ಚಂದ್ರವಳ್ಳಿ ನ್ಯೂಸ್, ಧಾರವಾಡ /ಬೆಂಗಳೂರು:
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಧಾರವಾಡ ಹಾಗೂ ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಯೋಗದಲ್ಲಿ ಎರಡು ದಿನಗಳ ರಾಜ್ಯ ಮಟ್ಟದ “ಮೀಡಿಯಾ ಫೆಸ್ಟ್-2026″ ಅನ್ನು ಮಾರ್ಚ್ 9 ಮತ್ತು 10 ರಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಕನಕ ಅಧ್ಯಯನ ಪೀಠದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಮಾರ್ಚ್ 09 ರಂದು ಬೆಳಿಗ್ಗೆ 10.30ಕ್ಕೆ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎ. ಎಂ. ಖಾನ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಹುಬ್ಬಳ್ಳಿಯ ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಅಧ್ಯಕ್ಷ ಪ್ರಕಾಶ್ ನೂಲ್ವಿ ಮತ್ತು ಬೆಳಗಾವಿಯ ನ್ಯೂಸ್ ಫಸ್ಟ್ ವರದಿಗಾರ ಶ್ರೀಕಾಂತ ಕುಬಕಡ್ಡಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ವಹಿಸಲಿದ್ದಾರೆ.
ವಿಚಾರಸಂಕಿರಣ ಮತ್ತು ಗೋಷ್ಠಿಗಳು:
ಮಾರ್ಚ್ 10 ರಂದು ಪತ್ರಿಕೋದ್ಯಮದ ಪ್ರಸಕ್ತ ವಿದ್ಯಮಾನಗಳ ಕುರಿತು ವಿಶೇಷ ವಿಚಾರಸಂಕಿರಣಗಳು ಜರುಗಲಿವೆ.
ಅಂದು ಬೆಳಿಗ್ಗೆ 10.30ಕ್ಕೆ “ಪತ್ರಿಕೋದ್ಯಮದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ವಿಷಯಗಳ ವಿಶ್ವಾಸಾರ್ಹತೆ” ಕುರಿತು ಮಾಧ್ಯಮ ತಜ್ಞರಾದ ಡಾ. ಎ. ಎಸ್. ಬಾಲಸುಬ್ರಮಣ್ಯ ಅವರು ವಿಷಯ ಮಂಡಿಸಲಿದ್ದಾರೆ.
ಬೆಳಿಗ್ಗೆ 11.30ಕ್ಕೆ “ಪತ್ರಿಕೋದ್ಯಮ ಮತ್ತು ನವ ತಂತ್ರಜ್ಞಾನ ಬಳಕೆ” ಕುರಿತು ಹಿರಿಯ ಪತ್ರಕರ್ತ ಸುಭಾಷ್ ಹೂಗಾರ ಅವರು ವಿಷಯ ಮಂಡಿಸಲಿದ್ದಾರೆ.
ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳು:
ಉತ್ಸವದ ಅಂಗವಾಗಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗಾಗಿ ಸ್ಕ್ರಿಪ್ಟ್ ಬರವಣಿಗೆ, ಕಿರು ಸಂದರ್ಶನ, ವಾಕ್ ಮತ್ತು ಪಿಟುಸಿ (ಪಿಟಿಸಿ), ರೇಡಿಯೋ ಜಾಕಿ, ರೀಲ್ಸ್ ನಿರ್ಮಾಣ ಹಾಗೂ ಮೊಬೈಲ್ ಜರ್ನಲಿಸಂ (ಮೊಜೋ) ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಸ್ಪರ್ಧೆಗಳ ವಿಜೇತರಿಗೆ ನಗದು ಬಹುಮಾನ ಹಾಗೂ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಪ್ರಮಾಣಪತ್ರ ನೀಡಲಾಗುವುದು.
ಮಾರ್ಚ್ 10 ರಂದು ಮಧ್ಯಾಹ್ನ 2.30ಕ್ಕೆ ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಶ್ವವಿದ್ಯಾಲಯದ ಕುಲಸಚಿವರು (ಆಡಳಿತ) ಡಾ. ಶಂಕರೆಪ್ಪ ವಣಿಕ್ಯಾಳ ಅವರು ಪಾಲ್ಗೊಳ್ಳಲಿದ್ದಾರೆ. ಅತಿಥಿಗಳಾಗಿ ಹುಬ್ಬಳ್ಳಿಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು ಹಾಗೂ ವಿಜಯಕರ್ನಾಟಕ ಸ್ಥಾನಿಕ ಸಂಪಾದಕರಾದ ಮತ್ತು ಬಂಡು ಕುಲಕರ್ಣಿ, ಹುಬ್ಬಳ್ಳಿಯ ಕನ್ನಡಪ್ರಭ ಸ್ಥಾನಿಕ ಸಂಪಾದಕರಾದ ಮಲ್ಲಿಕಾರ್ಜುನ ಸಿದ್ದಣ್ಣವರ ಮತ್ತು ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕ ಪ್ರೊ. ಜೆ. ಎಂ. ಚಂದುನವರ,
ಬೆಳಗಾವಿ ಮತ್ತು ಬೆಂಗಳೂರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಗುರುನಾಥ ಕಡಬೂರ ಭಾಗವಹಿಸಲಿದ್ದಾರೆ. ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ. ಸಂಜಯಕುಮಾರ ಮಾಲಗತ್ತಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಸಮಾರಂಭಕ್ಕೆ ಪತ್ರಿಕೋದ್ಯಮ ಆಸಕ್ತರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ವಾರ್ತಾ ಇಲಾಖೆಯ ಉಪ ನಿರ್ದೇಶಕರಾದ ಗುರುನಾಥ ಕಡಬೂರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

