ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಪುಸ್ತಕ ದಿನಾಚರಣೆ ಅಂಗವಾಗಿ ಕನ್ನಡ ಕರಡು ತಿದ್ದುವ ಕಾರ್ಯಾಗಾರವನ್ನು ಇದೇ ಏ.25 ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆಯ ಶ್ರೀ ಗುರುಶಾಂತೇಶ್ವರ ದಾಸೋಹ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಸಾನಿಧ್ಯ ವಹಿಸುವರು. ಇತಿಹಾಸ ಸಂಶೋಧಕ ಡಾ. ಬಿ.ರಾಜಶೇಖರಪ್ಪ ಉದ್ಘಾಟನೆ ನೆರವೇರಿಸುವರು. ಸಾಹಿತಿ ಕೆ.ರಾಜಕುಮಾರ್ ಅವರು ಕಮ್ಮಟದ ನಿರ್ದೇಶಕರಾಗಿ ಭಾಗವಹಿಸುವರು.
ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಡಾ.ಎಚ್.ವಿ.ವಾಮದೇವಪ್ಪ, ಸಂಸ್ಥೆಯ ವಿಶೇಷಾಧಿಕಾರಿ ವೀರಣ್ಣ ಬಿ.ಜತ್ತಿ ಉಪಸ್ಥಿತರಿರುವರು. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ.ಮಾನಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಡಾ.ಯಣ್ಣೆಕಟ್ಟೆ ಚಿಕ್ಕಣ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಕನ್ನಡ ಪುಸ್ತಕ ಪ್ರಾಧಿಕಾರ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ತಿಳಿಸಿದ್ದಾರೆ.