ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟದಲ್ಲಿ ಹಲವು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಆ ಪೈಕಿ ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ಚಟುವಟಿಕೆಗಳನ್ನು ಕಾನೂನುಬದ್ದವಾಗಿ ನಡೆಸಲು ಅನುಮತಿ ನೀಡಲು ಮಾರ್ಗಸೂಚಿ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಸಚಿವ ಪ್ರಿಯಾಂಕ್ ಖರ್ಗೆ ಸರ್ಕಾರಿ ಸ್ಥಳಗಳು, ಶಾಲೆಗಳು ಹಾಗೂ ಸರ್ಕಾರದ ಅನುದಾನಿತ ಶಾಲೆಗಳು ಮತ್ತು ಮೈದಾನಗಳು, ಉದ್ಯಾನವನಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು, ಪುರಾತತ್ವ ಇಲಾಖೆಯ ಸ್ಥಳಗಳು ಸೇರಿದಂತೆ ಯಾವುದೇ ಸರ್ಕಾರಿ ಸ್ಥಳಗಳಲ್ಲಿ RSS ಸಂಘಟನೆಯು ಶಾಖೆ, ಸಾಂಘಿಕ ಅಥವಾ ಬೈಠಕ್ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿರ್ಬಂಧ ಹೇರಬೇಕೆಂದು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ಇದೀಗ ಸಚಿವ ಸಂಪುಟ ಸಭೆ ಸಾರ್ವಜನಿಕ ಸ್ಥಳ, ಸರ್ಕಾರಿ ಶಾಲೆಗಳ ಮೈದಾನಗಳ ಸದ್ಬಳಕೆ ಮಾಡುವ ಸಂಬಂಧ ಸ್ಪಷ್ಟ ನೀತಿ ನಿಯಮಗಳೊಳಗೊಂಡ ವಿಸ್ತೃತ ಸರ್ಕಾರಿ ಆದೇಶ ಹೊರಡಿಸಲು ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಹೆಚ್. ಕೆ. ಪಾಟೀಲ್ ತಿಳಿಸಿದರು.
ಸರ್ಕಾರದ / ಸರ್ಕಾರಿ ಸ್ವಾಮ್ಯದ / ನಿಗಮ/ಮಂಡಳಿಗಳ, ಶಾಲಾ-ಕಾಲೇಜುಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಉದ್ಯಾನವನಗಳು, ಆಟದ ಮೈದಾನಗಳು, ಸಾರ್ವಜನಿಕ ರಸ್ತೆಗಳು, ತೆರೆದ ಸ್ಥಳಗಳು ಮತ್ತು ಇತರೆ ಆಸ್ತಿ / ಜಾಗಗಳು ನಾಗರೀಕರ ಸದ್ಬಳಕೆಗೆ ನಿರ್ದಿಷ್ಟಪಡಿಸಲಾಗಿರುತ್ತದೆ. ಇವುಗಳನ್ನು ಸಾರ್ವಜನಿಕರು ಬಳಸಲು ಯಾವುದೇ ಅಡಚಣೆಗಳು, ಬೆದರಿಕೆಗಳು ಉದ್ಭವಿಸದಂತೆ ಕ್ರಮವಹಿಸುವುದು ಅತ್ಯಗತ್ಯವಾಗಿರುತ್ತದೆ. ಹಾಗೆಯೇ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳು, ಸಾರ್ವಜನಿಕರ ಸಾರ್ವತ್ರಿಕ ಅಸಮಾಧಾನಗಳನ್ನು ನಿವಾರಿಸುವ ದೃಷ್ಟಿಯಿಂದ ಕಾರ್ಯನೀತಿ ಸಂಬಂಧ ವಿಸ್ತೃತ ಸರ್ಕಾರಿ ಆದೇಶ ಹೊರಡಿಸಲು ಸಚಿವ ಸಂಪುಟ ತೀರ್ಮಾನಿಸಿದೆ.
ರಾಜ್ಯದಲ್ಲಿ ಹಲವಾರು ಖಾಸಗಿ ಸಂಸ್ಥೆಗಳು, ಸಂಘಗಳು ತಮ್ಮ ಚಟುವಟಿಕೆಗಳು, ಪ್ರಚಾರ, ತರಬೇತಿ, ಉತ್ಸವಗಳು ಹಾಗೂ ಸದಸ್ಯರ ಮತ್ತು ಬೆಂಬಲಿಗರ ಸಭೆಗಳು ನಡೆಸುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳು / ಸರ್ಕಾರದ ಆಸ್ತಿಗಳು, ಜಮೀನುಗಳು, ಆಟದ ಮೈದಾನಗಳು, ಸಾರ್ವಜನಿಕ ರಸ್ತೆಗಳು ಇತ್ಯಾದಿಗಳನ್ನು ಸರ್ಕಾರ ಅಥವಾ ಸಂಬಂಧಿತ ಇಲಾಖೆಯಿಂದ ಮುಂಚಿತವಾಗಿ ಅನುಮತಿ ಪಡೆಯದೆ, ಅನೇಕ ಸಂದರ್ಭಗಳಲ್ಲಿ ಮಾಹಿತಿ ನೀಡದೆ ಬಳಸಿಕೊಳ್ಳುತ್ತಿರುವುದು ಕಂಡುಬಂದಿದೆ.
