ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಎನ್ಡಿಎ ಪರವಾಗಿ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿರುವ ಸಿಪಿ ರಾಧಾಕೃಷ್ಣನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಎನ್ಡಿಎ ಸಂಸದರ ಸಭೆಯಲ್ಲಿ ಸನ್ಮಾನಿಸಿ ಗೌರವಿಸಿದರು.
ಉಪರಾಷ್ಟ್ರಪತಿ ಚುನಾವಣೆಗೆ ನಾಮನಿರ್ದೇಶನ ಪ್ರಕ್ರಿಯೆ ನಡೆಯಲಿದೆ. ತನ್ಮಧ್ಯೆ, ವಿರೋಧ ಪಕ್ಷಗಳನ್ನು ಒಳಗೊಂಡ ಇಂಡಿ ಬಣವು ಎನ್ಡಿಎ ಆಯ್ಕೆ ಮಾಡಿದವರ ವಿರುದ್ಧ ಸ್ಪರ್ಧಿಸಲು ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸಿವೆ.
ವಿರೋಧ ಪಕ್ಷಗಳು ಮಧ್ಯಾಹ್ನದ ವೇಳೆಗೆ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದಾರೆ. ಎನ್ಡಿಎ ಘೋಷಣೆಗೆ ಪ್ರತಿಕ್ರಿಯೆಯಾಗಿ ವಿರೋಧ ಪಕ್ಷಗಳು ತನ್ನ ನಡೆಯನ್ನು ಕಾರ್ಯತಂತ್ರ ರೂಪಿಸುತ್ತಿವೆ.
ಭಾರತೀಯ ಜನತಾ ಪಕ್ಷದ ನೇತೃತ್ವದ ಎನ್ ಡಿಎ ಅಭ್ಯರ್ಥಿಯಾಗಿ ಮಹಾರಾಷ್ಟ್ರದ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಉಪರಾಷ್ಟ್ರಪತಿ ಹುದ್ದೆಗೆ ಘೋಷಿಸಿದೆ. ಈ ನಿರ್ಧಾರವನ್ನು ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ತೆಗೆದುಕೊಳ್ಳಲಾಗಿದ್ದು, ಪಕ್ಷದ ಅದ್ಯಕ್ಷ ಜೆಪಿ ನಡ್ಡಾ ಅವರು ಹೆಸರನ್ನು ಪ್ರಕಟಿಸಿದ್ದಾರೆ.
ತಮಿಳುನಾಡಿನ ತಿರುಪ್ಪೂರಿನಲ್ಲಿ 1957 ರ ಅಕ್ಟೋಬರ್ 20 ರಂದು ಜನಿಸಿದ ರಾಧಾಕೃಷ್ಣನ್ ಅವರ ರಾಜಕೀಯ ಜೀವನವು ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ಎಸ್ಎಸ್) ಮತ್ತು ಜನಸಂಘದೊಂದಿಗೆ ಆರಂಭವಾಯಿತು. ಸಿಪಿ ರಾಧಾಕೃಷ್ಣನ್ 70ರ ದಶಕದಲ್ಲಿ ಆರ್ಎಸ್ಎಸ್ನಲ್ಲಿ ಸಕ್ರಿಯರಾಗಿದ್ದರು ಎನ್ನಲಾಗಿದೆ.

