ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ವಿದ್ಯುನ್ಮಾನ ವಿಭಾಗದಲ್ಲಿ ಅತ್ಯುತ್ತಮ ರಾಜಕೀಯ ವಿಮರ್ಶೆಗಾಗಿ ಕೊಡ ಮಾಡುವ ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ಸುವರ್ಣ ನ್ಯೂಸ್ ಮುಖ್ಯ ಸಂಪಾದಕರಾದ ಅಜಿತ್ ಹನುಮಕ್ಕನವರ ಅವರಿಗೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರದಾನ ಮಾಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ತುಮಕೂರಿನಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ಆಯೋಜಿಸಿದ್ದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಎಂದೂ ಮರೆಯಲಾಗದ, ಅಚ್ಚುಕಟ್ಟಾಗಿ ಸಂಘಟಿಸಿದ ಉತ್ತಮ ಸಮ್ಮೇಳನವಾಗಿತ್ತು ಎಂದರು.
ನಾನು ಗೋಷ್ಠಿಯಲ್ಲಿ ಭಾಗವಹಿಸಿದ ಬಳಿಕ ಅನಿವಾರ್ಯ ಕಾರಣಗಳಿಂದ ತುರ್ತಾಗಿ ತೆರಳಬೇಕಾಗಿತ್ತು. ಹಾಗಾಗಿ ಪ್ರಶಸ್ತಿ ಸ್ವೀಕಾರ ಮಾಡಲು ಸಾಧ್ಯವಾಗಿರಲಿಲ್ಲ ಎಂದರು.
ರಾಜಕೀಯ ವಿಶ್ಲೇಷಣೆಗಾರ ಮತ್ತು ಹಿರಿಯ ಪತ್ರಕರ್ತ ಪ್ರಶಾಂತು ನಾಥು ಮಾತನಾಡಿ, ರಾಜ್ಯ ಪತ್ರಕರ್ತರ ಸಂಘವು, ನಿಜ ಅರ್ಥದಲ್ಲಿ ಕಾರ್ಯ ನಿರತ ಪತ್ರಕರ್ತರ ಸಂಘವಾಗಿಯೇ ಕಾರ್ಯ ನಿರ್ವಹಣೆ ಮಾಡುತ್ತಿರುವುದು ವೃತ್ತಿ ಬಾಂಧವರಿಗೆ ಗೌರವದ ಸಂಗತಿ ಎಂದರು.
ಐಎ್ಡಬ್ಲೂಜೆ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಕೆಯುಡಬ್ಲೂಜೆ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಖಜಾಂಚಿ ವಾಸುದೇವ ಹೊಳ್ಳ, ಶಿವಮೊಗ್ಗ ಘಟಕದ ಜಿಲ್ಲಾಧ್ಯಕ್ಷ ಶಿವಕುಮಾರ್, ಸಾಗರದ ಮಹೇಶ್ ಹೆಗಡೆ ಹಾಜರಿದ್ದರು.