ಇಂತಹ ಕ್ರಿಯೆಗಳು ಅಕ್ರಮ ಪ್ರವೇಶ ಎಂದು ಪರಿಗಣಿಸಲ್ಪಡುತ್ತವೆ ಮತ್ತು ಸಾರ್ವಜನಿಕ ಸುರಕ್ಷತೆಗೆ ಗಂಭೀರ ಬೆದರಿಕೆಯನ್ನು ಉಂಟುಮಾಡುತ್ತವೆ. ಈ ಕಾರಣದಿಂದ ಸರ್ಕಾರದ ಯಾವುದೇ ಆಸ್ತಿ / ಸ್ಥಳದ ಬಳಕೆಯನ್ನು ಸಾರ್ವಜನಿಕ ಹಿತದೃಷ್ಟಿಯಿಂದ ನಿಯಂತ್ರಿಸುವ ಸಲುವಾಗಿ ಯಾವುದೇ ಸಂಘಟನೆ, ಸಂಸ್ಥೆ, ಸಂಘವು ಆಯಾ ಸಾರ್ವಜನಿಕ ಆಸ್ತಿ/ಸ್ಥಳದ ಮಾಲೀಕತ್ವ ಹೊಂದಿದ ಸಕ್ಷಮ ಪ್ರಾಧಿಕಾರಗಳಿಂದ ಪೂರ್ವಾನುಮತಿ ಪಡೆದು ಬಳಸಿಕೊಳ್ಳಲು ಅನುಮತಿ ನೀಡುವುದು ಅಗತ್ಯವಾಗಿದೆ.
ಯಾವುದೇ ಹಾಗೂ ಚಟುವಟಿಕೆಗಳು ಸಾರ್ವಜನಿಕರಿಗೆ ಅನಾನುಕೂಲವಾಗುವುದಾದಲ್ಲಿ ಸಂಬಂಧಿಸಿದ ಸಂಸ್ಥೆಗಳ ಆವರಣ/ಜಾಗದಲ್ಲಿ ನಡೆಯುವ ಚಟುವಟಿಕೆಗಳಿಂದ ಆ ಸಂಸ್ಥೆಗಳ ಮೂಲ ಧೇಯಕ್ಕೆ ಧಕ್ಕೆ ಉಂಟಾಗುವುದಾದಲ್ಲಿ ಅಂತಹ ಚಟುವಟಿಕೆಗಳ ಆಯೋಜನೆಗೆ ಸಕ್ಷಮ ಪ್ರಾಧಿಕಾರಗಳು ಅನುಮತಿಯನ್ನು ನಿರಾಕರಿಸಬೇಕು.ಯಾವೆಲ್ಲಾ ಸಾರ್ವಜನಿಕ ಸ್ಥಳಗಳು-ಅನುಮತಿ ಯಾರಿಂದ?: ಸರ್ಕಾರದ/ಸರ್ಕಾರಿ ಸ್ವಾಮ್ಯದ ಶಾಲಾ-ಕಾಲೇಜುಗಳು, ಅನುದಾನಿತ ಶೈಕ್ಷಣಿಕ ಸಂಸ್ಥೆಗಳ ಆವರಣದ ಬಳಕೆಗೆ ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಅನುಮತಿ ಅಗತ್ಯ.
ಉದ್ಯಾನವನಗಳು, ಆಟದ ಮೈದಾನಗಳು, ಇತರೆ ತೆರೆದ ಸ್ಥಳಗಳ ಬಳಕೆಗೆ ನಗರಾಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅನುಮತಿ ಅಗತ್ಯ.
ಸಾರ್ವಜನಿಕ ರಸ್ತೆಗಳು, ಸರ್ಕಾರದ ಇತರೆ ಆಸ್ತಿ/ ಸ್ಥಳಗಳು- ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು/ ಪೊಲೀಸ್ ಅಧೀಕ್ಷಕರ ಅನುಮತಿ ಅಗತ್ಯ.
ಸಕ್ಷಮ ಪ್ರಾಧಿಕಾರಗಳು ಇಂತಹ ಅನುಮತಿ ನೀಡುವ ಸಂದರ್ಭದಲ್ಲಿ ಸಂವಿಧಾನ ಬದ್ಧವಾದ ನಾಗರಿಕರ ಹಕ್ಕುಗಳಿಗೆ ಚ್ಯುತಿ ಆಗದಂತೆ ಎಚ್ಚರಿಕೆ ವಹಿಸಿ ಆಯಾ ಇಲಾಖೆಗಳು ಸೂಕ್ತ ವಿವರವಾದ ಮಾರ್ಗಸೂಚಿ ಹೊರಡಿಸಲು ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದರು.

