ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ರಾಜ್ಯದ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಾಗೂ ಭಾಷಾ ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹಾಗೂ ಸರ್ಕಾರದ ಭಾಷಾ ನೀತಿಯ ಅನುಷ್ಠಾನದಲ್ಲಿ ಜನರು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಲು ತಾಲೂಕು ಕಚೇರಿಯಲ್ಲಿ ಮಾನ್ಯ ತಹಶೀಲ್ದಾರ್ ಡಾ.ಮಲ್ಲಪ್ಪ ಕೆ ಯರಗೋಳ ಅವರ ನೇತೃತ್ವದಲ್ಲಿ ಕನ್ನಡ ಜಾಗೃತಿ ಸಮಿತಿ ಸದಸ್ಯರೊಂದಿಗೆ ತಾಲೂಕಿನ ವಿವಿಧ ಕನ್ನಡ ಪರ ಸಂಘಟನೆಗಳ ಉಪಸ್ಥಿತಿಯಲ್ಲಿ ಪೂರ್ವಭಾವಿ ಸಮಾಲೋಚನಾ ಸಭೆಯನ್ನು ನಡೆಸಲಾಯಿತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ತಹಶೀಲ್ದಾರ್ ಡಾ ಮಲ್ಲಪ್ಪ ಕೆ ಯರಗೋಳ ಅವರು ಕರ್ನಾಟಕ ರಾಜ್ಯ ಸರ್ಕಾರ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನೂತನವಾಗಿ ” ಕನ್ನಡ ಜಾಗೃತಿ ಸಮಿತಿ” ಸದಸ್ಯರನ್ನು ನೇಮಕ ಮಾಡಿದೆ.ಈ ಸದಸ್ಯರ ಕಾರ್ಯವ್ಯಾಪ್ತಿ ಹಾಗೂ ಜವಾಬ್ದಾರಿಗಳನ್ನು ನಿರ್ವಹಿಸುವ ಸಂಬಂಧವಾಗಿ ಆಡಳಿತದ ಎಲ್ಲ ಹಂತಗಳಲ್ಲಿಯೂ ಕನ್ನಡವನ್ನು ಕಡ್ಡಾಯವಾಗಿ ಜಾರಿಗೆ ತರಬೇಕೆಂಬುದು ” ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆಶಯವಾಗಿದೆ.
ಈ ದಿಸೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಎಲ್ಲ ಸರ್ಕಾರಿ ಇಲಾಖೆಗಳ ಅಧಿಕಾರಿಗಳು, ಕೈಗಾರಿಕೋದ್ಯಮಿಗಳು, ವಿವಿಧ ಕನ್ನಡ ಪರ ಸಂಘ ಸಂಸ್ಥೆಗಳು ಒಂದುಗೂಡಿ ದಿನಾಂಕ ೩೧-೦೩-೨೦೨೬ ರಂದು ಮಂಗಳವಾರ ದೊಡ್ಡಬಳ್ಳಾಪುರ ನಗರದ ಕನ್ನಡ ಜಾಗೃತ ಪರಿಷತ್ತಿನಲ್ಲಿ “ಕನ್ನಡ ಜಾಗೃತಿ ಸಭೆ” ಹಮ್ಮಿಕೊಳ್ಳಲಾಗಿದ್ದು ಎಲ್ಲ ಇಲಾಖೆಯ ಅಧಿಕಾರಿಗಳು ಕೈಗಾರಿಕೋದ್ಯಮಿಗಳು ವಿವಿಧ ಕನ್ನಡ ಪರ ಸಂಘ ಸಂಸ್ಥೆಗಳು ಹಾಗೂ ಕನ್ನಡ ಮನಸ್ಸುಗಳು ಸಕ್ರಿಯವಾಗಿ ಭಾಗವಹಿಸಬೇಕೆಂದು ಕರೆ ನೀಡಿದರು.
ಸಭೆಯಲ್ಲಿ ಭಾಗವಹಿಸಿದ ಕನ್ನಡ ಪಕ್ಷದ ಸಂಜೀವ ನಾಯಕ ಅವರು ಮಾತನಾಡಿ ಕನ್ನಡ ಜಾಗೃತಿ ಸಭಾ ಕಾರ್ಯಕ್ರಮದ ಯಶಸ್ಸಿಗೆ ಕನ್ನಡ ಪರ ಮನಸ್ಸುಳ್ಳವರ ಒಂದು ಉಪಸಮಿತಿಯನ್ನು ರಚಿಸುವಂತೆ ಸಲಹೆ ನೀಡಿದರು.
ಅದರಂತೆ ಮಾನ್ಯ ತಹಶೀಲ್ದಾರ್ ಅವರನ್ನೊಳಗೊಂಡ ಉಪಸಮಿತಿಗೆ ಸದಸ್ಯರಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ನಗರಸಭೆಯ ಆಯುಕ್ತರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು,ಗ್ರಾಮಾಂತರ ಮತ್ತು ನಗರ ಸರ್ಕಲ್ ಇನ್ಸ್ಪೆಕ್ಟರ್, ನಗರಸಭಾ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ತ.ನ.ಪ್ರಭುದೇವ್,ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಗೋವಿಂದರಾಜು, ಕನ್ನಡ ಜಾಗೃತ ಪರಿಷತ್ತಿನ ಕಾರ್ಯದರ್ಶಿ ಆಂಜನೇಯ, ಉದಯವಾಣಿ ಕನ್ನಡ ದಿನಪತ್ರಿಕೆ ವರದಿಗಾರ ಡಿ.ಶ್ರೀಕಾಂತ್,ಕನ್ನಡ ಜಾಗೃತಿ ಸಮಿತಿಯ ಸದಸ್ಯರುಗಳಾದ ಕೆ.ಮಹಾಲಿಂಗಯ್ಯ,
ನಾಗರತ್ನಮ್ಮ ಜೊತೆಗೆ ರೈತ ಸಂಘದ ತಾಲೂಕು ಅಧ್ಯಕ್ಷ ಹನುಮೇಗೌಡ , ಕನ್ನಡ ಪಕ್ಷದ ಸಂಜೀವ ನಾಯಕ, ಕಸಾಪ ಜಿಲ್ಲಾ ಕಾರ್ಯದರ್ಶಿ ರಾಜಘಟ್ಟ ರವಿ, ಜಿಲ್ಲಾ ಶಿವರಾಜ್ ಕುಮಾರ್ ಅಭಿಮಾನಿಗಳ ಸಂಘದ ಚೌಡರಾಜು,ಡಾ.ರಾಜ್ ಅಭಿಮಾನಿಗಳ ಸಂಘದ ಕಾರ್ಯದರ್ಶಿ ಪರಮೇಶ್, ತಾಲೂಕು ಶಿವರಾಜ್ ಕುಮಾರ್ ಸೇನಾ ಸಮಿತಿ ಅಧ್ಯಕ್ಷ ರಮೇಶ್, ರಾಜ್ ಕುಮಾರ್ ಸಂಘದ ಸು.ನರಸಿಂಹಮೂರ್ತಿ, ಕನ್ನಡ ಪಕ್ಷದ ಅಧ್ಯಕ್ಷ ಡಿ.ವೆಂಕಟೇಶ್ , ಕರವೇ ಚುರುಮುರಿ ಆರಾಧ್ಯ, ಕನ್ನಡ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ನಾಗರಾಜ್ ಹಾಗೂ ಕಲಾವಿದರುಗಳಾದ ಕಿಶೋರ್, ಶಿವರಾಜ್ ಸೇರಿದಂತೆ ಸಮಿತಿ ರಚಿಸಲಾಯಿತು.

