ಕನ್ನಡ ಚಿತ್ರರಂಗ ಮೇಕೆದಾಟು ಪಾದಯಾತ್ರೆಗೆ ಬೆಂಬಲ ನೀಡಕ್ಕೆ ಬೇಸರವಿದೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಧಾನಸೌಧದ ಆವರಣದಲ್ಲಿ
16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಮುಖ್ಯಮಂತ್ರಿಗಳು ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ ಉದ್ಘಾಟಿಸಿದರು.
ಇಂದಿನಿಂದ ಮಾರ್ಚ್
8ರವರೆಗೆ ನಡೆಯಲಿರುವ ಈ ಚಲನಚಿತ್ರೋತ್ಸವವು ಹಲವು ದೇಶ-ವಿದೇಶಗಳ ಸಿನಿಮಾ ಪ್ರದರ್ಶನಕ್ಕೆ ಸಾಕ್ಷಿಯಾಗಲಿದ್ದು, “ಸರ್ವ ಜನಾಂಗದ ಶಾಂತಿಯ ತೋಟ ಎಂಬ” ಪರಿಕಲ್ಪನೆಯಲ್ಲಿ 60 ದೇಶಗಳ ಸುಮಾರು 200 ಅತ್ಯುತ್ತಮ ಚಲನಚಿತ್ರಗಳು ಪ್ರದರ್ಶನಗೊಳ್ಳಲಿವೆ. ಸಿನಿಮಾಸಕ್ತರಿಗೆ ಹಾಗೂ ಸಿನಿಮಾ ಮಾಡುವವರಿಗೆ ಇದೊಂದು ಉತ್ತಮ ವೇದಿಕೆಯಾಗಿದೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.

ಸಿನಿಮಾ ಸಂಬಂಧಿತ ಕಾರ್ಯಕ್ರಮಗಳಲ್ಲಿ ಚಿತ್ರರಂಗ ಭಾಗವಹಿಸಬೇಕು. ನಾವು ನಿಮ್ಮ ಶೂಟಿಂಗ್‌ಗೆ ಅವಕಾಶ ಕೊಡದಿದ್ರೆ, ನೀವು ಹೇಗೆ ಸಿನಿಮಾ ಮಾಡ್ತೀರಿ?. ನಾವೂ ಎಲ್ಲಿ ನಟ್ ಬೋಲ್ಟ್ ಟೈಟ್ ಮಾಡಿ ರಿಪೇರಿ ಮಾಡಬೇಕೋ ಮಾಡುತ್ತೇವೆ. ಇದು ನನ್ನ ವಾರ್ನಿಂಗ್ ಅಂತಲಾದ್ರೂ ತಿಳಿದುಕೊಳ್ಳಿ, ರಿಕ್ವೆಸ್ಟ್ ಅಂತಲಾದ್ರೂ ತಿಳಿದುಕೊಳ್ಳಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದರು.

ವೇದಿಕೆ ಮೇಲಿರುವ ಕೆಲವು ಕಲಾವಿದರು ಹಾಗೂ ರಾಜಕಾರಣಿಗಳ ಮನೆ ಕಾರ್ಯಕ್ರಮವಲ್ಲ. ಚಿತ್ರರಂಗದ ಕಾರ್ಯಕ್ರಮ. ಆದರೆ ಕೆಲವೇ ಕೆಲವು ಪ್ರಮುಖರು ಮಾತ್ರ ಇದ್ದಾರೆ. ಇದು ಕನ್ನಡ ಸಿನಿಮಾ ರಂಗದ ಕಾರ್ಯಕ್ರಮ. ಈ ಕಾರ್ಯಕ್ರಮಕ್ಕೆ ನಟರು, ನಿರ್ಮಾಪಕರು, ನಿರ್ದೇಶಕರು, ಕಲಾವಿದರಲ್ಲದೆ ಮತ್ಯಾರು ಬರುತ್ತಾರೆ? ಶಿವರಾಜಕುಮಾರ್ ಅವರು ಇದನ್ನು ನಮ್ಮ ಮನೆಯ ಹಬ್ಬ ಎಂದು ಹೇಳಿದರು. ಆ ಭಾವನೆ ಚಿತ್ರರಂಗದ ಕಲಾವಿದರು, ನಿರ್ಮಾಪಕರು, ನಿರ್ದೇಶಕರು, ಪ್ರದರ್ಶಕರಿಗೆ ಇಲ್ಲವಾದರೆ, ನಿಮಗೇ ಆಸಕ್ತಿ ಇಲ್ಲವಾದರೆ ಈ ಚಲನಚಿತ್ರೋತ್ಸವವನ್ನು ಯಾಕೆ ಮಾಡಬೇಕು ಎಂದು ಶಿವಕುಮಾರ್ ಪ್ರಶ್ನಿಸಿದರು.

