ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಬೆಂಗಳೂರು ವ್ಯಾಪ್ತಿಯಲ್ಲಿ ಗ್ರಾಹಕರಿಗೆ ಮೋಸ ಮಾಡಿ ಮಾರಾಟ ಮಾಡುತ್ತಿದ್ದ ಕಂಪೆನಿಗಳ ವಿರುದ್ಧ ಕರ್ನಾಟಕ ರಾಜ್ಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಹಾಗೂ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಗಳಲ್ಲಿ ಗೃಹೋಪಯೋಗಿ ವಸ್ತುಗಳಿಗೆ ಸಂಬಂಧಿಸಿದಂತೆ 2334 ಪ್ರಕರಣಗಳು ದಾಖಲು ಮಾಡಲಾಗಿದ್ದು, 2250 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆ ಸಚಿವರಾದ ಕೆ. ಹೆಚ್. ಮುನಿಯಪ್ಪ ತಿಳಿಸಿದರು.
ವಿಧಾನ ಪರಿಷತ್ ನಲ್ಲಿಂದು ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಮಾತನಾಡಿದ ಅವರು, ಗ್ರಾಹಕರು ಯಾವುದೇ ವಸ್ತುವನ್ನು ಖರೀದಿಸುವ ಅಥವಾ ಯಾವುದೇ, ಸೇವೆಯನ್ನು ಪಡೆಯುವಾಗ ವಂಚನೆಗೆ ಒಳಗಾದಲ್ಲಿ ಗ್ರಾಹಕ ಸಂರಕ್ಷಣಾ ಕಾಯ್ದೆ 2019ರಡಿ ಪ್ರಕರಣವನ್ನು ದಾಖಲಿಸಿ ಪರಿಹಾರವನ್ನು ಪಡೆಯಲು ಅವಕಾಶ ಕಲ್ಪಿಸಲಾಗಿರುತ್ತದೆ ಎಂದು ತಿಳಿಸಿದರು.
ಹೋಟೆಲ್ಗಳಲ್ಲಿನ ಪ್ಯಾಕೆಜ್ ತಿಂಡಿ ತಿನಿಸುಗಳ/ವಾಟರ್ ಬಾಟಲ್ಗಳ ಮೇಲಿನ ಸರ್ಕಾರ ಘೋಷಣೆಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ಪೊಟ್ಟಣ ಸಾಮಾಗ್ರಿ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಹೋಟೆಲ್ಗಳನ್ನು ಕಾನೂನು ಮಾಪನಶಾಸ್ತ್ರ (ಪೊಟ್ಟಣ ಸಾಮಾಗ್ರಿ) ನಿಯಮ-2011ರಡಿ ತಪಾಸಣೆ ನಡೆಸಿ ನಿಯಮಾನುಸಾರ ಅಭಿಸಂಧಾನ ಶುಲ್ಕವನ್ನು ವಿಧಿಸಲಾಗುವುದು ಹಾಗೂ ಅಭಿಸಂಧಾನಕ್ಕೆ ಸಹಮತಿಸದ ಹೋಟೆಲ್ಗಳ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣವನ್ನು ದಾಖಲಿಸಲಾಗುತ್ತದೆ ಎಂದು ತಿಳಿಸಿದರು.

