ಸರ್ಕಾರಕ್ಕೆ ಬೆದರಿಸಿ ಬ್ಯಾಕ್‌ ಮೇಲ್‌ಮಾಡೋಕೆ ಆಗಲ್ಲ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೂಲಸೌಭ್ಯ ಕೊರತೆಯ ನೆಪ ಹೇಳಿ ಸರ್ಕಾರಕ್ಕೆ ಬೆದರಿಕೆ ಹಾಕಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಚ್ಚರಿಸಿದರು.

ಗುರುವಾರ ಅವರು ರಾಷ್ಟ್ರೀಯ ಮಾಧ್ಯಮವೊಂದರ ಜೊತೆ ಸಂದರ್ಶನದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಬೆಂಗಳೂರಿನ ಸೌಲಭ್ಯಗಳ ಬಗ್ಗೆ ಕಂಪನಿಗಳಿಗೆ ಅಸಮಾಧಾನವಿದ್ದರೆ ಬೆಂಗಳೂರು ತೊರೆಯಲು ಅಂಥಹ ಕಂಪನಿಗಳು ಸ್ವತಂತ್ರವಾಗಿವೆ. ಆದರೆ ಮೂಲಸೌಕರ್ಯಗಳನ್ನು ಸರಿಪಡಿಸಲು ಸರ್ಕಾರ ಬದ್ಧವಾಗಿದೆ. ರಸ್ತೆ ಗುಂಡಿಗಳನ್ನು ಮುಚ್ಚಲು ನವೆಂಬರ್ ಗಡುವು ನೀಡಲಾಗಿದೆ. ಬೆಂಗಳೂರಿನ ಬೆಳವಣಿಗೆ ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ಡಿಸಿಎಂ ಅವರು ತಿಳಿಸಿದರು.

- Advertisement - 

ಬೆಂಗಳೂರಿನ ಬಗ್ಗೆ ತೃಪ್ತಿ ಇಲ್ಲವೆಂದು ಹೋಗೋರನ್ನ ತಡೆಯಲ್ಲ. ಆದರೆ, ಸರ್ಕಾರಕ್ಕೆ ಬೆದರಿಸಲು, ಬ್ಯಾಕ್‌ಮೇಲ್‌ಮಾಡೋಕೆ ಬರಬೇಡಿ. ಕಂಪನಿಗಳು ತಮ್ಮ ಸ್ಥಳವನ್ನು ಬದಲಾಯಿಸುವ ನಿರ್ಧಾರವು ವ್ಯಾಪಾರ ಸಮಸ್ಯೆಗಳ ಕಾರಣದಿಂದಾಗಿರಬಹುದು ಎಂದು ಶಿವಕುಮಾರ್ ಹೇಳಿದರು.

ಬೆಂಗಳೂರು ನೀಡುವ ಸೌಲಭ್ಯಗಳು ಮತ್ತು ಪ್ರತಿಭೆಗಳಿಂದ ತೃಪ್ತರಾಗದಿದ್ದರೆ ಯಾರಾದರೂ ಸ್ಥಳಾಂತರಗೊಳ್ಳಲು ಸ್ವತಂತ್ರರು. ಆದರೆ, ಅವರು ಸರ್ಕಾರವನ್ನು ಬೆದರಿಸಲು ಸಾಧ್ಯವಿಲ್ಲ. ಸರ್ಕಾರವನ್ನು ಬ್ಲ್ಯಾಕ್‌ ಮೇಲ್ ಮಾಡಬಾರದು, ಅದು ಕೆಲಸ ಮಾಡುವುದಿಲ್ಲ. ನಾವು ರಾಜ್ಯದ ಜನರಿಗೆ ಸೇವೆ ಸಲ್ಲಿಸಬೇಕು. ಯಾರೂ ಬೆಂಗಳೂರಿನಿಂದ ಹೊರಹೋಗುವುದಿಲ್ಲ. ಇದನ್ನು ದಾಖಲಿಸಿಕೊಳ್ಳಿ ಎಂದು ಡಿಸಿಎಂ ಹೇಳಿದರು.

