ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಭಾರತೀಯ ಪಾರಂಪರಿಕ ಆಯುರ್ವೇದ ಪದ್ಧತಿಯು ಇಂದು ವಿಶ್ವ ಮಾನ್ಯತೆಯನ್ನು ಗಳಿಸಿದೆ ಎಂದು ಚಿತ್ರದುರ್ಗ ಲೋಕಸಭಾ ಸದಸ್ಯರು ಮತ್ತು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಹೊರವಲಯದ ನರಹರಿ ನಗರದ ಶ್ರೀನರಹರೇಶ್ವರ ದೇವಾಲಯದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ಆಯುಷ್ ವೈದ್ಯಾಧಿಕಾರಿಗಳ ಸಂಘ ಚಿತ್ರದುರ್ಗ ಜಿಲ್ಲಾ ಘಟಕ, ಬಾಪೂಜಿ ಆಯುರ್ವೇದಿಕ್ ಕಾಲೇಜು ಮತ್ತು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಶ್ರೀನರಹರಿ ಸೇವಾ ಪ್ರತಿಷ್ಠಾನ ಮತ್ತು ನಾಗ ಸಿಂಹಾದ್ರಿ ಚಾರಿಟೀಸ್ ನ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಎರಡು ದಿನಗಳ “ಉಚಿತ ಆರೋಗ್ಯ ತಪಾಸಣಾ ಶಿಬಿರ”ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಶ್ರೀನರಹರಿ ಸೇವಾ ಪ್ರತಿಷ್ಠಾನವು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಜನರಲ್ಲಿ ಆಯುರ್ವೇದದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಿರುವುದು ನಿಜಕ್ಕೂ ಶ್ಲಾಘನೀಯ ಕಾರ್ಯ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ ನಾಗಸಮುದ್ರ ಅವರು ಬಾಪೂಜಿ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯು ನಡೆಸುವ ಎಲ್ಲಾ ಆರೋಗ್ಯ ತಪಾಸಣಾ ಶಿಬಿರಗಳಿಗೂ ಆಯುಷ್ ಇಲಾಖೆಯಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ಬಾಪೂಜಿ ಆಯುರ್ವೇದಿಕ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ.ಸಿ.ಟಿ.ಬಸವರಾಜಪ್ಪ ಮಾತನಾಡಿ ಮನುಷ್ಯನಿಗೆ ಆರೋಗ್ಯ ಬಹಳ ಮುಖ್ಯವಾಗಿದ್ದು ಭಾರತೀಯ ಸನಾತನ ಆಯುರ್ವೇದ ವೈದ್ಯ ವಿಜ್ಞಾನದ ಉಪಯೋಗವನ್ನು ಜನರಿಗೆ ತಲುಪಿಸುವ ಬಹುದೊಡ್ಡ ಜವಾಬ್ದಾರಿ ಮತ್ತು ಕರ್ತವ್ಯ ನಮ್ಮ ಮೇಲಿದ್ದು ದೈನಂದಿನ ನಮ್ಮ ಆಹಾರ, ವಿಹಾರ ಮತ್ತು ಚಿಂತನೆಗಳು ಯುಕ್ತವಾಗಿರಬೇಕು ಎಂದು ಕಿವಿಮಾತು ಹೇಳಿದ ಅವರು ಸಾರ್ವಜನಿಕರು ಉಚಿತ ಆರೋಗ್ಯ ತಪಾಸಣಾ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ವಿನಂತಿಸಿದರು.
ಪ್ರಾಸ್ತಾವಿಕವಾಗಿ ವೈ ನರಹರಿ ಸದ್ಗುರುಗಳು ಮಾತನಾಡಿದರು. ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಶ್ರೀನರಹರಿ ಸದ್ಗುರು ಆಶ್ರಮದ ಪೀಠಾಧ್ಯಕ್ಷರಾದ ಪರಮಪೂಜ್ಯ ವೈ ರಾಜಾರಾಮ್ ಗುರುಗಳು ಆಶೀರ್ವಚನ ನೀಡಿದರು.
ಕು.ಐಶ್ವರ್ಯ ಪ್ರಾರ್ಥಿಸಿದರು. ಬಿ.ಸಿ.ಸಂಜೀವಮೂರ್ತಿ ಸ್ವಾಗತಿಸಿದರು. ರಾಮಚಂದ್ರಪ್ಪ ವಂದಿಸಿದರು.
ಈ ಸಂದರ್ಭದಲ್ಲಿ ಡಾ.ಉದಯ ಭಾಸ್ಕರ್, ಡಾ.ಲಕ್ಷ್ಮೀ ನಾರಾಯಣ್, ಡಾ.ಅರುಣ್, ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ, ವೆಂಕಟೇಶಮೂರ್ತಿ, ಮಲ್ಲಿಕಾರ್ಜುನಪ್ಪ, ರೇವಣಸಿದ್ದಪ್ಪ, ಮಾರುತಿ, ಸುಹಾಸ್, ಯತೀಶ್ ಎಂ ಸಿದ್ದಾಪುರ, ಡಾ.ಹೃತಿಕ್, ಮಾನಸ,ಸಂಜನಾ ಸೇರಿದಂತೆ ವಿವಿಧ ತಜ್ಞ ವೈದ್ಯರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