ಚಿತ್ರರಂಗದ ಕಾರ್ಯಕ್ರಮಗಳಿಗೆ ಇಡೀ ಚಿತ್ರರಂಗವೇ ಆಗಮಿಸಬೇಕು. ನಿಮ್ಮ ಕಾರ್ಯಕ್ರಮಕ್ಕೆ ನೀವೇ ಬರದಿದ್ದರೆ ಹೇಗೆ? ಇದನ್ನು ಎಚ್ಚರಿಕೆಯಂತಾದರೂ ಪರಿಗಣಿಸಿ ಅಥವಾ ಮನವಿ ಎಂದಾದರೂ ಪರಿಗಣಿಸಿ. ಈ ಬಗ್ಗೆ ಎಲ್ಲರಿಗೂ ಮಾಹಿತಿ ನೀಡಿ. ಸರ್ಕಾರ ಅನುಮತಿ ನೀಡದೆ ಇದ್ದರೆ ಸಿನಿಮಾ ಚಿತ್ರೀಕರಣಕ್ಕೆ ಅವಕಾಶವೇ ಸಿಗುವುದಿಲ್ಲ. ಯಾರಿಗೆ ಹೇಗೆ ನಟ್ಟು ಬೋಲ್ಟ್ ಟೈಟ್ ಮಾಡಬೇಕು ಎಂಬುದು ನಮಗೆ ಗೊತ್ತಿದೆ ಎಂದು ಡಿಸಿಎಂ ಶಿವಕುಮಾರ್ ಎಚ್ಚರಿಸಿದರು.

ಬೇಸರ ಇದೆ:
ನಾಡು
, ನುಡಿ, ನೆಲ, ಜಲದ ಹೋರಾಟಕ್ಕೆ ಕನ್ನಡ ಚಿತ್ರರಂಗದ ಸಹಕಾರ, ಬೆಂಬಲ, ಬದ್ಧತೆ ಇರಬೇಕು. ಆದರೆ ಮೇಕೆದಾಟು ಹೋರಾಟಕ್ಕೆ ಚಿತ್ರರಂಗದಿಂದ ಸರಿಯಾದ ಸಹಕಾರ ಸಿಗದೇ ಹೋದದ್ದರ ಬಗ್ಗೆ ನೋವು ಮತ್ತು ಸಿಟ್ಟು ಇದೆ. ನನಗೆ ಸಿನಿಮಾ ರಂಗದವರ ಮೇಲೆ ಕೋಪ ಇದೆ. ಚಲನಚಿತ್ರ ವಾಣಿಜ್ಯ ಮಂಡಳಿ, ನಟರ ಮೇಲೆ ಸಿಟ್ಟಿದೆ. ನಾವು ಕಷ್ಟ ಕಾಲದಲ್ಲಿ ಬೆಂಗಳೂರಿಗೆ ಕುಡಿಯುವ ನೀರು ದೊರಕಿಸಲು ನಮ್ಮ ನೀರು, ನಮ್ಮ ಹಕ್ಕು ಎಂದು ಮೇಕೆದಾಟು ಪಾದಯಾತ್ರೆ ಮಾಡಿದೆವು. ಕೋವಿಡ್ ಸಮಯದಲ್ಲಿ ನಾನು, ಸಿದ್ದರಾಮಯ್ಯ ಅವರು ಸುಮಾರು 150 ಕಿ.ಮೀ ಪಾದಯಾತ್ರೆ ಮಾಡಿದೆವು. ನಾವು ನಮ್ಮ ಸ್ವಂತಕ್ಕಾಗಿ ಈ ಹೋರಾಟ ಮಾಡಲಿಲ್ಲ. ರಾಜ್ಯದ ಹಿತಕ್ಕಾಗಿ ನಡೆದೆವು. ಆದರೆ ಖುದ್ದು ಆಹ್ವಾನ ಕೊಟ್ಟರೂ ಒಂದಿಬ್ಬರನ್ನು ಹೊರತುಪಡಿಸಿ ಚಿತ್ರರಂಗದವರು ತಿರುಗಿ ನೋಡಲಿಲ್ಲ ಎಂದು ಡಿಸಿಎಂ ಶಿವಕುಮಾರ್ ತೀವ್ರ ಬೇಸರ ವ್ಯಕ್ತಪಡಿಸಿದರು.

