ಮಾರ್ಚ್​ 22ರಂದು ಕರ್ನಾಟಕ ಬಂದ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
 ಬೆಳಗಾವಿಯಲ್ಲಿ ಪುಂಡಾಟ ಮಾಡುತ್ತಿರುವ ಮರಾಠಿ ಸಂಘಟನೆಗಳ ವಿರುದ್ಧ ಮಾರ್ಚ್​ 22ರಂದು ಕರ್ನಾಟಕ ಬಂದ್ ಮಾಡುವ ಮೂಲಕ ಎಚ್ಚರಿಕೆ ನೀಡಲು ಕನ್ನಡ ಪರ ಸಂಘಟನೆಗಳು ಸಜ್ಜಾಗಿವೆ.

ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕರ್ನಾಟಕ ಬಂದ್‌ಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ. ಮಾರ್ಚ್ 22ರಂದು ಬೆಳಗ್ಗೆ 6ರಿಂದ ಸಂಜೆ 6 ಗಂಟೆಯವರೆಗೆ ರಾಜ್ಯಾದ್ಯಂತ ಬಂದ್ ಆಚರಿಸಲು ಉದ್ದೇಶಿಸಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಗೆ ಬಂದ್ ಬಿಸಿ ತಟ್ಟುವುದು ಖಚಿತವಾಗಿದೆ. ಬಂದ್ ಸಂದರ್ಭದಲ್ಲಿ ಸಾರಿಗೆ ಸೇವೆಗಳಾದ ಬಸ್, ಆಟೋ, ಮತ್ತಿತರ ವಾಹನಗಳ ಸಂಚಾರ ನಡೆಸದಂತೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ.

ಸಂಘಟನೆಗಳ ಬೆಂಬಲ: ಮಾ.22 ರಂದು ನಡೆಯಲಿರುವ ಕರ್ನಾಟಕ ಬಂದ್​​ಗೆ ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ ಬಣ ಬೆಂಬಲ ಸೂಚಿಸಿದೆ. ಹೊಟೇಲ್ ಮಾಲೀಕರ ಸಂಘ ನೈತಿಕ ಬೆಂಬಲ ಮಾತ್ರ ಘೋಷಿಸಿದೆ. ಕರ್ನಾಟಕ ಸಾರಿಗೆ ನೌಕರರ ಒಕ್ಕೂಟ ಬಂದ್​​ಗೆ ಬೆಂಬಲ ನೀಡುವ ಭರವಸೆ ನೀಡಿದೆ. ಕೆಎಸ್​ಆರ್​​ಟಿಸಿ, ಬಿಎಂಟಿಸಿ ನೌಕರರ ಸಂಘದಿಂದ ಕೂಡ ಬೆಂಬಲ ವ್ಯಕ್ತವಾಗಿದೆ. ಉಳಿದಂತೆ ಓಲಾ, ಉಬರ್ ಅಸೋಸಿಯೋಷನ್, ಎಪಿಎಂಸಿ ಸೇರಿ ಕೆಲ ಸಂಘಟನೆಗಳು ಬಂದ್​ಗೆ ಬೆಂಬಲ ನೀಡಲು ಸಜ್ಜಾಗಿವೆ.

ಏನೇನು ಬಂದ್ ಆಗಿರುತ್ತೇ?: ಸಿನಿಮಾ ಥಿಯೇಟರ್, ಚಲನಚಿತ್ರ ವಾಣಿಜ್ಯ ಮಂಡಳಿ, ಶಾಪಿಂಗ್ ಮಾಲ್‌ಗಳು, ಬೇಕರಿ, ಬಾರ್ ಅಂಡ್ ರೆಸ್ಟೋರೆಂಟ್, ಅಂಗಡಿ‌, ಬೀದಿಬದಿ ವ್ಯಾಪಾರಿಗಳಿಂದ ಬಂದ್​ಗೆ ಭಾಗಶಃ ಬೆಂಬಲ ವ್ಯಕ್ತವಾಗಿದೆ. ಹೀಗಾಗಿ ಈ ಸೇವೆ ಅಲಭ್ಯವಾಗುವ ಸಾಧ್ಯತೆ ಇದೆ. ಮೆಟ್ರೋ ಸೇವೆ ಕುರಿತು ಅಧಿಕೃತ ಮಾಹಿತಿ ಬರಬೇಕಿದೆ. ಆಸ್ಪತ್ರೆ, ವೈದ್ಯಕೀಯ ಸೇವೆ, ಹಾಲು, ಅಗತ್ಯ ವಸ್ತುಗಳ ಮಾರಾಟ ಎಂದಿನಂತಿರಲಿದೆ.

ಒತ್ತಾಯ ಪೂರ್ವಕ ಬಂದ್ ಮಾಡಿಸುವಂತಿಲ್ಲ:
ಬೆಂಗಳೂರು ಸೇರಿದಂತೆ ರಾಜ್ಯದ ಯಾವುದೇ ಭಾಗದಲ್ಲಿ ಒತ್ತಾಯ ಪೂರ್ವಕವಾಗಿ ಬಂದ್ ಮಾಡಿಸುವಂತಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಎಚ್ಚರಿಸಿದ್ದಾರೆ.
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಅಗತ್ಯ ಪೂರ್ವ ಸಿದ್ಧತೆಗಳನ್ನ ಪೊಲೀಸ್ ಇಲಾಖೆ ಮಾಡಿಕೊಂಡಿದ್ದು
, ಒತ್ತಾಯಪೂರ್ವಕವಾಗಿ ಬಂದ್ ಮಾಡಿಸಲು ಮುಂದಾದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಬಂದ್​ಗೆ ಬೆಂಬಲ ಸೂಚಿಸಿರುವ ಸಂಘಟನೆಗಳ ಮುಖಂಡರನ್ನು ಕರೆಸಿ ಮಾತನಾಡಲಾಗಿದ್ದು, ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿಗಳಾದರೆ ಸಂಘಟನೆಗಳೇ ಜವಾಬ್ದಾರಿಯಾಗಲಿವೆ ಎಂದು ಆಯುಕ್ತರು ಎಚ್ಚರಿಸಿದ್ದಾರೆ.

 

 

- Advertisement -  - Advertisement - 
Share This Article
error: Content is protected !!
";