ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ನಾಯಕರಲ್ಲಿದ್ದ ಅಸಮಾಧಾನ ಕಮ್ಮಿಯಾಗುವ ಲಕ್ಷಣಗಳು ಕಂಡುಬರುತ್ತಿದ್ದು, ಸಚಿವ ಸ್ಥಾನ ಸಿಗದ ಕಾರಣಕ್ಕೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ತಮ್ಮ ನಿರ್ಧಾರದಿಂದ ವಾಪಸ್ ಆಗಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಜೊತೆಗಿನ ಸುದೀರ್ಘ ಮಾತುಕತೆಯ ನಂತರ ಅವರು ರಾಜೀನಾಮೆ ವಾಪಸ್ ಪಡೆಯಲು ನಿರ್ಧರಿಸಿದ್ದಾರೆ.
ಇತ್ತೀಚೆಗೆ ನಡೆದ ಸಂಪುಟ ವಿಸ್ತರಣೆಯಲ್ಲಿ 19 ನಾಯಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಯಶವಂತರಾಯಗೌಡ ಪಾಟೀಲ್ ಅವರಿಗೆ ಅವಕಾಶ ಸಿಗದಿದ್ದಕ್ಕೆ ತೀವ್ರ ಬೇಸರಗೊಂಡು ವಿಧಾನಸಭಾ ಸ್ಪೀಕರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದರು.
ವಿಷಯ ತಿಳಿಯುತ್ತಿದ್ದಂತೆ ಆಕ್ಷನ್ಗೆ ಇಳಿದ ಸಿಎಂ ಡಿ.ಕೆ. ಶಿವಕುಮಾರ್, ಶಾಸಕರಿಗೆ ಕರೆ ಮಾಡಿ ಮಾತುಕತೆ ನಡೆಸಿ, ಆತುರದ ನಿರ್ಧಾರ ಕೈಗೊಳ್ಳದಂತೆ ಮನವೊಲಿಸಿದರು.
ಸಿಎಂ ಭರವಸೆಯ ಹಿನ್ನೆಲೆಯಲ್ಲಿ ಪಾಟೀಲ್ ಅವರು ರಾಜೀನಾಮೆ ವಾಪಸ್ ಪಡೆಯುತ್ತಿರುವುದಾಗಿ ವಿಧಾನಸಭಾ ಕಾರ್ಯದರ್ಶಿಗೆ ಪತ್ರ ಮುಖೇನ ತಿಳಿಸಿದ್ದಾರೆ.
ಬಂಗಾರಪೇಟೆ ನಾರಾಯಣಸ್ವಾಮಿಗೂ ಹೈಕಮಾಂಡ್ ಸಲಹೆ:ಇನ್ನೊಂದೆಡೆ, ಸಚಿವ ಸ್ಥಾನ ಸಿಗದೆ ರಾಜೀನಾಮೆ ಎಚ್ಚರಿಕೆ ನೀಡಿದ್ದ ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ಅವರು ಬುಧವಾರ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಭೇಟಿಯ ಬಳಿಕ ಮಾತನಾಡಿದ ಅವರು, “ಅಧ್ಯಕ್ಷರ ಕರೆಯ ಮೇರೆಗೆ ಬಂದು ಅಹವಾಲು ತೋಡಿಕೊಂಡಿದ್ದೇನೆ. ಒಳಗಡೆ ನಡೆದ ಚರ್ಚೆಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ, ಆದರೆ ಯಾವುದೇ ದುಡುಕಿನ ನಿರ್ಧಾರ ಕೈಗೊಳ್ಳಬೇಡಿ ಎಂದು ಹರಿಪ್ರಸಾದ್ ಸಲಹೆ ನೀಡಿದ್ದಾರೆ” ಎಂದಿದ್ದಾರೆ.
ಸಂಪುಟ ವಿಚಾರದಲ್ಲಿ ಸತೀಶ್ ಜಾರಕಿಹೊಳಿ ಸ್ಪಷ್ಟನೆ:ಕಾಂಗ್ರೆಸ್ ಶಾಸಕರ ಅಸಮಾಧಾನದ ಕುರಿತು ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ, “ಹಲವು ಹಿರಿಯ ನಾಯಕರಿಗೆ ಸಂಪುಟದಲ್ಲಿ ಜಾಗ ಸಿಕ್ಕಿಲ್ಲ ಎಂಬುದು ನಿಜ. ಎಲ್ಲರಿಗೂ ಸಚಿವ ಸ್ಥಾನ ನೀಡಲು ಸಾಧ್ಯವಾಗದಿದ್ದರೂ ಅವರಿಗೆ ಸೂಕ್ತ ಗೌರವ ನೀಡುವ ಕೆಲಸ ನಡೆಯುತ್ತಿದೆ. ಹಿರಿಯರನ್ನು ಸಮಾಧಾನಪಡಿಸುವ ಪ್ರಯತ್ನ ಮುಂದುವರಿದಿದೆ” ಎಂದರು.
ಅಲ್ಲದೆ ಬಿ.ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಿದ್ದಕ್ಕೆ ಬಿಜೆಪಿ ವ್ಯಕ್ತಪಡಿಸುತ್ತಿರುವ ವಿರೋಧಕ್ಕೆ ತಿರುಗೇಟು ನೀಡಿದ ಅವರು, ಹೈಕಮಾಂಡ್ ಮಟ್ಟದಲ್ಲಿ ಕೂಲಂಕಷವಾಗಿ ಚರ್ಚಿಸಿದ ಬಳಿಕವೇ ಅವರಿಗೆ ಸ್ಥಾನ ನೀಡಲಾಗಿದೆ ಎಂದರು.
ಬಾಗಲಕೋಟೆ ನಾಯಕರ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ, “ಅದು ಊಹಾಪೋಹವೂ ಇರಬಹುದು, ಆಡಿಯೋವನ್ನು ಸಾಬೀತುಪಡಿಸಲು ಸಾಧ್ಯವಿಲ್ಲ” ಎಂದು ಸಮರ್ಥಿಸಿಕೊಂಡರು.
ಮಹಿಳೆಯರಿಗೆ ಇನ್ನೊಂದು ಸ್ಥಾನ:ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಕುರಿತು ಮಾತನಾಡಿದ ಜಾರಕಿಹೊಳಿ, “ಸಂಪುಟದಲ್ಲಿ ಪ್ರಸ್ತುತ ಒಂದು ಸ್ಥಾನ ಖಾಲಿ ಇದ್ದು, ಅದನ್ನು ಮಹಿಳಾ ಶಾಸಕರಿಗೆ ನೀಡಲಾಗುವುದು. ಇನ್ನು ಎರಡೇ ದಿನಗಳಲ್ಲಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆಗಮಿಸಲಿದ್ದು, ಎಲ್ಲ ನಾಯಕರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ” ಎಂದು ಮಾಹಿತಿ ನೀಡಿದರು.