ಮೇಕೆದಾಡು ಪಾದಯಾತ್ರೆಯಲ್ಲಿ ಕಲಾವಿದರ ಪೈಕಿ ಸಾಧು ಕೋಕಿಲ ಹಾಗೂ ದುನಿಯಾ ವಿಜಿ ಅವರನ್ನು ಬಿಟ್ಟರೆ ಮತ್ಯಾರು ಭಾಗವಹಿಸಲಿಲ್ಲ. ಅಸೋಸಿಯೇಷನ್​ನಿಂದ ಕೆಲವರು ಮಾತ್ರ ಬಂದಿದ್ದರು. ಕೆಲವರು ನಟರನ್ನು ಬಳಸಿಕೊಂಡು ನಂತರ ಬಿಸಾಡುತ್ತಾರೆ. ನಾವು ಆ ರೀತಿ ಮಾಡುವುದಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಸಾಧು ಕೋಕಿಲ ಅವರನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರನ್ನಾಗಿ ಮಾಡಿದ್ದೇವೆ. ನಮ್ಮ ಕಷ್ಟ ಕಾಲದಲ್ಲಿ ಯಾರು ನಮಗೆ ಸಹಾಯ ಮಾಡುತ್ತಾರೋ ಅವರನ್ನು ಗುರುತಿಸಬೇಕು. ನಮಗೆ ಎಲ್ಲ ರಂಗದಲ್ಲಿಯೂ ಯಾರ್ಯಾರ ನಾಡಿ ಮಿಡಿತ ಏನಿದೆ ಎಂಬುದರ ಅರಿವಿದೆ. ಕಷ್ಟ ಕಾಲದಲ್ಲಿ ಆಗದಿದ್ದ ಮೇಲೆ ಏನು ಪ್ರಯೋಜನ ಎಂದು ಡಿಸಿಎಂ ಅವರು ಪ್ರಶ್ನಿಸಿದರು.

ಚಿತ್ರರಂಗದ ನಂಟಿದೆ: ನಾನು ಚಿತ್ರ ಪ್ರದರ್ಶಕನಾಗಿದ್ದೆ. ಇಂದಿರಾ ಗಾಂಧಿ ಅವರ ಹೆಸರಲ್ಲಿ ಚಿತ್ರಮಂದಿರ ನಡೆಸಿದ್ದೆ. ಊರಲ್ಲಿ ನಾಲ್ಕು ಟೂರಿಂಗ್ ಟಾಕೀಸ್ ಇದ್ದವು. ಈಗ ಅದನ್ನು ನಿಲ್ಲಿಸಿದ್ದೇನೆ. ಇನ್ನು ನಮ್ಮ ಮಾಲ್​​ಗಳಲ್ಲಿ 23 ತೆರೆಗಳ ಸಿನಿಮಾ ಕೇಂದ್ರಗಳಿವೆ. ಇವುಗಳಲ್ಲಿ ಒಂದರಲ್ಲೂ ಒಂದು ಸಿನಿಮಾ ನೋಡುವ ಸಮಯಾವಕಾಶ ಸಿಕ್ಕಿಲ್ಲ ಎಂದು ಶಿವಕುಮಾರ್ ತಿಳಿಸಿದರು.

ನಾನು ಸಿನಿಮಾ ನೋಡಿಯೇ ನಮ್ಮ ಊರಿನ ಚಿತ್ರ ಮಂದಿರದಲ್ಲಿ ಆ ಸಿನೆಮಾ ಹಾಕುತ್ತಿದ್ದೆ. ಸತ್ಯ ಹರಿಶ್ಚಂದ್ರ ಸಿನಿಮಾವನ್ನು 15 ಬಾರಿ ನೋಡಿದ್ದೆ. ಮದುವೆಯಾದ ನಂತರ ನನ್ನ ಪತ್ನಿಯನ್ನು ಕರೆದುಕೊಂಡು ಈ ಸಿನಿಮಾ ತೋರಿಸಿದ್ದೆ. ಸಾಕಷ್ಟು ರಾಜಕಾರಣಿಗಳಿಗೆ ಚಿತ್ರರಂಗದ ನಂಟಿದೆ. ರಾಜಕಾರಣಿಗಳಲ್ಲಿ ಅನೇಕರು ತಮ್ಮ ಮಕ್ಕಳನ್ನು ಸಿನಿಮಾ ಮೂಲಕ ಜನರಿಗೆ ಪರಿಚಯಿಸಿ ರಾಜಕೀಯಕ್ಕೆ ಕರೆತರುವ ಪ್ರಯತ್ನ ಮಾಡಿದ್ದಾರೆ. ಕೆಲವರು ಯಶಸ್ವಿಯಾದರೆ, ಮತ್ತೆ ಕೆಲವರು ವಿಫಲವಾಗಿದ್ದಾರೆ. ನಮ್ಮ ರಾಜ್ಯದವರೇ ಆದ, ಜಯಲಲಿತಾ, ರಜನಿಕಾಂತ್ ಬೇರೆ ರಾಜ್ಯಗಳಲ್ಲಿ ಬೆಳೆದು ರಾಜ್ಯ ಹಾಗೂ ರಾಷ್ಟ್ರದ ನಾಯಕತ್ವ ವಹಿಸಿದ್ದಾರೆ. ಮುಖ್ಯಮಂತ್ರಿಗಳೂ ಆಗಿದ್ದಾರೆ. ಕಲಾವಿದರು ಬಣ್ಣ ಹಚ್ಚಿ ನಟನೆ ಮಾಡಿದರೆ, ನಾವು ರಾಜಕಾರಣಿಗಳು ಬಣ್ಣ ಹಾಕಿಕೊಳ್ಳದೆ ನಿತ್ಯ ಸಿನಿಮಾ ಮಾಡುತ್ತಿದ್ದೇವೆ ಎಂದು ಕುಮಾರಸ್ವಾಮಿ ಹಾಸ್ಯ ಚಟಾಕಿ ಹಾರಿಸಿದರು.

