ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕಾಂತರಾಜ್ ಆಯೋಗದ ಜಾತಿಗಣಿತಿಯ ವರದಿ ಅವೈಜ್ಞಾನಿವಾಗಿದೆ. ಅಲ್ಲದೆ ತಾಂತ್ರಿಕವಾಗಿ ಆ ವರದಿ ಸರಿಯಿಲ್ಲ. ಇದರ ಬಗ್ಗೆ ನಮ್ಮ ತಕರಾರು ಇದೆ. ರಾಜ್ಯದಲ್ಲಿ ಸುಮಾರು ಒಂದೂವರೆ ಕೋಟಿ ವೀರಶೈವ ಲಿಂಗಾಯತ ಸಮುದಾಯದವರಿದ್ದಾರೆ. ಕೆಲವು ಕಡೆ ಜಾತಿಗಣತಿ ಸರಿಯಾಗಿ ಮಾಡಿಲ್ಲ.
ಇದರ ಬಗ್ಗೆ ನಮ್ಮ ರಾಜ್ಯ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ ರವರು ಸರ್ಕಾರದ ಗಮನ ಸೆಳೆಯಲಿದ್ದಾರೆ. ಸರ್ಕಾರ ಅನುಮತಿ ನೀಡಿದರೆ 18 ತಿಂಗಳೊಳಗೆ ರಾಜ್ಯದಲ್ಲಿನ ಲಿಂಗಾಯಿತರ ಜಾತಿ ಜನಗಣತಿಯನ್ನು ನಡೆಸಿ ಅಂಕಿ ಅಂಶವನ್ನು ಸರ್ಕಾರಕ್ಕೆ ನೀಡಲಿದ್ದೇವೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾದ ರಾಜ್ಯ ಉಪಾಧ್ಯಕ್ಷ ಕೆ.ಬಿ.ಶ್ರೀನಿವಾಸ್ ತಿಳಿಸಿದ್ದಾರೆ.
ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸರ್ಕಾರ ನಡೆಸಿದ ಜಾತಿ ಗಣತಿಯಲ್ಲಿ ಲಿಂಗಾಯತ ಸಮುದಾಯದವನ್ನು ಸರಿಯಾದ ಗಣತಿ ಮಾಡಿಲ್ಲ, ಮನೆ ಮನೆಗಳಿಗೆ ಭೇಟಿ ನೀಡಿದೆ ವರದಿ ನೀಡಿದ್ದಾರೆ. ಇದನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾ ಒಪ್ಪುವುದಿಲ್ಲ.
ಇದರ ಬದಲಿಗೆ ನಾವೇ ರಾಜ್ಯದಲ್ಲಿ ಜಿಲ್ಲೆ, ತಾಲ್ಲೂಕು, ಗ್ರಾಮ, ಹೋಬಳಿಯಲ್ಲಿ ಪ್ರವಾಸ ಮಾಡುವುದರ ಮೂಲಕ ನಮ್ಮ ಲಿಂಗಾಯತ ಸಮುದಾಯದವರು ಎಷ್ಟು ಇದ್ದಾರೆ ಎಂಬ ನಿಖರವಾದ ಮಾಹಿತಿಯನ್ನು ಸರ್ಕಾರಕ್ಕೆ ನೀಡಲಾಗುವುದು ಎಂದರು.
ಈಗಾಗಲೇ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ರವರು ವರದಿಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದರು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ವತಿಯಿಂದ ಎಲ್ಲಾ ಜಿಲ್ಲೆಗಳಲ್ಲಿ ಸದಸ್ಯತ್ವ ಅಭಿಯಾನ ನಡೆಯಲಿದೆ. ಪ್ರತಿಯೊಂದು ತಾಲ್ಲೂಕಿನಲ್ಲಿ ಕನಿಷ್ಠ ೧೦ ಸಾವಿರ ಸದಸ್ಯರನ್ನಾಗಿ ಮಾಡುವ ಗುರಿಯನ್ನು ಹೊಂದಲಾಗಿದೆ. ಇದರ ಬಗ್ಗೆ ಈಗಾಗಲೇ ರಾಜ್ಯ ಸಮಿತಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.
