ಶಾಸಕ ಬಿ.ಆರ್.ಪಾಟೀಲ್ ಮಾಡಿರುವ ಆರೋಪ ಸುಳ್ಳು- ಡಿಸಿಎಂ

News Desk

ಚಂದ್ರವಳ್ಳಿ ನ್ಯೂಸ್, ರಾಮನಗರ:
ಶಾಸಕ ಬಿ.ಆರ್.ಪಾಟೀಲ್ ಅವರು ಮಾಡಿರುವ ಹಣ ಪಡೆದು ಮನೆ ನೀಡಿದ್ದಾರೆ ಎಂಬ ಆರೋಪ ಸುಳ್ಳು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್​ ಹೇಳಿದರು. ಕನಕಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು
, ಯಾರೋ ಒಬ್ಬ ಹೇಳಿದರೆ ಇದೆಲ್ಲವೂ ಆಗುತ್ತದೆಯೇ?. ನಾನು ಅಥವಾ ನೀವು ಬಂದು ಗ್ರಾಮ ಸಭೆಯಲ್ಲಿ ಮನೆ ಕೇಳಿದ ತಕ್ಷಣ ಕೊಡಲು ಆಗುತ್ತದೆಯೇ? ಎಂದು ಡಿ.ಕೆ ಶಿವಕುಮಾರ್ ಪ್ರಶ್ನಿಸಿದರು.

ಮನೆ ನೀಡಲು ತೀರ್ಮಾನ ಮಾಡುವವರು ಗ್ರಾಮ ಪಂಚಾಯಿತಿ, ಮುನಿಸಿಪಾಲಿಟಿ ಸೇರಿದಂತೆ ಎಲ್ಲೆಲ್ಲಿ ಮನೆ ನಿಡಬೇಕೋ ಆಯಾ ಸ್ಥಳೀಯ ಸಂಸ್ಥೆಗಳು ತೀರ್ಮಾನ ಮಾಡುತ್ತವೆ. ನಾವು ತೀರ್ಮಾನ ಮಾಡಲು ಆಗುತ್ತದೆಯೇ?. ಬಿ.ಆರ್.ಪಾಟೀಲ್ ಅವರಿಗೆ ಪೂರ್ಣ ಮಾಹಿತಿ ತಿಳಿದಿದೆಯೋ ಇಲ್ಲವೊ ಗೊತ್ತಿಲ್ಲ. ಯಾವುದೇ ರೀತಿಯ ಅಕ್ರಮ ನಡೆದಿಲ್ಲ. ನಾನು ಅವರ ಬಳಿ ಮಾತನಾಡುತ್ತೇನೆ ಎಂದರು.

- Advertisement - 

ಇದಕ್ಕೂ ಮೊದಲು ಕನಕಪುರದ ಹಾರೋಹಳ್ಳಿಯ ಮರಳವಾಡಿಯಲ್ಲಿ ಸ್ಥಾಪನೆಯಾಗಿರುವ ನೂತನ ಕರಿಯಪ್ಪ ಕೃಷಿ ಮಹಾವಿದ್ಯಾಲಯದ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಕನಕಪುರ ರೂರಲ್ ಎಜುಕೇಷನ್​ ಸೊಸೈಟಿ ಉಳಿಸಿ, ಬೆಳೆಸುವುದು ನನ್ನ ಕೆಲಸ. ಜನಸಾಮಾನ್ಯರ ಮಕ್ಕಳಿಗಾಗಿ ಈ ಸಂಸ್ಥೆಯಿಂದ ಕೃಷಿ ಕಾಲೇಜು ನಿರ್ಮಾಣವಾಗಿದೆ. ಈ ಸಂಸ್ಥೆ ಬೆಂಗಳೂರು ದಕ್ಷಿಣ ಜಿಲ್ಲೆಯ ಹೆಮ್ಮೆ. ನನಗೂ ಹಾಗೂ ಸಂಸ್ಥೆಯ ಅಧ್ಯಕ್ಷ ಶ್ರೀಕಂಠು ಅವರಿಗೆ ಸಂಸ್ಥೆಯ ಜಾಗ ಎಲ್ಲಿ ಒತ್ತುವರಿಯಾಗುತ್ತದೆಯೋ ಎನ್ನುವ ಆಂತಕವಿತ್ತು. ಈಗ ಸದರಿ ಜಾಗದಲ್ಲಿ ಕೃಷಿ ಕಾಲೇಜು ಸ್ಥಾಪನೆಯಾಗುತ್ತಿರುವುದು ಸಮಾಧಾನ ತಂದಿದೆ ಎಂದು ತಿಳಿಸಿದರು.

