ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಮದ್ಯ ಮುಕ್ತ ರಾಜ್ಯವನ್ನಾಗಿಸಲು ಸರ್ಕಾರಕ್ಕೆ ಹಕ್ಕೊತ್ತಾಯ ಮಾಡಲಾಗುತ್ತಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಉಮರಬ್ಬ ಹೇಳಿದರು.
ನಗರದ ಎಬಿಎಂ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯಿಂದ ಗಾಂಧಿ ಜಯಂತಿ ಅಂಗವಾಗಿ ಗಾಂಧಿ ಸ್ಮೃತಿ, ದುಶ್ಚಟ ಮುಕ್ತ ಸಮಾಜದ ನಿರ್ಮಾಣಕ್ಕಾಗಿ ಶನಿವಾರ ಹಮ್ಮಿಕೊಂಡಿದ್ದ ಬೃಹತ್ಜನ ಜಾಗೃತಿ ಜಾಥಾ ಹಾಗೂ ಪಾನಮುಕ್ತರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.
ಸಮಾಜವನ್ನು ದುಶ್ಚಟಮುಕ್ತವಾಗಿಸುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ನಿಂದ ಮದ್ಯ ವರ್ಜನ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸಮಾಜದ ಗಣ್ಯರ ಸಹಭಾಗಿತ್ವದಲ್ಲಿ ರಾಜ್ಯಮಟ್ಟದ ಜನ ಜಾಗೃತಿ ವೇದಿಕೆ ಸ್ಥಾಪಿಸಿ ಗಣ್ಯರ ಸಹಭಾಗಿತ್ವದಲ್ಲಿ ದುಶ್ಚಟಗಳ ಅನಾಹುತಗಳ ಕುರಿತು ಜನ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಪ್ರತಿವರ್ಷ ಅ.2 ಗಾಂಧಿ ಜಯಂತಿ ಅಂಗವಾಗಿ ಮದ್ಯ ವಿರೋಧಿ ಜಾಥಾ, ಜನಜಾಗೃತಿ ಸಮಾವೇಶ ಏರ್ಪಡಿಸಲಾಗುತ್ತಿದೆ. ಇದುವರೆಗೆ ಯೋಜನೆಯ ವತಿಯಿಂದ 1985ಕ್ಕೂ ಹೆಚ್ಚು ಮದ್ಯ ವರ್ಜನ ಶಿಬಿರಗಳನ್ನು ಆಯೋಜಿಸಿದ್ದು, ಇದರಲ್ಲಿ 1.3 ಲಕ್ಷ ಶಿಬಿರಾರ್ಥಿಗಳು ಮದ್ಯ ವರ್ಜಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈವರೆಗೆ 36 ಮದ್ಯ ವರ್ಜನ ಶಿಬಿರಗಳನ್ನು ಆಯೋಜಿಸಿ 2082 ಶಿಬಿರಾರ್ಥಿಗಳಿಗೆ ಚಿಕಿತ್ಸೆ ನೀಡಲಾಗಿದೆ.
ಜಿಲ್ಲೆಯಲ್ಲಿ719 ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಹಾಗೂ ದುಶ್ಚಟ ವಿವಿಧ ಜಾಗೃತಿ ಸಮಾವೇಶ ನಡೆಸಲಾಗುತ್ತಿದೆ. ರಾಜ್ಯದಲ್ಲಿ 50 ಗ್ರಾಮಗಳನ್ನು ಪಾನಮುಕ್ತ ಗ್ರಾಮವನ್ನಾಗಿ ಮಾಡಿದ್ದು, ಮದ್ಯಮುಕ್ತ ರಾಜ್ಯವನ್ನಾಗಿಸಲು ಸರ್ಕಾರ ಕ್ರಮ ವಹಿಸಬೇಕು. ಶಾಲಾ ಕಾಲೇಜುಗಳ ಬಳಿ ಕಡ್ಡಾಯವಾಗಿ ಮದ್ಯದಂಗಡಿಗೆ ಪರವಾನಗಿ ನೀಡಬಾರದು ಎಂದರು.
ಪವಾಡ ಬಂಜಕ ಹುಲಿಕಲ್ ನಟರಾಜ ಮಾತನಾಡಿ ಕುಡಿತದಿಂದ ಒತ್ತಡ, ಕಾಯಿಲೆಗೆ ತುತ್ತಾಗುತ್ತಿದ್ದಾರೆ, ಮನೆ ಮಠ ಕಳೆದುಕೊಳ್ಳುತ್ತಿದ್ದಾರೆ. ಈ ಶಿಬಿರದಿಂದ ಸಾವಿರಾರು ಮಂದಿ ಪ್ರಯೋಜನ ಪಡೆದುಕೊಂಡು ಉತ್ತಮ ಜೀವನ ನಡೆಸುತ್ತಿದ್ದಾರೆ. ಕುಡಿತ ಬಿಟ್ಟು ಹೊಸ ಜೀವನ ರೂಪಿಸಿ ಕೊಂಡವರು ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಎಚ್.ಎಸ್.ನಾಗೇಶ್ ಮಾತನಾಡಿ ದುಶ್ಚಟ ಮುಕ್ತ ಸಮಾಜದ ನಿರ್ಮಾಣಕ್ಕಾಗಿ ಬೃಹತ್ ಜನ ಜಾಗೃತಿ ಜಾಥಾವನ್ನು ನಗರದ ನೆಲದಾಂಜನೇಯ ದೇಗುಲದಿಂದ ಸಮಾರಂಭದ ವೇದಿಕೆವರೆಗೂ ಬೃಹತ್ ಜಾಥ ಮಾಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಪಾಧ್ಯಕ್ಷರಾದ ನಾಗೇಶ್, ಕೇಂದ್ರ ರೇಷ್ಮೆ ಮಂಡಳಿ ಮಾಜಿ ಅಧ್ಯಕ್ಷ ಕೆ.ಎಂ ಹನುಮಂತರಾಯಪ್ಪ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟಿ ವಿ ರಾಮಸ್ವಾಮಿ, ಮದ್ಯವರ್ಜನ ಶಿಬಿರದ ಅಧ್ಯಕ್ಷ ಕೆ.ಎಂ ಕೃಷ್ಣಮೂರ್ತಿ, ಹುಲಿಕಲ್ ನಟರಾಜ್,
ಗಣ್ಯರಾದ ಮಹಾಲಿಂಗಯ್ಯ ತ.ನಾ.ಪ್ರಭುದೇವ್, ಮಂಜುನಾಥ್ ಟಿ.ಜಿ, ಡಾ.ಕೆಂಪಣ್ಣ , ರವಿ, ತಾಲೂಕು ಯೋಜನಾಧಿಕಾರಿ ದಿನೇಶ್, ಮೇಲ್ವಿಚಾರಕ ಲೋಹಿತ್ಸೇರಿದಂತೆ ಜಿಲ್ಲಾ ಜನಜಾಗೃತಿ ಸದಸ್ಯರು, ತಾಲ್ಲೂಕು ಯೋಜನಾಧಿಕಾರಿಗಳು, ಮೇಲ್ವಿಚಾರಕ ಶ್ರೇಣಿ ಸಿಬ್ಬಂದಿಗಳು ಒಕ್ಕೂಟದ ಪದಾಧಿಕಾರಿಗಳು ಸಂಘದ ಸದಸ್ಯರು ಉಪಸ್ಥಿತರಿದ್ದರು.