ವೀರಶೈವ ಮತ್ತು ಲಿಂಗಾಯತರು ಒಂದೇ ಆಗಿದೆ. ಎಲ್ಲಾ ಜಿಲ್ಲೆಗಳಲ್ಲಿಯೂ ಯುವ ಮತ್ತು ಮಹಿಳಾ ಘಟಕಗಳನ್ನು ರಚನೆ ಮಾಡಲಾಗುವುದು ಇದರಿಂದ ಸಮಾಜದ ಯುವ ಜನತೆ ಹಾಗೂ ಮಹಿಳೆಯರನ್ನು ಸದಸ್ಯರನ್ನಾಗಿ ಮಾಡುವ ಗುರಿ ಹೊಂದಲಾಗಿದೆ ಎಂದರು.
ರಾಜ್ಯದ ಪ್ರತಿ ಜಿಲ್ಲಾ ಕೇಂದ್ರದಲ್ಲಿ ವೀರಶೈವ ಲಿಂಗಾಯತ ಸಮುದಾಯ ಭವನ ಹಾಗೂ ವಿದ್ಯಾರ್ಥಿನಿಯರ ನಿಲಯಗಳನ್ನು ಕಟ್ಟಲು ಭೂಮಿ ಮಂಜೂರು ಮಾಡಬೇಕೆಂದು ಸರ್ಕಾರಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು. ಲಿಂಗಾಯತ ಸಮುದಾಯದ ಕೆಲವು ಉಪ ಪಂಗಡಗಳು ಮಾತ್ರ ಕೇಂದ್ರದ ಒಬಿಸಿಗೆ ಸೇರಿವೆ. ಆದರೆ ವೀರಶೈವ ಲಿಂಗಾಯಿತ ಸಮುದಾಯದ ಎಲ್ಲಾ ಉಪಪಂಗಡಗಳನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಬೇಕೆಂದ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲಾಗಿದೆ. ಈ ಹೋರಾಟದಲ್ಲಿ ಜಯ ಸಿಗಲಿದೆ ಎಂಬ ನಂಬಿಕೆ ಇದೆ. ಇದರ ಬಗ್ಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕೆಂದು ಒತ್ತಾಯಿಸಿದರು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶ್ಯಾಮನೂರು ಶಿವಶಂಕ್ರಪ್ಪ, ರಾಜ್ಯ ಅಧ್ಯಕ್ಷರಾಗಿ ಹಿರಿಯ ನಿವೃತ್ತ ಪೊಲೀಸ್ ಅಧಿಕಾರಿ ಶಂಕರ್ ಬಿದಿರೆಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರ ನೇತೃತ್ವದಲ್ಲಿ ಮಹಾಸಭಾ ನಡೆಯಲಿದೆ. ಹೋರಾಟಗಳು ಸಹಾ ಇವರ ಮುಖಂಡತ್ವದಲ್ಲಿ ನಡೆಯಲಿವೆ ಎಂದರು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾದ ಜಿಲ್ಲಾಧ್ಯಕ್ಷ ಎಂ.ವಿ.ಶಿವಮೂರ್ತಿ ಮಾತನಾಡಿ, ಮಹಾಸಭಾದಿಂದ ಪ್ರತಿ ಜಿಲ್ಲೆಯಲ್ಲಿಯೂ ಹಾನಗಲ್ಲು ಕುಮಾರಸ್ವಾಮಿಯವರ ಸಭಾ ಭವನ ನಿರ್ಮಾಣ ಮಾಡಲು ಮುಂದಾಗಿದ್ದು ಇದರ ನಿರ್ಮಾಣಕ್ಕೆ ಜಾಗ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗುವುದು.
ಸರ್ಕಾರ ಜಾಗ ಗುರುತಿಸಿದೆ. ಮುಂದಿನ ದಿನದಲ್ಲಿ ಭೂಮಿ ಪೂಜೆ ನಡೆಸಲಾಗುವುದು. ನನ್ನ ಅಧಿಕಾರದ ಅವಧಿಯಲ್ಲಿ ಸರ್ಕಾರ, ದಾನಿಗಳ ಸಹಾಯದಿಂದ ಕಟ್ಟಡ ಪೂರ್ಣಗೊಳಿಸಲಾಗುವುದು ಎಂದರು.
ಗೋಷ್ಟಿಯಲ್ಲಿ ಬಸವರಾಜಯ್ಯ, ಶಶಿಧರ್, ನಾಗೇಶ್, ಮಂಜುನಾಥ್, ದಿವಾಕರ್, ಪ್ರಸನ್ನಕುಮಾರ್, ರುದ್ರಪ್ಪ ಗೌಳಿ ಸೇರಿದಂತೆ ಇತರರು ಭಾಗವಹಿಸಿದ್ದರು.