ಲೋಕಾಯುಕ್ತ, ಉಪ ಲೋಕಾಯುಕ್ತರು ಆಸ್ತಿ ಘೋಷಿಸಲಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಲೋಕಾಯುಕ್ತರು
, ಉಪ ಲೋಕಾಯುಕ್ತರು ಮತ್ತು ನೌಕರರು ಪ್ರತಿ ವಾರ್ಷಿಕ ವರ್ಷದಲ್ಲಿ ತಮ್ಮ ಆಸ್ತಿಗಳನ್ನು ಬಹಿರಂಗಗೊಳಿಸಲು ಕಾಯ್ದೆಗೆ ತಿದ್ದುಪಡಿ ತರಬೇಕೆಂದು ವಿಧಾನಪರಿಷತ್ ಸದಸ್ಯ ರಮೇಶ್ ಬಾಬು ಅವರು ಕಾನೂನು ಸಚಿವ ಹೆಚ್. ಕೆ. ಪಾಟೀಲ್​ಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಕರ್ನಾಟಕ ಲೋಕಾಯುಕ್ತ ಕಾಯ್ದೆ ಅನ್ವಯ ಪ್ರತಿ ವರ್ಷ ವಿಧಾನಮಂಡಲದ ಸದಸ್ಯರು ತಮ್ಮ ಆಸ್ತಿಯ ವಿವರಗಳನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಕೆ ಮಾಡಬೇಕಾಗಿರುತ್ತದೆ. ತಮ್ಮ ಆಸ್ತಿ ವಿವರಗಳನ್ನು ಜೂನ್ 30ರ ಒಳಗೆ ಸಲ್ಲಿಸದ ಶಾಸಕರ ಪಟ್ಟಿಯನ್ನು ಲೋಕಾಯುಕ್ತ ಕಾಯ್ದೆಯ ಪ್ರಕಾರ ಬಿಡುಗಡೆ ಮಾಡಿರುತ್ತದೆ.

- Advertisement - 

ಸಾರ್ವಜನಿಕ ಹಿತದೃಷ್ಟಿಯಿಂದ ಇದು ಅವಶ್ಯಕತೆ ಇರುತ್ತದೆ. ಅದೇ ರೀತಿ ಲೋಕಾಯುಕ್ತ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ಲೋಕಾಯುಕ್ತರು/ ಉಪ ಲೋಕಾಯುಕ್ತರು ತಮ್ಮ ಆಸ್ತಿ ಪಟ್ಟಿ ಪ್ರಕಟಿಸುವುದು ಸಾರ್ವಜನಿಕ ಹಿತದೃಷ್ಟಿಯಿಂದ ಅವಶ್ಯಕ ಎಂದು ರಮೇಶ್ ಬಾಬು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಕ್ಕೆ ಜುಲೈ 12, 2021ರಲ್ಲಿ ನಾನು ಒಂದು ಮನವಿ ಮಾಡಿ ಕರ್ನಾಟಕ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ಮಾಡಿ ಲೋಕಾಯುಕ್ತದಲ್ಲಿ ಕಾರ್ಯನಿರ್ವಹಿಸುವ ಲೋಕಾಯುಕ್ತರು ಮತ್ತು ಉಪ ಲೋಕಾಯುಕ್ತರು ಸಾರ್ವಜನಿಕ ಹಿತದೃಷ್ಟಿಯಿಂದ ತಮ್ಮ ಆಸ್ತಿ ಮತ್ತು ದಾಯಿಕ ಪಟ್ಟಿಯನ್ನು ಸಾರ್ವಜನಿಕವಾಗಿ ಪ್ರಕಟಿಸಲು ಕಾಯ್ದೆ ತರಬೇಕಾಗಿ ಮನವಿ ಮಾಡಿದ್ದೆ. ನನ್ನ ಮನವಿಗೆ ಅನುಗುಣವಾಗಿ ಸರ್ಕಾರವು 5-8-2021ರಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಪತ್ರ ಬರೆದು ಕಾಯ್ದೆ ತಿದ್ದುಪಡಿಗೆ ಮುಂದಿನ ಕ್ರಮ ಕೈಗೊಳ್ಳಲು ಸೂಚನೆ ನೀಡಿತ್ತು.

- Advertisement - 

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ 27-10-2021ರಲ್ಲಿ ಕರ್ನಾಟಕ ಲೋಕಾಯುಕ್ತದ ನಿಬಂಧಕರಿಗೆ ನಾನು ಬರೆದ ಪತ್ರದ ಮೇಲೆ ಕಾಯ್ದೆ ತಿದ್ದುಪಡಿಗೆ ಅಭಿಪ್ರಾಯ ನೀಡುವಂತೆ ಕೇಳಿದ್ದಾರೆ. ಆದರೆ ಲೋಕಾಯುಕ್ತ ನಿಬಂಧಕರಿಂದ ಆ ಪತ್ರಕ್ಕೆ ಉತ್ತರವಾಗಲಿ ಅಥವಾ ಮಾಹಿತಿಯಾಗಲಿ ನೀಡಿರುವ ಬಗ್ಗೆ ಇದುವರೆಗೆ ಯಾವುದೇ ಮಾಹಿತಿಯನ್ನು ಸಾರ್ವಜನಿಕವಾಗಿ ನೀಡಿಲ್ಲ ಎಂದು ಪತ್ರದಲ್ಲಿ ರಮೇಶ್​ ಬಾಬು ತಿಳಿಸಿದ್ದಾರೆ.

