾಯಿಗಳ ಕುರಿತಾದ ಸಾಕ್ಷ್ಯ ಚಿತ್ರಕ್ಕಾಗಿ ಪ್ರತಿಷ್ಠಿತ ಅಂತರಾಷ್ಟ್ರೀಯ ಗ್ರೀನ್ ಆಸ್ಕರ್ ಪ್ರಶಸ್ತಿ ವಿಜೇತರು, ಖ್ಯಾತ ವನ್ಯಜೀವಿ ಛಾಯಾಗ್ರಾಹಕರು ಮತ್ತು ಪರಿಸರ ಸಂರಕ್ಷಕ ಕೃಪಾಕರ ಮತ್ತು ಸೇನಾನಿಯವರು ಹೇಳಿದರು.
ಚಿಕ್ಕಮಗಳೂರಿನ ಸರ್ಕಾರಿ ನೌಕರರ ಸಂಘದ ಭವನದಲ್ಲಿ ಚಿಕ್ಕಮಗಳೂರು ಜಿಲ್ಲಾ ಪದವಿಪೂರ್ವ ಕಾಲೇಜುಗಳ ಕನ್ನಡ ಭಾಷಾ ಉಪನ್ಯಾಸಕರ ವೇದಿಕೆಯ ವತಿಯಿಂದ ಇತ್ತೀಚೆಗೆ ನಡೆದ “ಪರಿಸರ ಜಗತ್ತು” ಕುರಿತಾದ ವಿಚಾರ ಸಂಕಿರಣ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳು ಮತ್ತು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದರು.
ಕಾರ್ಯಕ್ರಮ ಉದ್ಘಾಟಿಸಿದ ಚಿಕ್ಕಮಗಳೂರು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಮಂಜುಳ. ಕೆ ಮಾತನಾಡಿ ಮಾನವನ ಬದುಕಿನ ಹಿನ್ನೆಲೆಯಲ್ಲಿ ಪ್ರಕೃತಿಯ ಮಹತ್ವ ತಿಳಿಸುತ್ತಾ ವಿದ್ಯಾರ್ಥಿ ದೆಸೆಯಿಂದಲೇ ಪರಿಸರ ಪ್ರಜ್ಞೆ ಬೆಳೆಯುವಂತೆ ಮಾಡುವುದು ಶಿಕ್ಷಕರ ಮತ್ತು ಪೋಷಕರ ಜವಾಬ್ದಾರಿ ಎಂದು ತಿಳಿಸಿದರು.
ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ದೇವೇಂದ್ರ ಮಾತನಾಡಿ ಇಂತಹ ಒಂದು ಕಾರ್ಯಕ್ರಮದಲ್ಲಿ ನಾನು ಪಾಲ್ಗೊಂಡಿರುವುದು ನನ್ನ ಬದುಕಿನ ಅವಿಸ್ಮರಣೀಯ ಸಂದರ್ಭ ಎಂದು ಹೇಳಿ ಕಾರ್ಯಕ್ರಮಕ್ಕೆ ಶುಭ ಕೋರಿದರು.
ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಕನ್ನಡ ಭಾಷಾ ಉಪನ್ಯಾಸಕರ ವೇದಿಕೆಯ ಅಧ್ಯಕ್ಷ ಕೆ ಆರ್ ಶಿವಕುಮಾರ್ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾದ ಕೃಪಾಕರ ಮತ್ತು ಸೇನಾನಿಯವರನ್ನು ಉಪನ್ಯಾಸಕರಾದ ಮಂಜುನಾಥ್ ರವರು ವಿಶೇಷವಾಗಿ ಪರಿಚಯಿಸಿದರು.
ಉಪನ್ಯಾಸಕ ಎಚ್ ಟಿ ಗಿರೀಶ್ ಸ್ವಾಗತಸಿದರು. ಕನ್ನಡ ಭಾಷಾ ಉಪನ್ಯಾಸಕರ ಸಂಘದ ಗೌರವಾಧ್ಯಕ್ಷ ವಿರೂಪಾಕ್ಷ ಜಿ ಬಿ ವಂದಿಸಿದರು. ಉಪನ್ಯಾಸಕಿ ನವೀನ ಪ್ರಾರ್ಥನಾ ಗೀತೆ ಹಾಡಿದರು. ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ರಚನ್ ನಿರ್ವಹಣೆ ಮಾಡಿದರು.