- Advertisement - 

ನಾವು ಒದಗಿಸುವ ಮೂಲಸೌಕರ್ಯವನ್ನು ಯಾರೂ ನೀಡಲು ಸಾಧ್ಯವಿಲ್ಲ. ಬೆಂಗಳೂರಿಗೆ ಬರುವ ಮೊದಲು, ಅದು ಏನು ನೀಡುತ್ತದೆ ಎಂಬುದನ್ನು ನೋಡಿಯೇ ಬರುವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಡಿಸಿಎಂ ಶಿವಕುಮಾರ್ ಅಭಿಪ್ರಾಯಪಟ್ಟರು.

ಬೆಂಗಳೂರಿನ ಇತಿಹಾಸದಲ್ಲಿ ಮೊದಲ ಬಾರಿಗೆ 112 ಕಿ.ಮೀ. ಫ್ಲೈಓವರ್‌ಗಳು ಮತ್ತು 44 ಕಿ.ಮೀ.ಗಿಂತ ಹೆಚ್ಚು ಎತ್ತರದ ಡಬಲ್ ಡೆಕ್ಕರ್ ರಸ್ತೆಗಳನ್ನು ನಿರ್ಮಿಸುತ್ತಿದ್ದೇವೆ. ಈ ಕೆಲಸ ಶೀಘ್ರದಲ್ಲಿಯೇ ಮುಕ್ತಾಯವಾಗಲಿವೆ. ಬೆಂಗಳೂರು ವೇಗವಾಗಿ ಬೆಳೆಯುತ್ತಿರುವ ಬೃಹತ್ ನಗರವಾಗಿದೆ ಮತ್ತು ಪ್ರತಿದಿನ ನೂರಾರು ಕಂಪನಿಗಳು ಇಲ್ಲಿಗೆ ಬರುತ್ತಿವೆ ಎಂದು ಡಿಸಿಎಂ ಅವರು ತಿಳಿಸಿದರು.

ಗುಂಡಿ ಮುಚ್ಚಲು ನವೆಂಬರ್‌ಗಡುವು-
ಬದ್ಧತೆಯಿಂದ ಕೆಲಸ ಮಾಡಿ ಸಮಸ್ಯೆ ಬಗೆ ಹರಿಸಲು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಈಗಾಗಲೇ ಹಣ ಬಿಡುಗಡೆಯಾಗಿದೆ. ಗುತ್ತಿಗೆದಾರರು ಕೆಲಸ ಕೈಗೊಂಡಿದ್ದಾರೆ. ಬೆಂಗಳೂರಿನ ಸ್ವಚ್ಛತೆ ಮತ್ತು ಗುಂಡಿಗಳನ್ನು ಸರಿಪಡಿಸುವುದು ನಮ್ಮ ಆದ್ಯತೆಯಾಗಿದೆ ಎಂದು ತಿಳಿಸಿದರು.

ನವೆಂಬರ್ ಒಳಗೆ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗುತ್ತಿಗೆದಾರರಿಗೆ ಅಂತಿಮ ಗಡುವು ನೀಡಲಾಗಿದೆ. ಸ್ವಚ್ಛ ಬೆಂಗಳೂರು ಹಾಗೂ ಸುಗಮ ಸಂಚಾರವೇ ನಮ್ಮ ಗುರಿ. ಆದಷ್ಟು ಬೇಗ ರಸ್ತೆ ಗುಂಡಿಗಳಿಗೆ ಜಿಬಿಎ ಮುಕ್ತಿ ನೀಡಲಿದೆ ಎಂದು ಶಿವಕುಮಾರ್ ಭರವಸೆ ನೀಡಿದರು.

 

Share This Article
error: Content is protected !!
";