ಐಫಾ ಪ್ರಶಸ್ತಿ ಚರ್ಚೆ:
ಬೆಂಗಳೂರಿನಲ್ಲಿ ಐಫಾ ಚಲನಚಿತ್ರ ಪ್ರಶಸ್ತಿ ಕಾರ್ಯಕ್ರಮ ನಡೆಸಲು ಒಂದು ತಂಡವೇ ಇಲ್ಲಿಗೆ ಆಗಮಿಸಿ ಸಭೆ ಮಾಡಿದೆ. ಮತ್ತೊಂದು ಸುತ್ತಿನ ಸಭೆ ಬಳಿಕ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡುತ್ತೇನೆ. ಕನ್ನಡ ಸಿನಿಮಾವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದೀರಿ. ಹೀಗಾಗಿ, ನಿಮಗೆ ಅಭಿನಂದನೆ ಸಲ್ಲಿಸಬೇಕು. ನಿಮ್ಮ ಪರಿಶ್ರಮದಿಂದ ಎಲ್ಲಾ ಚಿತ್ರರಂಗ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತಾಗಿದೆ ಎಂದು ನುಡಿದರು.

ಮುಖ್ಯಮಂತ್ರಿಗಳು ಮೈಸೂರಿನಲ್ಲಿ ಫಿಲ್ಮ್ ಸಿಟಿ ಮಾಡಬೇಕು ಎಂದು ಸಂಕಲ್ಪ ಮಾಡಿದ್ದಾರೆ. ಇದಕ್ಕಾಗಿ ಸಲ್ಲಿಕೆಯಾಗಿದ್ದ ಯೋಜನೆ ತಿರಸ್ಕಾರಗೊಂಡಿದ್ದು, ಬಜೆಟ್ ನಂತರ ಕೂತು ಚರ್ಚೆ ಮಾಡಿ ಅಂತಾರಾಷ್ಟ್ರೀಯ ಮಟ್ಟದ ದೊಡ್ಡ ಫಿಲ್ಮ್ ಸಿಟಿ ಮಾಡಲಾಗುವುದು. ಕಲೆ ಯಾರಪ್ಪನ ಮನೆ ಆಸ್ತಿಯಲ್ಲ. ಯಾರು ಬೇಕಾದರೂ ಎಂತಹುದೇ ಎತ್ತರಕ್ಕೆ ಬೆಳೆಯಲು ಅವಕಾಶ ಇದೆ. ನಿಮ್ಮೆಲ್ಲರಿಗೂ ಒಳ್ಳೆಯದಾಗಲಿ, 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಯಶಸ್ವಿಯಾಗಿ ಸಾಗಲಿ. ಸಮಯ ಸಿಕ್ಕರೆ ನಾನು ಸಿನಿಮಾ ವೀಕ್ಷಣೆ ಮಾಡುತ್ತೇನೆ ಎಂದರು.

ಸಿಎಂ ಸಿದ್ದರಾಮಯ್ಯ, ಸಚಿವರಾದ ಜಾರ್ಜ್, ವಿಧಾನ‌ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್, ಖ್ಯಾತ ನಟರಾದ ಶಿವರಾಜ್ ಕುಮಾರ್, ಕಿಶೋರ್ ಕುಮಾರ್, ಮಾಜಿ ಸಚಿವೆ ಉಮಾಶ್ರೀ, ಶಾಸಕರಾದ ಅರ್ಷದ್ ರಿಜ್ವಾನ್, ವಿಪ ಸದಸ್ಯರಾದ ಕೆ.ಗೋವಿಂದರಾಜ್, ನಜೀರ್ ಅಹ್ಮದ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ ಸೇರಿದಂತೆ ಹಲವರು‌ಉಪಸ್ಥಿತರಿದ್ದರು.

 

Share This Article
error: Content is protected !!
";