ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಂಸತ್ ಭವನದ ಪ್ರೇರಣಾ ಸ್ಥಳದಲ್ಲಿ ಕನ್ನಡನಾಡಿನ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮನವರ 247ನೇ ಜಯಂತ್ಯೋತ್ಸವ ಮತ್ತು 201ನೇ ವಿಜಯೋತ್ಸವನ್ನು ಆಚರಿಸಿದ ಬಳಿಕ ಕೇಂದ್ರ ಸಚಿವ ವಿ.ಸೋಮಣ್ಣ ಮಾತನಾಡಿದರು.
ವೀರ ರಾಣಿ ಕಿತ್ತೂರು ಚೆನ್ನಮ್ಮರ ಸಾಧನೆ ಮತ್ತು ಕಿತ್ತೂರಿನ ಇತಿಹಾಸವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸ ಆಗಬೇಕಿದೆ. ಈ ನಿಟ್ಟಿನಲ್ಲಿ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅಧಿಕಾರ ನೀಡಿ, ಕಿತ್ತೂರು ಸಂಸ್ಥಾನದ ಕೋಟೆ ಕೊತ್ತಲಗಳಲ್ಲಿ ಸಮರ್ಪಕ ನಿರ್ವಹಣೆ ಮಾಡಬೇಕು ಎಂದು ಸಚಿವ ಸೋಮಣ್ಣ ಆಗ್ರಹ ಮಾಡಿದರು.
ಬೈಲಹೊಂಗಲದಲ್ಲಿರುವ ರಾಣಿ ಚೆನ್ಮಮ್ಮನವರ ಸಮಾಧಿ ಅಭಿವೃದ್ಧಿಗೊಳಿಸಿ, ಅದನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಬೇಕು ಹಾಗೂ ವೀರ ರಾಣಿ ಚೆನ್ನಮ್ಮನವರ ಜೀವನ ಮತ್ತು ಸಾಧನೆ ಕುರಿತು ಭಾರತೀಯ ಎಲ್ಲಾ ಭಾಷೆಗಳಲ್ಲೂ ಪುಸ್ತಕವನ್ನು ಹೊರತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಮನವಿ ಮಾಡಿಕೊಳ್ಳಲಾಗಿದೆ ಎಂದು ಸೋಮಣ್ಣ ತಿಳಿಸಿದರು.
ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ನಾಡು ನುಡಿಯ ಬಗ್ಗೆ ಅಪಾರ ಗೌರವ ಹೊಂದಿರುವ ಮುಖ್ಯಮಂತ್ರಿಗಳು ಈ ದಿಶೆಯಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವ ಭರವಸೆಯಿದೆ ಎಂದು ಸಚಿವರು ಹೇಳಿದರು.