ಸಾರ್ವಜನಿಕ ಹಿತದೃಷ್ಟಿಯಿಂದ ಲೋಕಾಯುಕ್ತ ಸಂಸ್ಥೆ ಪಾರದರ್ಶಕವಾಗಿ ನಡೆದುಕೊಳ್ಳಬೇಕಾಗಿರುವುದು ಪ್ರಮುಖವಾಗಿದೆ. ಕರ್ನಾಟಕದಲ್ಲಿ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಸ್ವಯಂ ಪ್ರೇರಿತವಾಗಿ ತಮ್ಮ ಆಸ್ತಿ ವಿವರಗಳನ್ನು ಪ್ರಕಟಿಸುತ್ತಿದ್ದಾರೆ. ಅದಕ್ಕೆ ಪೂರಕವಾಗಿ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ತಂದು ಲೋಕಾಯುಕ್ತರು/ ಉಪಲೋಕಾಯುಕ್ತರು ತಮ್ಮ ಆಸ್ತಿಯ ವಿವರಗಳನ್ನು ಬಹಿರಂಗಗೊಳಿಸುವಂತೆ ತಿದ್ದುಪಡಿ ಮಾಡುವುದು ಅನಿವಾರ್ಯವಾಗಿದೆ. ಕರ್ನಾಟಕ ಲೋಕಾಯುಕ್ತ ಸಂಸ್ಥೆಯು 2017-18ನೇ ಸಾಲಿನಿಂದ 2021-22ರ ವರೆಗೆ ವಾರ್ಷಿಕ ವರದಿಗಳನ್ನು ವಿಧಾನಮಂಡಲದಲ್ಲಿ ಮಂಡಿಸಿಲ್ಲ ಎಂದು ಅವರು ತಿಳಿಸಿದ್ದಾರೆ.

ವರದಿ ಮಂಡಿಸದ ಲೋಕಾಯುಕ್ತ:
ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ತನ್ನ
4 ವರ್ಷದ ವಾರ್ಷಿಕ ವರದಿಗಳನ್ನು ಮಂಡಿಸಿಲ್ಲದಿರುವುದು ತಿಳಿದುಬರುತ್ತದೆ. ಪ್ರತಿ ಸಂಸ್ಥೆಯು ತನ್ನ ವಾರ್ಷಿಕ ವರದಿಗಳನ್ನು ಮತ್ತು ಲೆಕ್ಕಪತ್ರಗಳನ್ನು ವಿಧಾನಮಂಡಲದಲ್ಲಿ ಮಂಡಿಸಬೇಕಾಗಿದೆ. ಆದರೆ ಕರ್ನಾಟಕ ಲೋಕಾಯುಕ್ತ ಸಂಸ್ಥೆಯು ತನ್ನ ವರದಿಗಳನ್ನು ಮಂಡಿಸದಿರುವುದು ವಿಧಾನಪರಿಷತ್​​ ವರದಿಯಲ್ಲಿ ಕಂಡುಂದಿದೆ. ತಾವು ದಯಮಾಡಿ ಕರ್ನಾಟಕ ಲೋಕಾಯುಕ್ತ ಸಂಸ್ಥೆಯು ತನ್ನ ವಾರ್ಷಿಕ ವರದಿಯನ್ನು ಅನುಮೋದನೆಗಾಗಿ ನಿಯಮಾನುಸಾರ ವಿಧಾನಮಂಡಲದಲ್ಲಿ ಮಂಡಿಸಲು ಕ್ರಮ ಕೈಗೊಳ್ಳುವಂತೆ ಸಚಿವ ಹೆಚ್.ಕೆ. ಪಾಟೀಲ್​ಗೆ ಕೋರಿ ಪತ್ರ ಬರೆದಿದ್ದಾರೆ.

ಲೋಕಾಯುಕ್ತ ಸಂಸ್ಥೆಯಲ್ಲಿ ಪಾರದರ್ಶಕ ಆಡಳಿತದ ಕಾರಣಕ್ಕಾಗಿ ಕಾರ್ಯನಿರ್ವಹಿಸುವ ನ್ಯಾಯಮೂರ್ತಿಗಳು ಮತ್ತು ಸರ್ಕಾರಿ ನೌಕರರು ತಮ್ಮ ಆಸ್ತಿಯ ವಿವರಗಳನ್ನು ಬಹಿರಂಗಗೊಳಿಸುವುದು ಒಂದು ಆರೋಗ್ಯಕರ ಮತ್ತು ಅವಶ್ಯಕವಾದ ಕ್ರಮವಾಗಿದೆ.

ಈ ಹಿನ್ನೆಲೆಯಲ್ಲಿ ಬರುವ ಅಧಿವೇಶನದಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಕಾಯ್ದೆಗೆ ತಿದ್ದುಪಡಿ ತಂದು ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಇರುವ ಲೋಕಾಯುಕ್ತರು, ಉಪಲೋಕಾಯುಕ್ತರು ಮತ್ತು ನೌಕರರು ಪ್ರತಿ ವಾರ್ಷಿಕ ವರ್ಷದಲ್ಲಿ ತಮ್ಮ ಆಸ್ತಿಗಳನ್ನು ಬಹಿರಂಗಗೊಳಿಸಲು ಕಾಯ್ದೆಗೆ ತಿದ್ದುಪಡಿ ತರಬೇಕೆಂದು ರಮೇಶ್​ ಬಾಬು ಪತ್ರದಲ್ಲಿ ಮನವಿ ಮಾಡಿದ್ದಾರೆ.

 

Share This Article
error: Content is protected !!
";