ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಂಗಳೂರಿನಲ್ಲಿ ನಡೆದ ಸುಹಾಸ್ಶೆಟ್ಟಿ ಬರ್ಬರ ಕೊಲೆ ಪ್ರಕರಣವನ್ನು ಜೆಡಿಎಸ್ ಪಕ್ಷವು ತೀವ್ರವಾಗಿ ಖಂಡಿಸಿದೆ.
ಅದಕ್ಷ ಕರ್ನಾಟಕ ಕಾಂಗ್ರೆಸ್ ಸರ್ಕಾರದ ದುರಾಡಳಿತದಲ್ಲಿ ಅರಾಜಕತೆ ತಾಂಡವವಾಡುತ್ತಿದ್ದು, ರಾಜ್ಯದಲ್ಲಿ ಕೋಮು ಸಾಮರಸ್ಯ ಹದಗೆಟ್ಟಿದೆ. ಕಾನೂನು ಸುವ್ಯವಸ್ಥೆ, ಸಂಪೂರ್ಣ ಹಳ್ಳ ಹಿಡಿದಿರುವುದಕ್ಕೆ ಸುಹಾಸ್ಶೆಟ್ಟಿ ಕೊಲೆ ಪ್ರಕರಣವೇ ಪ್ರತ್ಯಕ್ಷ ಸಾಕ್ಷಿ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.
ದಿನನಿತ್ಯ ರೌಡಿಗಳ ಹಾವಳಿ ಮಿತಿಮೀರಿದ್ದು ಕಾಂಗ್ರೆಸ್ಸರ್ಕಾರದಲ್ಲಿ ಗೃಹ ಇಲಾಖೆ ನಿಷ್ಕ್ರೀಯವಾಗಿದೆ. ಅಪರಾಧ ಚಟುವಟಿಕೆಗಳ ಸಂಖ್ಯೆ ದಿನೇ ದಿನೆ ಹೆಚ್ಚಳವಾಗುತ್ತಿದ್ದು, ಕ್ರಿಮಿನಲ್ಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳನ್ನು ಹಿಡಿದು ಹಲ್ಲೆ, ಕೊಲೆ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ.
ಗೃಹ ಸಚಿವ ಪರಮೇಶ್ವರ್ ಅವರೇ, ಪ್ರಕರಣದ ಹಂತಕರನ್ನು ಬಂಧಿಸಿ, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಪಕ್ಷವೂ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.