ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಅಪಾಯದಲ್ಲಿರುವ ಹಾಗೂ ಸಂಕಷ್ಟದಲ್ಲಿರುವ ಮಹಿಳೆಯರು ಹಾಗೂ ಹೆಣ್ಣು ಮಕ್ಕಳಿಗೆ ತಕ್ಷಣವೆ ನೆರವು ನೀಡಿ ರಕ್ಷಣೆ ಒದಗಿಸುವ ಅಕ್ಕ ಪಡೆಯ ವಿಶೇಷ ಪೊಲೀಸ್ ಗಸ್ತು ವಾಹನಕ್ಕೆ ಗುರುವಾರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಕಿರುಕುಳ, ಕೌಟುಂಬಿಕ ಹಿಂಸೆ, ಈವ್ ಟೀಸಿಂಗ್ ಅಥವಾ ಯಾವುದೇ ರೀತಿಯ ದೌರ್ಜನ್ಯ ಎದುರಿಸುತ್ತಿರುವ ಮಹಿಳೆಯರು ಮಹಿಳೆಯರು ಮತ್ತು ಹದಿ ಹರೆಯದ ಹೆಣ್ಣು ಮಕ್ಕಳು, ಬಾಲ ಕಾರ್ಮಿಕ ಪದ್ಧತಿ, ಭಿಕ್ಷಾಟನೆ, ಮಾದಕ ದ್ರವ್ಯ ಅಥವಾ ನಿಂದನೆಗೆ ಒಳಗಾದ ಮಕ್ಕಳು ಸಹಾಯವಾಣಿ ಸಂಖ್ಯೆಗಳಾದ 112 ಮತ್ತು 1098 ಕರೆ ಮಾಡಿದ ತಕ್ಷಣವೇ ಅಕ್ಕ ಪಡೆ ನೆರವಿಗೆ ಧಾವಿಸಲಿದೆ.
ಅಕ್ಕ ಪಡೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹೊಸ ವಾಹನ ಒದಗಿಸಲಾಗಿದೆ. ವಿಶೇಷವಾಗಿ ಮಹಿಳಾ ಪೊಲೀಸ್ ಹಾಗೂ ಗೃಹ ರಕ್ಷಕರು ಅಕ್ಕ ಪಡೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ನಗರ ಮತ್ತು ಹೊರವಲಯದ ಬಸ್ ನಿಲ್ದಾಣ, ಮಾರ್ಕೆಟ್, ದೇವಸ್ಥಾನ, ಉದ್ಯಾನಗಳು, ಶಾಲೆ-ಕಾಲೇಜು ಬಳಿ, ವಿದ್ಯಾರ್ಥಿನಿಯರ ಹಾಸ್ಟೆಲ್, ಜನನಿಬಿಡ ಪ್ರದೇಶ, ಸೂಕ್ಷö್ಮಪ್ರದೇಶಗಳಲ್ಲಿ ವಿಶೇಷ ವಾಹನ ಗಸ್ತು ತಿರುಗಲಿದೆ. ಇದರಿಂದ ಶಾಲೆ-ಕಾಲೇಜು ವಿದ್ಯಾರ್ಥಿನಿಯರು, ಮಹಿಳೆಯರ ಮಾನಸಿಕ ಸ್ಥೈರ್ಯ ಹೆಚ್ಚಲಿದೆ.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಶಿವಕಮಾರ್, ಮಹಿಳಾ ಮತ್ತು ಮಕ್ಕಳ ಉಪ ನಿರ್ದೇಶಕ ವಿಜಯಕಮಾರ್.ಕೆ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕೆ. ಪ್ರೇಮಮೂರ್ತಿ, ಜಿಲ್ಲಾ ಗೃಹ ರಕ್ಷಕ ದಳ ಜಿಲ್ಲಾ ಕಾಮಾಡೆಂಡ್ ಸಿ.ಕೆ.ಸಂಧ್ಯಾ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಗೃಹ ರಕ್ಷಕರು, ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.


