ಲಿಂಗಾಯಿತರು, ಒಕ್ಕಲಿಗರನ್ನು ಬೈದರೇ ಹಿಂದುಳಿದ ವರ್ಗಗಳ ಹೊಟ್ಟೆ ತುಂಬುವುದೇ?

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಾತಿ ಗಣತಿ ರಾಜಕೀಯ ಫಸಲಿಗೆ ಹೊಂಚು ಹಾಕಿರುವ ಸಿದ್ದರಾಮಯ್ಯನವರೇ.. ಸತ್ಯವನ್ನೇ ಹೇಳಿ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರಶ್ನೆ ಮಾಡಿದ್ದಾರೆ.

ಅತೀ.. ಅತೀ.. ಹಿಂದುಳಿದ ‌A ಪ್ರವರ್ಗದಲ್ಲಿ ಸಿಂಹಪಾಲು ಬೆಣ್ಣೆ ನುಂಗಿದ ಭೂಪರು ಯಾರು? ಕಿರುಬೆರಳ ತುದಿಯಲ್ಲೇ ದತ್ತಾಂಶವಿದೆ. ನೀವು ಸುಳ್ಳು ಹೇಳಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ಅಲ್ಲವೇ? ಸತ್ಯಮೇವ ಜಯತೇ..

ನಿಮಗೂ ಗೊತ್ತು. 2A ಪ್ರವರ್ಗದಲ್ಲಿ 101 ಜಾತಿಗಳಿವೆ, 15% ಮೀಸಲು ಪಾಲು ಇದೆ. ಈ ಪಾಲಿನಲ್ಲಿ ಅತಿಹೆಚ್ಚು ಪಾಲು ನುಂಗಿದವರು ಯಾರು ದೇವ್ರು..? ಈ ನುಂಗುವಿಕೆಯಲ್ಲಿಯೂ ನಿಮ್ಮ ಪಾತ್ರವೇನು ಸ್ವಾಮೀ..? ಸತ್ಯ ಹೇಳಿ ಎಂದು ಸಚಿವ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯದ ದಾಟಿಯಲ್ಲಿ ಖಾರವಾಗಿ ಪ್ರಶ್ನಿಸಿದ್ದಾರೆ.

ಕಳೆದ 15-20 ವರ್ಷಗಳಲ್ಲಿ A B C D ಗ್ರೂಪ್ ಗಳಲ್ಲಿ ನಡೆದಿರುವ ನೇಮಕಾತಿ, ವೃತ್ತಿಪರ ಕೋರ್ಸ್‌ಪ್ರವೇಶ, ಇನ್ನಿತರೆ ಎಲ್ಲಾ ಸೌಲಭ್ಯಗಳ ಅಂಕಿ ಅಂಶ ಸುಳ್ಳು ಹೇಳುವುದಿಲ್ಲ, ಹೌದಲ್ಲವೇ?

ವೃತ್ತಿಪರ ಕೋರ್ಸ್‌; ಅಂದರೆ ಮೆಡಿಕಲ್, ಡೆಂಟಲ್, ಎಂಜಿನಿಯರಿಂಗ್, ಡಿ ಫಾರ್ಮ, ಬಿ ಫಾರ್ಮ, ಕೃಷಿ ಇತ್ಯಾದಿ ವಿಭಾಗಗಳಲ್ಲಿ 2A ಪ್ರವರ್ಗದ ನೂರೊಂದು ಜಾತಿಗಳಲ್ಲಿ ಯಾವ್ಯಾವ ಜಾತಿಯ ಎಷ್ಟೆಷ್ಟು ಮಕ್ಕಳಿಗೆ ಪ್ರವೇಶ ಸಿಕ್ಕಿದೆ. ಇಲ್ಲಿಯೂ ಸಿಂಹಪಾಲು ಪ್ರವೇಶ, ಲಾಭ ದಕ್ಕಿದ್ದು ಯಾರಿಗೆ? ಮಲ್ಲೇಶ್ವರಂ 18ನೇ ಅಡ್ಡರಸ್ತೆಯಲ್ಲಿ (CET) ಸಮಗ್ರ ದತ್ತಾಂಶ ಲಭ್ಯವಿದೆ, ತಾವು ತರಿಸಿ ನೋಡಬಹುದು ಎಂದು ಸಚಿವ ಹೆಚ್.ಡಿ ಕುಮಾರಸ್ವಾಮಿ ಚಾಟಿ ಬೀಸಿದ್ದಾರೆ.

2A ಪ್ರವರ್ಗದ ನೂರೊಂದು ಸಮಾಜಗಳ ಪೈಕಿ ಎಲ್ಲಾ ನೂರು ಸಮಾಜಗಳಲ್ಲಿ ನನ್ನ ಮನವಿ ಇಷ್ಟೇ; ಒಕ್ಕಲಿಗರು, ವೀರಶೈವ ಲಿಂಗಾಯತರ ಕಡೆ ಬೆರಳು ತೋರಿಸಿ ನಿಮ್ಮ ಮೂಗಿಗೆ ಬೆಣ್ಣೆ ಕೊಸರು ಸವರುತ್ತಿದ್ದಾರೆ! ನಿಮ್ಮ ನ್ಯಾಯಯುತ ಪಾಲಿನಲ್ಲಿ ಸಿಂಹಪಾಲು ಕಬಳಿಸಿದ್ದು ಯಾರೆಂದು ನಿಮಗೂ ಚೆನ್ನಾಗಿ ಗೊತ್ತು? ಆದರೂ ಸುಮ್ಮನಿದ್ದೀರಿ! ಯಾಕೆ? ನಿಮ್ಮ ಎದುರು ನಿಂತು ಲಿಂಗಾಯಿತರು, ಒಕ್ಕಲಿಗರನ್ನು ಬೈದರೇ ನಿಮ್ಮ ಹೊಟ್ಟೆ ತುಂಬುವುದೇ? ನಿಮ್ಮ ಮಕ್ಕಳಿಗೆ ನ್ಯಾಯ ಸಿಗುವುದೇ? ಎಂದು ಸಚಿವ ಹೆಚ್.ಡಿ ಕುಮಾರಸ್ವಾಮಿ ಹಿಂದುಳಿದ ವರ್ಗಗಳನ್ನು ಪ್ರಶ್ನಿಸಿದ್ದಾರೆ.

ಅತೀ.. ಅತೀ ಹಿಂದುಳಿದ  2A ಪ್ರವರ್ಗದಲ್ಲಿ ಅತೀ ಹೆಚ್ಚು ಪಾಲು ಬೆಣ್ಣೆ ತಿಂದವರು ಯಾರು? ಈಗಲಾದರೂ ಸತ್ಯ ಹೇಳಿ ಸಿದ್ದರಾಮಯ್ಯನವರೇ.. ನಿಮ್ಮಿಂದ ಉತ್ತರ ನಿರೀಕ್ಷಿಸುತ್ತೇನೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಸವಾಲ್ ಹಾಕಿದ್ದಾರೆ.

 

Share This Article
error: Content is protected !!
";