ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಬರುವ ಜನವರಿ 14 ರಂದು ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ದತೆಗಳನ್ನು ಕೈಗೊಳ್ಳುವಂತೆ ಪ್ರಭಾರ ಉಪವಿಭಾಗಧಿಕಾರಿ ಎನ್.ವೆಂಕಟೇಶ್ ನಾಯ್ಕ್ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಈ ಕುರಿತು ಜರುಗಿದ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಯಂತಿಯನ್ನು ಸುವ್ಯವಸ್ಥಿತ ಹಾಗೂ ಶಾಂತಿಯುತವಾಗಿ ಆಚರಿಸುವ ಸಲುವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮಗಳಿಗೆ ಸೂಕ್ತ ಭದ್ರತೆ ನೀಡಬೇಕು. ಮೆರವಣಿಗೆ ಸಾಗುವ ಹಾದಿಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಂಚಾರ ದಟ್ಟಣೆ ನಿಯಂತ್ರಿಸಬೇಕು. ಶಿಷ್ಟಾಚಾರದ ಪ್ರಕಾರ ಆಹ್ವಾನ ಪತ್ರಿಕೆ ಮುದ್ರಿಸಿ ಜನಪ್ರತಿನಿಧಿಗಳನ್ನು ಜಯಂತಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಯೇ ಜಯಂತಿ ಕಾರ್ಯಕ್ರಮ ನಡೆಯಲಿದ್ದು, ವೇದಿಕೆಯ ಮೇಲೆ ಸಿದ್ದರಾಮೇಶ್ವರ ಭಾವಚಿತ್ರವನ್ನು ಇರಿಸಿ, ಗಣ್ಯರಿಂದ ಪುಷ್ಪ ನಮನ ಸಲ್ಲಿಸಲು ಅವಕಾಶ ಕಲ್ಪಿಸಬೇಕು. ಯಾವುದೇ ಅಡಚಣೆಗಳು ಉಂಟಾಗದAತೆ ಸಮನ್ವಯದಿಂದ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಉಪವಿಭಾಗಧಿಕಾರಿ ವೆಂಕಟೇಶ್ ನಾಯ್ಕ್ ಹೇಳಿದರು.
ಜಯಂತಿ ಕಾರ್ಯಕ್ರಮದಲ್ಲಿ ಹಿರಿಯೂರಿನ ವಾಣಿ ಸಕ್ಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಪ್ರೋ.ಬಸವರಾಜ.ಟಿ.ಬೆಳಗಟ್ಟ ಅವರು ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜೀವನ, ಸಾಧನೆ, ಬೋಧನೆಗಳ ಕುರಿತು ಉಪನ್ಯಾಸ ನೀಡವರು. ಇದೇ ವೇಳೆ ಗೀತಗಾಯನ ಕಾರ್ಯಕ್ರಮವು ಇರಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಂ.ಗುರುನಾಥ್ ಸಭೆಯಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ತಹಶೀಲ್ದಾರ್ ಗೋವಿಂದರಾಜು, ಭೋವಿ ಸಮಾಜದ ಮುಖಂಡರುಗಳಾದ ತಿಪ್ಪೇಸ್ವಾಮಿ, ಲಕ್ಷ್ಮಣ್, ಗೀತಾ ಗೋವಿಂದರಾಜು, ಮಂಜುನಾಥ್, ಡಿ.ಸಿ.ಮೋಹನ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


