ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ರಾಜಕೀಯದಲ್ಲಿ ಕಳೆದ ಕೆಲವು ತಿಂಗಳುಗಳಿಂದ ತೀವ್ರ ಕುತೂಹಲ ಮೂಡಿಸಿದ್ದ ನಾಯಕತ್ವ ಬದಲಾವಣೆಯ ಚರ್ಚೆಗೆ ಕೊನೆಗೂ ತೆರೆ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅಧಿಕೃತವಾಗಿ ಘೋಷಿಸಿದ್ದು, ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರ ಚುಕ್ಕಾಣಿ ಹಿಡಿಯಲಿದ್ದಾರೆ.
ಭಾವುಕ ಕ್ಷಣಗಳಿಗೆ ಸಾಕ್ಷಿಯಾದ ‘ಬ್ರೇಕ್ ಫಾಸ್ಟ್ ಮೀಟಿಂಗ್:
ಗುರುವಾರ ಬೆಳಗ್ಗೆ ಸಚಿವರೊಂದಿಗೆ ಮುಖ್ಯಮಂತ್ರಿಗಳು ಹಮ್ಮಿಕೊಂಡಿದ್ದ ಸುಮಾರು ಎರಡು ಗಂಟೆಗಳ ಸುದೀರ್ಘ ಉಪಹಾರ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಹೊರಬಿದ್ದಿದೆ. ಸಭೆಗೆ ಆಗಮಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರಲ್ಲದೆ, ಇಬ್ಬರೂ ನಾಯಕರು ಪರಸ್ಪರ ಆಲಂಗಿಸಿಕೊಂಡಿದ್ದು ಸಭೆಯಲ್ಲಿದ್ದವರ ಗಮನ ಸೆಳೆಯಿತು.
ಗುರುವಾರ ಮಧ್ಯಾಹ್ನ 3ಕ್ಕೆ ರಾಜೀನಾಮೆ ಸಲ್ಲಿಕೆ:
ಸಭೆಯ ಬಳಿಕ ಮಾತನಾಡಿದ ಸಿದ್ದರಾಮಯ್ಯ ಅವರು, ಇಂದು ಮಧ್ಯಾಹ್ನ 3 ಗಂಟೆಗೆ ಲೋಕಭವನಕ್ಕೆ ತೆರಳಿ ಅಧಿಕೃತವಾಗಿ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದರು. ಒಂದು ವೇಳೆ ರಾಜ್ಯಪಾಲರು ಲಭ್ಯವಿಲ್ಲದಿದ್ದರೆ, ಅವರ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಹಸ್ತಾಂತರಿಸುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.
ಭಾವುಕರಾದ ಸಿದ್ದರಾಮಯ್ಯ:
"ನನ್ನ ಅಧಿಕಾರಾವಧಿಯಲ್ಲಿ ಮಾಡಿರುವ ಕೆಲಸಗಳ ಬಗ್ಗೆ ನನಗೆ ಸಂಪೂರ್ಣ ತೃಪ್ತಿಯಿದೆ. ಘೋಷಿಸಿದ ಎಲ್ಲಾ ಯೋಜನೆಗಳನ್ನು ಯಶಸ್ವಿಯಾಗಿ ಜಾರಿ ಮಾಡಿದ್ದೇವೆ. ಮುಂದೆಯೂ ಜನರಿಗೆ ಒಳ್ಳೆಯ ಯೋಜನೆಗಳನ್ನು ತಲುಪಿಸುವ ಕೆಲಸ ಮುಂದುವರಿಯಲಿ. ಹಾಗೆಯೇ ವಿರೋಧ ಪಕ್ಷವಾದ ಬಿಜೆಪಿಯ ತಂತ್ರಗಳ ಬಗ್ಗೆ ಸದಾ ಜಾಗರೂಕರಾಗಿರಿ."
ಎಲ್ಲರ ಸಹಕಾರ ಕೋರಿದ ಡಿ.ಕೆ. ಶಿವಕುಮಾರ್:
ಮುಂದಿನ ಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿಕೊಳ್ಳಲಿರುವ ಡಿ.ಕೆ. ಶಿವಕುಮಾರ್ ಅವರು, ಸಿದ್ದರಾಮಯ್ಯ ಅವರ ಆಡಳಿತ ವೈಖರಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು. "ನಾನು ಪಕ್ಷದ ಅಧ್ಯಕ್ಷನಾಗಿ ಇಷ್ಟರಮಟ್ಟಿಗೆ ಬೆಳೆಯಲು ನಿಮ್ಮೆಲ್ಲರ ಸಹಕಾರ ಕಾರಣ. ಮುಂದಿನ ದಿನಗಳಲ್ಲೂ ಇದೇ ರೀತಿಯ ಬೆಂಬಲ ಮತ್ತು ಸಹಕಾರ ನನ್ನೊಂದಿಗಿರಲಿ" ಎಂದು ಸಚಿವ ಸಂಪುಟದ ಸಹೋದ್ಯೋಗಿಗಳಲ್ಲಿ ಮನವಿ ಮಾಡಿದರು.
‘ಒಗ್ಗಟ್ಟೇ ನಮ್ಮ ಶಕ್ತಿ’: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್
ನಾಯಕತ್ವ ಬದಲಾವಣೆಯ ಈ ಮಹತ್ವದ ಘಟನೆಯ ಬೆನ್ನಲ್ಲೇ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ಪರಸ್ಪರ ಆಲಂಗಿಸಿಕೊಂಡಿರುವ ಅಪರೂಪದ ಚಿತ್ರಗಳನ್ನು ಕಾಂಗ್ರೆಸ್ ತನ್ನ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. "ಅಂದು, ಇಂದು, ಎಂದೆಂದೂ... ಒಗ್ಗಟ್ಟೇ ನಮ್ಮ ಶಕ್ತಿ! ಎಂದೆಂದಿಗೂ ಜನಸೇವೆಯೇ ನಮ್ಮ ಬದ್ಧತೆ" ಎಂಬ ಶೀರ್ಷಿಕೆಯಡಿ ಹಂಚಿಕೊಳ್ಳಲಾದ ಈ ಪೋಸ್ಟ್ ಈಗ ರಾಜಕೀಯ ವಲಯದಲ್ಲಿ ಭಾರಿ ವೈರಲ್ ಆಗುತ್ತಿದ್ದು, ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ ಎಂಬ ಸಂದೇಶ ರವಾನಿಸಲು ಕಾಂಗ್ರೆಸ್ ಯಶಸ್ವಿಯಾಗಿದೆ.



