ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಆರೋಗ್ಯ ಇಲಾಖೆ ಅಧಿಕಾರಿ ಮತ್ತು ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಮತ್ತು ಉನ್ನತಾಧಿಕಾರಿಗಳು ವಿಫಲರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ.ಬಸವರಾಜ್ ಆರೋಪಿಸಿದರು.
ಇಲ್ಲಿನ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಗ್ಯ ಇಲಾಖೆಯ ಯಾವುದೇ ಬೇಡಿಕೆಗಳನ್ನು ಸರ್ಕಾರ ಈಡೇರಿಸುತ್ತಿಲ್ಲವಾದ್ದರಿಂದ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಹಾಗೂ ಆರೋಗ್ಯ ಇಲಾಖೆಯ ಎಲ್ಲ ವೃಂದದ ನೌಕರರ ಸಂಘದ ಸಹಯೋಗದಲ್ಲಿ ಮೊದಲ ಹಂತದಲ್ಲಿ ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು.
ಸರ್ಕಾರ ಕ್ರಮ ಕೈಗೊಳ್ಳದಿದ್ದರೆ 2ನೇ ಹಂತದಲ್ಲಿ ತುರ್ತು ಸೇವೆಗಳನ್ನು ಒಳಗೊಂಡಂತೆ ಸರ್ಕಾರಿ ವೈದ್ಯಕೀಯ ಸಿಬ್ಬಂದಿ ಸಂಘಗಳು ಮಾರ್ಚ್-16ರಿಂದ ಸಂಪೂರ್ಣ ಕರ್ತವ್ಯ ಬಹಿಷ್ಕಾರ ಮಾಡಲಾಗುತ್ತದೆ ಎಂದು ಅವರು ಎಚ್ಚರಿಸಿದರು.
ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ರಾಜ್ಯ ಸಂಚಾಲಕ ಡಾ.ಅಭಿನವ್ ಮಾತನಾಡಿ, ವೈದ್ಯಕೀಯ ಶಿಕ್ಷಣ ಸ್ವಾಯತ್ತ ಸಂಸ್ಥೆಗಳಲ್ಲಿ ಆರೋಗ್ಯ ಇಲಾಖೆಯ ಎನ್ಕೇಡರ್ ಹುದ್ದೆಗಳಿಗೆ ನೇಮಕಾತಿ, ಮುಂಬಡ್ತಿ ಮತ್ತು ವರ್ಗಾವಣೆ ಇಲಾಖೆಯ ಮೂಲಕವೇ ನಡೆಸಬೇಕು ಎಂದು ತಾಕೀತು ಮಾಡಿದರು.
ಪ್ರತಿ ಮೂರು ವರ್ಷಕ್ಕೊಮ್ಮೆ ತಿದ್ದುಪಡಿ ಮಾಡಬೇಕಾದ ವೃಂದ ಮತ್ತು ನೇಮಕಾತಿ ನಿಯಮಗಳನ್ನು 1973ರಿಂದಲೂ ಪರಿಷ್ಕರಿಸಿಲ್ಲ ಎಂದು ಅವರು ಕಿಡಿಕಾರಿದರು.
ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಡಾ.ಮಧುಕುಮಾರ್ ಮಾತನಾಡಿ ಗುತ್ತಿಗೆ ವೈದ್ಯರು ಮತ್ತು ಎನ್ಎಚ್ಎಂ ಸಿಬ್ಬಂದಿಗೆ ಉದ್ಯೋಗ ಭದ್ರತೆ ಮತ್ತು ಕಾಲಕಾಲಕ್ಕೆ ವೇತನ ಹೆಚ್ಚಳ ನೀಡಬೇಕು. ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಕಾಲಕಾಲಕ್ಕೆ ಸಮರ್ಪಕ ಔಷಧಿ ಸರಬರಾಜು ಮಾಡಬೇಕು ಎಂದು ಅವರು ಒತ್ತಾಯಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ/ ನೌಕರರ ಬೇಡಿಕೆಗಳು ನ್ಯಾಯ ಸಮ್ಮತವಾಗಿವೆ ಕೂಡಲೇ ಈಡೇರಿಸಬೇಕು ಎಂದು ರಾಜ್ಯ ಸರ್ಕಾರವನ್ನು ಅವರು ಒತ್ತಾಯಿಸಿದರು.
ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಲತೇಶ್ ಮುದ್ದಜ್ಜಿ, ದಿವಾಕರ್, ಹನುಮಂತಪ್ಪ ಪೂಜಾರ್, ಡಾ.ಗಿರೀಶ್ ಮತ್ತಿತರರು ಇದ್ದರು.