ರೂರಲ್ ಎಜುಕೇಷನ್ ಸೊಸೈಟಿ ಅವರು ನನ್ನನ್ನು ಸರಿಯಾಗಿ ಉಪಯೋಗಿಸಿಕೊಳ್ಳುತ್ತಾ ಇರಲಿಲ್ಲ‌. ಈ ಹಿಂದೆ ಡಿ.ಲಿಂಗೇಗೌಡರು, ಚನ್ನಬಸವೇಗೌಡರ ಕಾಲದಿಂದಲೂ ಈ ಬಗ್ಗೆ ನಾನು ಹೇಳುತ್ತಾ ಬಂದಿದ್ದೇನೆ. ಚನ್ನಬಸವೇಗೌಡರ ಕಾಲದಲ್ಲಿಯೇ ನರ್ಸಿಂಗ್ ಕಾಲೇಜು ಮಂಜೂರು ಆಗಿದ್ದರು. ನನ್ನನ್ನು ಭೇಟಿ ಮಾಡಲು ಅವಮಾನ ಎಂದುಕೊಂಡು ಬಂದಿರಲಿಲ್ಲ ಎಂದು ಹೇಳಿದರು.

- Advertisement - 

ಬೆಂಗಳೂರು ‌ದಕ್ಷಿಣ ಜಿಲ್ಲೆ ಎಂದು ಹೆಸರು ಬದಲಾವಣೆ ‌ಕಾರಣಕ್ಕೆ ಏನೆಲ್ಲಾ ಬದಲಾವಣೆಯಾಗುತ್ತಿದೆ ಎಂಬುದು ಜನರಿಗೆ ಅರ್ಥವಾಗುತ್ತಿದೆ. ಕೆಲವೊಬ್ಬರು ಇದನ್ನು ಟೀಕೆ ಮಾಡುತ್ತಿದ್ದಾರೆ. ಅವರುಗಳಿಗೆ ನಾನು ಉತ್ತರ ನೀಡಲು ಹೋಗುವುದಿಲ್ಲ. ನಾವು ನಮಗೆ ಇರುವ ಹೆಸರನ್ನು ಉಳಿಸಿಕೊಂಡಿದ್ದೇವೆ. ಯಾರ ಹೆಸರನ್ನು ಕಿತ್ತುಕೊಂಡಿಲ್ಲ. ನಾನು ಈ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸದಸ್ಯನಾಗಿದ್ದೆ.

ಸುರೇಶ್ ಅವರು ಬೆಂಗಳೂರು ಹಾಲು ಒಕ್ಕೂಟದ ಸದಸ್ಯರಾಗಿದ್ದಾರೆ. ಸಂಸತ್ ಕ್ಷೇತ್ರವನ್ನು ಬೆಂಗಳೂರು ಗ್ರಾಮಾಂತರ ಎಂದು ಕರೆಯಲಾಗುತ್ತದೆ. ಎಲ್ಲಿಂದ ಎಲ್ಲಿಗೆ ಹೋದರು ಅಮೆರಿಕ ಎನ್ನುತ್ತಾರೆ. ಅದೇ ರೀತಿ ಇದೂ ಕೂಡ ಬೆಂಗಳೂರು ಎಂದರು.ಈಗಾಗಲೇ ರಾಮನಗರ ಕ್ಷೇತ್ರಕ್ಕೆ ಒಂದು ಸಾವಿರ ಕೋಟಿಯಷ್ಟು ಅನುದಾನ ನೀಡಲಾಗಿದೆ. ಇದರ ಬಗ್ಗೆ ಅವರು ಪಟ್ಟಿ ಬಿಡುಗಡೆ ಮಾಡುತ್ತಾರೆ. ಚನ್ನಪಟ್ಟಣ ಉಪಚುನಾವಣೆ ವೇಳೆ 300 ಕೋಟಿಗೂ ಹೆಚ್ಚು ಹಣ ಕ್ಷೇತ್ರಕ್ಕೆ ನೀಡಲಾಗಿದೆ. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯವನ್ನು ಪ್ರಾರಂಭ ಮಾಡಲಾಗಿದೆ.

ಹಾರೋಹಳ್ಳಿ, ಕೋಡಹಳ್ಳಿ, ಸಾತನೂರು, ಕನಕಪುರ ಮುಖ್ಯರಸ್ತೆಗಳನ್ನು ಈ ಹಿಂದೆ ಅಗಲ ಮಾಡಲಾಯಿತು. ಆ ಕಾರಣಕ್ಕೆ ಆಸ್ತಿ ಮೌಲ್ಯ ಹೆಚ್ಚಾಗಿದೆ. ರಸ್ತೆ ಅಗಲೀಕರಣ‌ ಮಾಡಿದಷ್ಟು ಆಸ್ತಿ ಮೌಲ್ಯ ಹೆಚ್ಚಾಗಲಿದೆ. ಪಿಜಿಆರ್ ಸಿಂಧ್ಯಾ ಅವರು ಮತಗಳು ಹೋಗುತ್ತವೆ ಎಂದು ರಸ್ತೆ ಅಗಲೀಕರಣ ಮಾಡಿರಲಿಲ್ಲ. 500 ಮತಗಳನ್ನು ನೋಡಲು ಹೋದರೆ 5 ಸಾವಿರ ಮತಗಳನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದರು.

 

Share This Article
error: Content is protected !!
";